
ಪ್ರಗತಿವಾಹಿನಿ ಸುದ್ದಿ: ದರ್ಗಾ ಮತ್ತು ದೇವಸ್ಥಾನದ ಆವರಣದ ಗೋಡೆಯೊಂದು ಕುಸಿದು ಬಿದ್ದ ಪರಿಣಾಮ ಆರು ಮಂದಿ ಭಕ್ತರು ಸಾವನ್ನಪ್ಪಿರುವ ದುರ್ಘಟನೆ ನಡೆದಿದೆ.
ಮಹಾರಾಷ್ಟ್ರದ ಸಾಂಗ್ಲಿ ಜಿಲ್ಲೆಯ ಮಿರಾಜ್ ತಾಲೂಕಿನ ಅರಗ ಗ್ರಾಮದ ಬಳಿ ಇರುವ ಮೈಬಾಬ್ ದರ್ಗಾ ಮತ್ತು ದೇವಸ್ಥಾನದ ಗೋಡೆ ಕುಸಿದು ಈ ಘಟನದ ನಡೆದಿದೆ.
ಮೃತರನ್ನು ಸ್ಥಳೀಯ ಭಕ್ತರೆಂದು ಗುರುತಿಸಲಾಗಿದ್ದು, ಘಟನೆಯಲ್ಲಿ ಹಲವಾರು ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ತಕ್ಷಣವೇ ಸಮೀಪದ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಭಕ್ತರು ದೇವಸ್ಥಾನದ ಆವರಣದಲ್ಲಿ ಜಮಾಯಿಸಿದ್ದ ಸಂದರ್ಭದಲ್ಲಿ ಗೋಡೆಯು ಇದ್ದಕ್ಕಿದ್ದಂತೆ ಕುಸಿದು ಬಿದ್ದಿದೆ. ಗೋಡೆಯ ಅವಶೇಷಗಳ ಅಡಿಯಲ್ಲಿ ಸಿಲುಕಿದ ಭಕ್ತರನ್ನು ಹೊರತೆಗೆಯಲು ಸ್ಥಳೀಯರು ಮತ್ತು ರಕ್ಷಣಾ ಸಿಬ್ಬಂದಿ ಹರಸಾಹಸ ಪಟ್ಟಿದ್ದಾರೆ.
ಪ್ರತಿ ಮಂಗಳವಾರ ಈ ದೇವಸ್ಥಾನಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ಭೇಟಿ ನೀಡುತ್ತಾರೆ. ಘಟನೆಯ ವೇಳೆ ಸುಮಾರು 350 ಕ್ಕೂ ಹೆಚ್ಚು ಭಕ್ತರು ದೇವಸ್ಥಾನದ ಆವರಣದಲ್ಲಿದ್ದರು ಎಂದು ತಿಳಿದುಬಂದಿದೆ. ಮೃತಪಟ್ಟವರ ಕುಟುಂಬಗಳಲ್ಲಿ ಈಗ ಆಕ್ರಂದನ ಮುಗಿಲು ಮುಟ್ಟಿದೆ.
ಮಂಗಳವಾರ ಸಂಜೆ ಇದ್ದಕ್ಕಿದ್ದಂತೆ ಬಿರುಗಾಳಿ ಸಹಿತ ಭಾರಿ ಮಳೆ ಸುರಿಯಲಾರಂಭಿಸಿತು . ಈ ವೇಳೆ ಮಳೆಯಿಂದ ರಕ್ಷಣೆ ಪಡೆಯಲು ಭಕ್ತರು ಗೋಡೆಯ ಪಕ್ಕದಲ್ಲಿ ಮತ್ತು ತಗಡಿನ ಶೀಟ್ ಗಳ ಅಡಿಯಲ್ಲಿ ಆಶ್ರಯ ಪಡೆದಿದ್ದರು ಗಾಳಿಯ ತೀವ್ರತೆಗೆ ಗೋಡೆ ಮತ್ತು ಶೀಟ್ ಗಳು ಏಕಾಏಕಿ ಕುಸಿದು ಬಿದ್ದಿದ್ದರಿಂದ ಭಕ್ತರು ಅದರಡಿ ಸಿಲುಕಿಕೊಂಡಿದ್ದರು ಎಂದು ತಿಳಿದುಬಂದಿದೆ.
ವಿಷಯ ತಿಳಿಯುತ್ತಿದ್ದಂತೆಯೇ ಸ್ಥಳಕ್ಕೆ ಧಾವಿಸಿದ ಪೊಲೀಸರು ಮತ್ತು ಕಂದಾಯ ಅಧಿಕಾರಿಗಳು ಪರಿಶೀಲನೆ ನಡೆಸಿದ್ದಾರೆ. ಅವಶೇಷಗಳ ತೆರವು ಕಾರ್ಯಾಚರಣೆ ಮುಂದುವರಿದಿದ್ದು, ಸಾವಿನ ಸಂಖ್ಯೆ ಹೆಚ್ಚಾಗುವ ಭೀತಿ ಎದುರಾಗಿದೆ.



