*ಒಂದೆಡೆ ಹೀಟ್ ವೇವ್ ಎಚ್ಚರಿಕೆ: ಕೆಲ ಜಿಲ್ಲೆಗಳಲ್ಲಿ ಆಲಿಕಲ್ಲು ಮಳೆ ಮುನ್ಸೂಚನೆ*

ಪ್ರಗತಿವಾಹಿನಿ ಸುದ್ದಿ: ರಾಜ್ಯದಲ್ಲಿ ಬಿಸಿಲ ಝಳ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಇಂದು ಹೀಟ್ ವೇವ್ ಬೀಸಲಿದ್ದು, ಅದರ ಜೊತೆ ಕೆಲ ಜಿಲ್ಲೆಗಳಲ್ಲಿ ಗುಡುಗು ಸಹಿತ ಆಲಿಕಲ್ಲು ಮಳೆಯಾಗುವ ಮುನ್ಸೂಚನೆಅನ್ನು ಹವಾಮಾನ ಇಲಾಖೆ ನೀಡಿದೆ.
ರಾಜಧಾನಿ ಬೆಂಗಳೂರಿನಲ್ಲಿ ಬಿಸಿಲಿನ ಬೇಗೆ ಹೆಚ್ಚಾಗಿದೆ. ಮುಂಜಾನೆಯಿಂದಲೇ ಸುಡು ಬಿಸಿಲು ಜನರನ್ನು ಹೈರಾಣಿಗಿಸಿದೆ. ಈ ನಡುವೆ ಇಂದು ಕರಾವಳಿಯಲ್ಲಿ ಉಷ್ಣ ಅಲೆಯ ಮತ್ತಷ್ಟು ಹೆಚ್ಚಲಿದೆ. ಜೊತೆಗೆ ರಾಜ್ಯದ ಹಲವೆಡೆ ಗುಡುಗು ಸಹಿತ ಆಲಿಕಲ್ಲು ಮಳೆಯಾಗುವ ಸಾಧ್ಯತೆಯಿದೆ.
ಮುಂಬರುವ ದಿನಗಳಲ್ಲಿ ರಾಜ್ಯದಲ್ಲಿ ತಾಪಮಾನ 45 ಡಿಗ್ರಿ ಸೆಲ್ಸಿಯಸ್ಗೆ ಏರುವ ಸಾಧ್ಯತೆಯಿದೆ. ಹೀಗಾಗಿ ಬೆಳಿಗ್ಗೆ 10 ರಿಂದ ಸಂಜೆ 5 ರವರೆಗೆ ಅನಗತ್ಯವಾಗಿ ಹೊರಗೆ ಬರಬೇಡಿ, ಹೆಚ್ಚು ನೀರು ಸೇವಿಸಿ ಎಂದು ವೈದ್ಯರು ಸಲಹೆ ನೀಡಿದ್ದಾರೆ.
ಬೆಳಗಾವಿ, ಬಾಗಲಕೋಟೆ, ಧಾರವಾಡ ಮತ್ತು ಗದಗ ಜಿಲ್ಲೆಗಳಲ್ಲಿ ಗುಡುಗು ಸಹಿತ ಆಲಿಕಲ್ಲು ಮಳೆಯಾಗಲಿದ್ದು, ಈ ನಾಲ್ಕು ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ನೀಡಲಾಗಿದೆ. ಉಳಿದೆಡೆ ಒಣ ಹವೆಯಿರಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗು, ಹಾಸನ ಮತ್ತು ಮೈಸೂರು ಜಿಲ್ಲೆಗಳಲ್ಲಿಯೂ ಗುಡುಗು, ಸಿಡಿಲು ಸಹಿತ ಮಳೆಯಾಗಲಿದೆ ಎಂದು ಇಲಾಖೆ ಮುನ್ಸೂಚನೆ ನೀಡಿದೆ.
ಇಂದು ಉಡುಪಿ, ಉತ್ತರ ಕನ್ನಡ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಹೀಟ್ ವೇವ್ ಅಲರ್ಟ್ ಘೋಷಿಸಲಾಗಿದೆ. ಮುಂದಿನ 5 ದಿನದವರೆಗೂ ಕರಾವಳಿಯಲ್ಲಿ ಇದೇ ರೀತಿಯ ವಾತಾವರಣವಿರಲಿದೆ ಎಂದು ತಿಳಿಸಲಾಗಿದೆ.



