*ಇಂದಿನಿಂದಲೇ ಭಿನ್ನಾಭಿಪ್ರಾಯ ಬಿಟ್ಟು ಪಕ್ಷ ಸಂಘಟನೆಗೆ ಒತ್ತು ನೀಡಲಿದ್ದೇವೆ: ಬಾಲಚಂದ್ರ ಜಾರಕಿಹೊಳಿ*

ಪ್ರಗತಿವಾಹಿನಿ ಸುದ್ದಿ: ಮುಂದಿನ ದಿನಗಳಲ್ಲಿ ಪಕ್ಷದಲ್ಲಿ ಏನೇ ಗಲಾಟೆಗಳಿದ್ದರೂ ಅವು ಇತ್ಯರ್ಥವಾಗಲಿವೆ. ಇಂದಿನಿಂದಲೇ ಎಲ್ಲರೂ ಆಂತರಿಕ ಭಿನ್ನಾಭಿಪ್ರಾಯಗಳನ್ನು ಮರೆತು ಪಕ್ಷ ಸಂಘಟನೆಗೆ ಹೆಚ್ಚಿನ ಒತ್ತು ನೀಡಿ ಕೆಲಸ ಮಾಡಲಿದ್ದೇವೆ ಎಂದು ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ತಿಳಿಸಿದರು.
ಬಿಜೆಪಿ ರಾಷ್ಟ್ರೀಯ ನಾಯಕ ನಿತಿನ್ ನಬಿನ್ ಅವರು ರಾಜ್ಯ ನಾಯಕರ ಜತೆ ಪ್ರಮುಖ ಸಂಘಟನಾ ಸಭೆ ನಡೆಸಿದ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ನಮ್ಮ ನಾಯಕರು ಯಾರಿಗೆ ಏನು ಹೇಳಬೇಕೋ ಅದನ್ನ ಹೇಳಿದ್ದಾರೆ. ರಾಷ್ಟ್ರೀಯ ನಾಯಕರು ಇಂದು ಸಂಘಟನೆಯ ವತಿಯಿಂದ ನಡೆಸಿದ ಸಭೆಯಲ್ಲಿ ಅತ್ಯಂತ ಪರಿಣಾಮಕಾರಿಯಾಗಿ ಮಾತನಾಡಿದ್ದಾರೆ. ಮುಂದಿನ ದಿನಗಳಲ್ಲಿ ಕರ್ನಾಟಕದಲ್ಲಿ ಭಾರತೀಯ ಜನತಾ ಪಾರ್ಟಿಗೆ ಅತ್ಯುತ್ತಮ ಭವಿಷ್ಯವಿದೆ ಎಂದು ಅವರು ಆಶಿಸಿದ್ದಾರೆ. ಇದೇ ವೇಳೆ ಅವರು ಸೂಕ್ಷ್ಮವಾಗಿ ಎರಡು ಪ್ರಮುಖ ವಿಷಯಗಳನ್ನು ತಿಳಿಸಿದ್ದು ಯಾರಿಗೆ ಯಾವ ಸಂದೇಶ ತಲುಪಬೇಕೋ ಅದನ್ನು ಸ್ಪಷ್ಟವಾಗಿ ತಲುಪಿಸಿದ್ದಾರೆ. ಆ ಸಂದೇಶದ ಹಿನ್ನೆಲೆಯಲ್ಲಿ ಮುಂದಿನ ದಿನಗಳಲ್ಲಿ ಪಕ್ಷದಲ್ಲಿ ಏನೇ ಗಲಾಟೆಗಳಿದ್ದರೂ ಅವು ಇತ್ಯರ್ಥವಾಗಲಿವೆ. ಇಂದಿನಿಂದಲೇ ಎಲ್ಲರೂ ಆಂತರಿಕ ಭಿನ್ನಾಭಿಪ್ರಾಯಗಳನ್ನು ಮರೆತು ಪಕ್ಷ ಸಂಘಟನೆಗೆ ಹೆಚ್ಚಿನ ಒತ್ತು ನೀಡಿ ಕೆಲಸ ಮಾಡಲಿದ್ದಾರೆ ಎಂದರು.
ಸಭೆಯಲ್ಲಿ ರಾಷ್ಟ್ರೀಯ ನಾಯಕರು ಪಕ್ಷದ ಆಂತರಿಕ ಭಿನ್ನಾಭಿಪ್ರಾಯಗಳ ಬಗ್ಗೆ ನೇರವಾಗಿ ಪ್ರಸ್ತಾಪಿಸದಿದ್ದರೂ, ಮುಂದಿನ ದಿನಗಳಲ್ಲಿ ಸಂಘಟನೆ ಯಾವ ರೀತಿ ಇರಬೇಕು ಎಂಬ ನೀಲನಕ್ಷೆಯನ್ನು ಮುಂದಿಟ್ಟಿದ್ದಾರೆ. ಕರ್ನಾಟಕದಲ್ಲಿ ಬಿಜೆಪಿ ಕಾರ್ಯಕರ್ತರು, ಶಾಸಕರು ಮತ್ತು ಸಂಸದರು ಯಾವ ರೀತಿ ಒಗ್ಗಟ್ಟಿನಿಂದ ಕೆಲಸ ಮಾಡಬೇಕು ಎಂಬುದರ ಕುರಿತು ಅವರು ಮಾರ್ಗದರ್ಶನ ನೀಡಿದ್ದಾರೆ. ರಾಷ್ಟ್ರೀಯ ನಾಯಕರನ್ನು ಮೊದಲ ಬಾರಿಗೆ ಭೇಟಿಯಾಗಿ ಅವರ ಮಾತುಗಳನ್ನು ಕೇಳಿ ನಮಗೆ ಬಹಳ ಸಂತೋಷವಾಗಿದೆ. ಅವರ ಈ ಭೇಟಿಯಿಂದ ಮುಂಬರುವ ದಿನಗಳಲ್ಲಿ ಕರ್ನಾಟಕದಲ್ಲಿ ಬಿಜೆಪಿಗೆ ಒಳ್ಳೆಯ ಬೆಳವಣಿಗೆಯಾಗಲಿದ್ದು ಪಕ್ಷದೊಳಗಿನ ಎಲ್ಲಾ ಸಮಸ್ಯೆಗಳಿಗೂ ಸೂಕ್ತ ಪರಿಹಾರ ಸಿಗಲಿದೆ. ನಾವೆಲ್ಲರೂ ಒಟ್ಟಾಗಿ 2028ರ ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸುವ ಕನಸು ಕಾಣುತ್ತಿದ್ದೇವೆ ಎಂದು ಬಾಲಚಂದ್ರ ಜಾರಕಿಹೊಳಿ ಹೇಳಿದ್ದಾರೆ.



