*ಶೀಘ್ರ ಪೌರಕಾರ್ಮಿಕರ ಖಾಯಮಾತಿ : ಕರ್ಮಚಾರಿ ಅಭಿವೃದ್ಧಿ ನಿಗಮದ ಅಧ್ಯಕ್ಷ ಮುರಳಿ ಸಾಲಪ್ಪ*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಸರ್ಕಾರ ತನ್ನ ಪ್ರಣಾಳಿಕೆಯಲ್ಲಿ ಪೌರ ಕಾರ್ಮಿಕರಿಗೆ ಭರವಸೆ ನೀಡಿರುವಂತೆ ಈಗಾಗಲೇ 20.000 ಕಾರ್ಮಿಕರನ್ನು ಖಾಯಂಗೊಳಿಸಿದ್ದು, ಇನ್ನುಳಿದವರನ್ನೂ ಹಂತ ಹಂತವಾಗಿ ಖಾಯಂಗೊಳಿಸಲು ಸರ್ಕಾರ ಮುಂದಾಗಲಿದೆ ಎಂದು ಕರ್ನಾಟಕ ರಾಜ್ಯ ಸಪಾಯಿ ಕರ್ಮಚಾರಿ ಅಭಿವೃದ್ಧಿ ನಿಗಮದ ಅಧ್ಯಕ್ಷ ಮುರಳಿ ಅಶೋಕ ಸಾಲಪ್ಪ ಹೇಳಿದರು.
ಕರ್ನಾಟಕ ರಾಜ್ಯ ಸಫಾಯಿ ಕರ್ಮಚಾರಿ ಅಭಿವೃದ್ಧಿ ನಿಗಮ ಹಾಗೂ ಬೆಳಗಾವಿ ಮಹಾನಗರ ಪಾಲಿಕೆ ಸಂಯುಕ್ತ ಆಶ್ರಯದಲ್ಲಿ ಬುಧವಾರ ಕುಮಾರ ಗಂಧರ್ವ ರಂಗಮಂದಿರದಲ್ಲಿ ನಡೆದ ನೇರ ಪಾವತಿ ಪೌರ ಕಾರ್ಮಿಕರಿಗೆ ಆರೋಗ್ಯ ತಪಾಸಣೆ ಶಿಬಿರ ಮತ್ತು ಅರಿವು ಮೂಡಿಸುವ ಕಾರ್ಯಕ್ರಮ ಹಾಗೂ ಆರೋಗ್ಯ ವಿಮಾ ಕಾರ್ಡ್ ವಿತರಣಾ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಪೌರಕಾರ್ಮಿಕರ ಆರೋಗ್ಯ ಕಾಪಾಡುವ ನಿಟ್ಟಿನಲ್ಲಿ ರೂ 5 ಲಕ್ಷದವರೆಗೆ ನಗದು ರಹಿತ ಆರೋಗ್ಯ ವಿಮಾ ಸೌಲಭ್ಯವನ್ನು ಸರ್ಕಾರ ಪೌರ ಕಾರ್ಮಿಕರಿಗೆ ನೀಡುತ್ತಿದೆ.
ನಿವೃತ್ತಿಯವರೆಗೂ ಕಾರ್ಡ್ ಬಳಸಿ ಆರೋಗ್ಯ ಚಿಕಿತ್ಸೆ ಪಡೆಯಬಹುದು. ಸಾಲಪ್ಪ ವರದಿಯಂತೆ 56 ಅಂಶಗಳಲ್ಲಿ 34 ಬೇಡಿಕೆಗಳನ್ನು ಈಗಾಗಲೇ ಈಡೇರಿಸಿದ್ದು, ಪೌರಕಾರ್ಮಿಕರ ಹಿತ ಕಾಪಾಡಲು ಸರ್ಕಾರ ಸದಾ ಬಧ್ಧವಾಗಿದೆ ಎಂದು ಹೇಳಿದರು.
ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಮೇಯರ್ ಪ್ರೀತಿ ಕಾಮಕರ ಅವರು, ನಗರದ ಜನತೆಯ ಆರೋಗ್ಯ ಕಾಪಾಡುವ ಕಾರ್ಮಿಕರ ಆರೋಗ್ಯ ರಕ್ಷಣೆ ಮಾಡುವುದು ನಮ್ಮೆಲ್ಲರ ಕರ್ತವ್ಯವಾಗಿದೆ. ಸರ್ಕಾರದ ವಿಮಾ ಯೋಜನೆಯ ಜೊತೆಗೆ ಪಾಲಿಕೆಯಿಂದಲೂ ಎಲ್ಲ ಸೌಲಭ್ಯ ಒದಗಿಸಲಾಗುವುದೆಂದು ಹೇಳಿದರು.
