*ಬಸವನ ಕುಡಚಿಯ ಸಾಯಿ ಕಾಲೋನಿಯಲ್ಲಿ ಶ್ರೀ ಶಿರಡಿ ಸಾಯಿಬಾಬಾ ಮಂದಿರ ಲೋಕಾರ್ಪಣೆ*

ಪ್ರಗತಿವಾಹಿನಿ ಸುದ್ದಿ: ಬೆಳಗಾವಿಯ ಬಸವನ ಕುಡಚಿಯ ಸಾಯಿ ಕಾಲೋನಿಯಲ್ಲಿ ನೂತನವಾಗಿ ನಿರ್ಮಾಣಗೊಂಡಿರುವ ಶ್ರೀ ಶಿರಡಿ ಸಾಯಿಬಾಬಾ ಮಂದಿರದ ಲೋಕಾರ್ಪಣೆ, ವಿಗ್ರಹ ಪ್ರತಿಷ್ಠಾಪನೆ ಹಾಗೂ ಕಳಸಾರೋಹಣ ಸಮಾರಂಭವು ಭಕ್ತಿ ಹಾಗೂ ಧಾರ್ಮಿಕ ಸಂಭ್ರಮದ ವಾತಾವರಣದಲ್ಲಿ ಅದ್ದೂರಿಯಾಗಿ ನೆರವೇರಿತು.
ಈ ಕಾರ್ಯಕ್ರಮದಲ್ಲಿ ವಿಧಾನ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ ಭಾಗವಹಿಸಿ, ದೇವಸ್ಥಾನವನ್ನು ಲೋಕಾರ್ಪಣೆಗೊಳಿಸಿ ಮಾತನಾಡಿದರು. ಸಮಾಜದಲ್ಲಿ ಶಾಂತಿ, ಸೌಹಾರ್ದತೆ ಮತ್ತು ಮಾನವೀಯ ಮೌಲ್ಯಗಳನ್ನು ಬೆಳೆಸುವಲ್ಲಿ ಧಾರ್ಮಿಕ ಕೇಂದ್ರಗಳ ಪಾತ್ರ ಅತ್ಯಂತ ಮಹತ್ವದ್ದಾಗಿದೆ ಎಂದು ಅವರು ಹೇಳಿದರು.
ಶಿರಡಿ ಸಾಯಿಬಾಬಾ ಅವರು ಮಾನವಕುಲಕ್ಕೆ ಅಮೂಲ್ಯ ಸಂದೇಶವನ್ನು ನೀಡಿದ್ದು, ಅವರ ಆದರ್ಶಗಳು ಇಂದಿನ ಸಮಾಜಕ್ಕೂ ದಾರಿದೀಪವಾಗಿವೆ. ಇಂತಹ ಮಂದಿರಗಳು ಕೇವಲ ಪೂಜಾ ಸ್ಥಳಗಳಾಗದೇ, ಸಮಾಜವನ್ನು ಒಗ್ಗೂಡಿಸುವ ಆಧ್ಯಾತ್ಮಿಕ ಕೇಂದ್ರಗಳಾಗಬೇಕು ಎಂದು ಅಭಿಪ್ರಾಯಪಟ್ಟರು.
ಈ ಸಂದರ್ಭದಲ್ಲಿ ದೇವಸ್ಥಾನದ ಸಂಸ್ಥಾಪಕರು ಹಾಗೂ ನವಜೀವನ್ ಫೌಂಡೇಷನ್ನ ಮುಖ್ಯಸ್ಥರಾದ ಡಾ. ಸತೀಶ್ ಆರ್. ಚೌಲಿಗೇರ್ ಅವರನ್ನು ಅಭಿನಂದಿಸಿದ ಚನ್ನರಾಜ ಹಟ್ಟಿಹೊಳಿ, ಸಮಾಜಮುಖಿ ಕಾರ್ಯಗಳೊಂದಿಗೆ ಧಾರ್ಮಿಕ ಸೇವೆಯನ್ನೂ ಕೈಗೊಂಡಿರುವುದು ಶ್ಲಾಘನೀಯ ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ವಿಶೇಷ ಪೂಜೆ, ಹೋಮ-ಹವನ, ವಿಗ್ರಹ ಪ್ರತಿಷ್ಠಾಪನೆ ಹಾಗೂ ಕಳಸಾರೋಹಣ ವಿಧಿವಿಧಾನಗಳು ಭಕ್ತಿಭಾವದಿಂದ ನೆರವೇರಿದವು. ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಸಾಯಿಬಾಬಾರ ಆಶೀರ್ವಾದ ಪಡೆದರು.
ಈ ಸಂದರ್ಭದಲ್ಲಿ ಗುರು-ಹಿರಿಯರು, ಸ್ಥಳೀಯ ನಿವಾಸಿಗಳು, ಮಾಜಿ ಸೈನಿಕರು, ವಿವಿಧ ಸಂಘಟನೆಗಳ ಪದಾಧಿಕಾರಿಗಳು ಹಾಗೂ ಭಕ್ತಾದಿಗಳು ಉಪಸ್ಥಿತರಿದ್ದರು.



