*ಬೈ ಎಲೆಕ್ಷನಲ್ಲಿ ಪಕ್ಷ ವಿರೋಧಿ ಚಟುವಟಿಕೆ: ಮೂವರು ಕಾಂಗ್ರೆಸ್ ನಾಯಕರ ಅಮಾನತ್ತು*

ಪ್ರಗತಿವಾಹಿನಿ ಸುದ್ದಿ: ಬಾಗಲಕೋಟೆ ಉಪ ಚುನಾವಣೆಯಲ್ಲಿ ಪಕ್ಷವಿರೋಧಿ ಚಟುವಟಿಕೆ ನಡೆಸಿದ ಆರೋಪದ ಮೇಲೆ ಮೂವರು ಪ್ರಭಾವಿ ಕಾಂಗ್ರೆಸ್ ಮುಖಂಡರನ್ನು ಪಕ್ಷದಿಂದ ಅಮಾನತುಗೊಳಿಸಲಾಗಿದೆ.
ಬಾಗಲಕೋಟೆ ವಿಧಾನಸಭಾ ಕ್ಷೇತ್ರದ ಕಮತಗಿ ಪಟ್ಟಣದ ಮುಖಂಡರು ಕಾಂಗ್ರೆಸ್ ಅಭ್ಯರ್ಥಿ ಉಮೇಶ್ ಮೇಟಿ ಪರ ಕೆಲಸ ಮಾಡುವ ಬದಲು, ಬಿಜೆಪಿ ಅಭ್ಯರ್ಥಿ ವೀರಣ್ಣ ಚರಂತಿಮಠ ಅವರಿಗೆ ಬೆಂಬಲ ನೀಡಿದ್ದಾರೆ ಎಂಬ ಗಂಭೀರ ಆರೋಪ ಕೇಳಿಬಂದಿತ್ತು. ಈ ಹಿನ್ನೆಲೆಯಲ್ಲಿ ಬಿಡಿಸಿಸಿ ಬ್ಯಾಂಕ್ ಉಪಾಧ್ಯಕ್ಷ ಮುರುಗೇಶ್ ಕಡ್ಲಿಮಟ್ಟಿ ಹಾಗೂ ಕಮತಗಿ ಪಟ್ಟಣ ಪಂಚಾಯತ್ ಸದಸ್ಯರಾದ ರಮೇಶ್ ಜಮಖಂಡಿ ಮತ್ತು ಗುರುಲಿಂಗ ಪಾಟೀಲ್ ಅವರನ್ನು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಎಸ್.ಜಿ. ನಂಜಯ್ಯನಮಠ ಅಮಾನತುಗೊಳಿಸಿ ಆದೇಶಿಸಿದ್ದಾರೆ.
ಸ್ಥಳೀಯ ಕಾಂಗ್ರೆಸ್ ಗ್ರಾಮೀಣ ಘಟಕದ ಅಧ್ಯಕ್ಷ ಎಸ್.ಎನ್. ರಾಂಪುರ ಅವರು ಈ ಮುಖಂಡರ ವಿರುದ್ಧ ದೂರು ನೀಡಿ, ಉಚ್ಚಾಟನೆಗೆ ಪತ್ರ ಬರೆದಿದ್ದರು. ಈ ದೂರಿನ ಆಧಾರದ ಮೇಲೆ ಜಿಲ್ಲಾಧ್ಯಕ್ಷರು ಕಾರಣ ಕೇಳಿ ನೋಟಿಸ್ ನೀಡಿದ್ದರೂ, ಮುಖಂಡರಿಂದ ಯಾವುದೇ ಸಮರ್ಪಕ ಉತ್ತರ ಬಾರದ ಕಾರಣ ಅಂತಿಮವಾಗಿ ಅಮಾನತು ಕ್ರಮ ಕೈಗೊಳ್ಳಲಾಗಿದೆ.
ಬಾಗಲಕೋಟೆ ಚುನಾವಣೆಯಲ್ಲಿ ಕಮತಗಿ ಅತ್ಯಂತ ಪ್ರಮುಖ ಪಟ್ಟಣವಾಗಿದ್ದು, ಇಲ್ಲಿನ ಮತಗಳು ಅಭ್ಯರ್ಥಿಗಳ ಜಯಾಪಜಯ ನಿರ್ಧರಿಸುತ್ತವೆ. ಇಂತಹ ನಿರ್ಣಾಯಕ ಸಂದರ್ಭದಲ್ಲೇ ಪ್ರಭಾವಿ ನಾಯಕರು ಪಕ್ಷಕ್ಕೆ ದೋಖಾ ಮಾಡಿರುವುದು ಕಾಂಗ್ರೆಸ್ ಪಾಳಯದಲ್ಲಿ ಆತಂಕ ಮೂಡಿಸಿದೆ.