ಉಪ ಮಹಾಪೌರ ಹಣಮಂತ ಕೊಂಗಾಲಿ ಮಾತನಾಡಿ, ಪಾಲಿಕೆಯಿಂದ ಅಭಿವೃದ್ಧಿ ಕಾರ್ಯಗಳಿಗಾಗಿ ಸರ್ಕಾರದಿಂದ ನಿಯಮಿತವಾಗಿ ಅನುದಾನ ಬರಬೇಕು ಈ ಹಿನ್ನೆಲೆಯಲ್ಲಿ ಸರ್ಕಾರವನ್ನು ಒತ್ತಾಯಿಸಲಾಗುವುದು ಎಂದ ಅವರು, ಗುತ್ತಿಗೆದಾರರಿಂದ ಪೌರಕಾರ್ಮಿಕರಿಗೆ ಕಳಪೆ ಉಪಹಾರ ನೀಡಲಾಗುತ್ತಿದೆ ಎಂಬ ಆರೋಪಗಳಿದ್ದು, ಅದರ ಬದಲಾಗಿ ಉಪಹಾರಕ್ಕಾಗಿ ಕಾರ್ಮಿಕರ ಖಾತೆಗಳಿಗೆ ಹಣ ಜಮೆ ಮಾಡುವುದು ಸೂಕ್ತವೆಂದು ಹೇಳಿದರು.
ಪಾಲಿಕೆ ಆಯುಕ್ತ ಕಾರ್ತಿಕ್ ಎಂ ಮಾತನಾಡಿ, ವಿಮಾ ಯೋಜನೆಯಿಂದ ಪೌರಕಾರ್ಮಿಕರಿಗೆ ಪ್ರಯೋಜನವಾಗಲಿದೆ. ಪಾಲಿಕೆಯಿಂದಲೂ ಕಾರ್ಮಿಕರ ಆರೋಗ್ಯ ರಕ್ಷಣೆಗೆ
ಆದ್ಯತೆ ನೀಡಲಾಗುತ್ತಿದೆ ಎಂದು ಹೇಳಿದರು.
ಗೋ ಡಿಜಿಟ್ ವಿಮಾ ಕಂಪನಿಯ ಸಂಯೋಜಕ ಟಿ.ಎಲ್. ಕೃಷ್ಣಮೂರ್ತಿ ಮಾತನಾಡಿ, ದೇಶದಲ್ಲೇ ಮೊದಲ ಬಾರಿ ಕರ್ನಾಟಕ ರಾಜ್ಯದಲ್ಲಿ ಪೌರಕಾರ್ಮಿಕರಿಗಾಗಿ 5 ಲಕ್ಷದ ವಿಮಾ ಯೋಜನೆ ಜಾರಿಗೆ ತಂದಿದ್ದು, ಕಾರ್ಡ್ ಮೂಲಕ ಕಾರ್ಮಿಕರು 3000 ಕ್ಕೂ ಅಧಿಕ ಕಾಯಿಲೆಗಳಿಗೆ ಯಾವುದೇ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯಬಹುದೆಂದು ಹೇಳಿದರು.
ನಿಗಮದ ಎಂ.ಡಿ. ಟಿ. ಕುಮಾರ ಪ್ರಾಸ್ತಾವಿಕ ಮಾತನಾಡಿದರು. ನಗರಸೇವಕ ಬಾಬಾಜಾನ್ ಮುತವಾಲೆ, ನಿಗಮದ ಪದಾಧಿಕಾರಿಗಳಾದ ರಾಜು ಸಾಖೆ, ಎ. ಎ. ಯರಝರವಿ
ಇತರರು ವೇದಿಕೆಯಲ್ಲಿದ್ದರು.
ಮಹಾನಗರ ಪಾಲಿಕೆಯ 155
ಪೌರ ಕಾರ್ಮಿಕರಿಗೆ ಅತಿಥಿಗಳು ವಿಮಾ ಕಾರ್ಡ್ ವಿತರಿಸಿದರು. ಕಾರ್ಯಕ್ರಮದ ಆರಂಭದಲ್ಲಿ ಡಾ. ಬಾಬಾಸಾಹೇಬ್ ಅಂಬೇಡ್ಕರ್ ಹಾಗೂ ಬಾಬು ಜಗಜೀವನ್ ರಾಮ್ ಅವರ ಭಾವಚಿತ್ರಗಳಿಗೆ ಪುಷ್ಪಾರ್ಪಣೆ ಮಾಡಲಾಯಿತು. ಇದಕ್ಕೂ ಮೊದಲು ನಡೆದ ಶಿಬಿರದಲ್ಲಿ ಕಾರ್ಮಿಕರ ಆರೋಗ್ಯ ತಪಾಸಣೆ ಮಾಡಲಾಯಿತು. ಅಭಿಯಂತರ ಹಣಮಂತ ಕಲಾದಗಿ ಸ್ವಾಗತಿಸಿ ನಿರೂಪಿಸಿದರು.
