*ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್ ಬೆನ್ನಲ್ಲೇ ಸಚಿವರು, ಶಾಸಕರು ದೆಹಲಿಗೆ ದೌಡು*

ಕುತೂಹಲ ಮೂಡಿಸಿದ ರಾಜ್ಯ ಕಾಂಗ್ರೆಸ್ ವಿದ್ಯಮಾನ
ಪ್ರಗತಿವಾಹಿನಿ ಸುದ್ದಿ: ರಾಜ್ಯದಲ್ಲಿ ನಾಯಕತ್ವ ಬದಲಾವಣೆ ವಿಚಾರ ಭಾರಿ ಚರ್ಚೆಯಾಗುತ್ತಿರುವ ಬೆನ್ನಲ್ಲೇ ಹೈಕಮಾಂಡ್ ನಾಯಕರು ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್ ಅವರಿಗೆ ಬುಲಾವ್ ನೀಡಿರುವ ಹಿನ್ನೆಲೆಯಲ್ಲಿ ದೆಹಲಿಗೆ ಪ್ರಯಾಣಿಸಿದ್ದಾರೆ.
ಈ ನಡುವೆ ರಾಜ್ಯ ಸಚಿವ ಸಂಪುಟ ಪುನಾರಚನೆ ವಿಚಾರವೂ ಮುನ್ನೆಲೆಗೆ ಬಂದಿದ್ದು, ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್ ಬೆನ್ನಲ್ಲೇ ಇದೀಗ ಹಲವು ಸಚಿವರು, ಶಾಸಕರು ಹಾಗೂ ಎಂಎಲ್ ಸಿಗಳೂ ಕೂಡ ದೆಹಲಿಗೆ ಪ್ರಯಾಣಿಸಿರುವುದು ಕುತೂಹಲ ಮೂಡಿಸಿದೆ.
ಇಂದು ಬೆಳಿಗ್ಗೆ 11 ಗಂಟೆಗೆ ಹೈಕಮಾಂಡ್ ನಾಯಕರೊಂದಿಗೆ ಮಹತ್ವದ ಸಭೆ ನಡೆಯಲಿದೆ. ಸಭೆಯಲ್ಲಿ ನಾಯಕತ್ವ ಬದಲಾವಣೆ ವಿಚಾರ ಹಾಗೂ ಸಂಪುಟ ಪುನಾರಚನೆ ವಿಚಾರದ ಬಗ್ಗೆ ಅಂತಿಮ ನಿರ್ಧಾರವಾಗುವ ಸಾಧ್ಯತೆ ಇದೆ. ಸಚಿವರಾದ ಡಾ.ಜಿ.ಪರಮೇಶ್ವರ್, ಸತೀಶ್ ಜಾರಕಿಹೊಳಿ, ಭೈರತಿ ಸುರೇಶ್, ಪ್ರಿಯಾಂಕ್ ಖರ್ಗೆ, ಎಂ.ಬಿ.ಪಾಟೀಲ್, ಕೃಷ್ಣ ಬೈರೇಗೌಡ, ಹೆಚ್.ಸಿ.ಮಹದೇವಪ್ಪ. ಹೆಚ್.ಕೆ.ಪಾಟೀಲ್, ಕೆ.ವೆಂಕಟೇಶ್ ಕೂಡ ದೆಹಲಿಯಲ್ಲಿ ಬೀಡು ಬಿಟ್ಟಿದ್ದಾರೆ. ನಾಯಕತವ ಬದಲಾವಣೆ ಕುರಿತ ಎಲ್ಲಾ ಗೊಂದಲಗಳಿಗೂ ಹೈಕಮಾಂಡ್ ಇಂದು ತೆರೆ ಎಳೆಯಲಿದೆಯೇ? ಕಾದುನೋಡಬೇಕಿದೆ.



