*ಶಿವಾನಂದ ನೀಲಣ್ಣವರ್ಗೆ ನ್ಯಾಯಾಂಗ ಬಂಧನ: ಹಿಂಡಲಗಾ ಜೈಲಿಗೆ ಶಿಪ್ಟ್*

ಪ್ರಗತಿವಾಹಿನಿ ಸುದ್ದಿ ಬೆಳಗಾವಿ: ಬೆಳಗಾವಿಯಲ್ಲಿ ಶಿವಾನಂದ ನೀಲಣ್ಣವರ ವಿರುದ್ಧದ 4,500 ಕೋಟಿ ರೂಪಾಯಿ ವಂಚನೆ ಆರೋಪ ಪ್ರಕರಣ ಸಿಐಡಿ ಅಧಿಕಾರಿಗಳ ಹತ್ತು ದಿನಗಳ ಪೊಲೀಸ್ ಕಸ್ಟಡಿ ಅಂತ್ಯವಾದ ಬಳಿಕ ಶಿವಾನಂದ ನೀಲಣ್ಣವರ್ ರನ್ನು 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ನೀಡಿ ಕೋರ್ಟ್ ಆದೇಶ ಹೊರಡಿಸಿದೆ.
4,500 ಕೋಟಿ ರೂಪಾಯಿ ವಂಚನೆ ಆರೋಪ ಪ್ರಕರಣದಲ್ಲಿ ಪ್ರಮುಖ ಆರೋಪಿ ಶಿವಾನಂದ ನೀಲಣ್ಣವರ್ ಅವರನ್ನು ಇಂದು 2ನೇ ಹೆಚ್ಚುವರಿ ಸತ್ರ ನ್ಯಾಯಾಲಯಕ್ಕೆ ಸಿಐಡಿ ಅಧಿಕಾರಿಗಳು ಹಾಜರುಪಡಿಸಿದರು.
ಸಿಐಡಿ ಡಿವೈಎಸ್ಪಿ ಕೋದಂಡರಾಮ್ ನೇತೃತ್ವದ ತಂಡ ವೈದ್ಯಕೀಯ ತಪಾಸಣೆ ಬಳಿಕ ಕೋರ್ಟ್ಗೆ ಕರೆತಂದಿತ್ತು. ಪ್ರಕರಣದ ತನಿಖೆ ಇನ್ನೂ ಮುಂದುವರಿದಿರುವ ಹಿನ್ನೆಲೆಯಲ್ಲಿ ಸಿಐಡಿ ಅಧಿಕಾರಿಗಳು ನ್ಯಾಯಾಂಗ ಬಂಧನಕ್ಕೆ ಮನವಿ ಸಲ್ಲಿಸಿದರು.
ಮನವಿಯನ್ನು ಪರಿಗಣಿಸಿದ ನ್ಯಾಯಾಧೀಶ ಗಂಗಾಧರ್ ಕೆ. ಶಿವಾನಂದ ನೀಲಣ್ಣವರ್ ಅವರನ್ನು ಜೂನ್ 9ರವರೆಗೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿ ಆದೇಶ ನೀಡಿದರು. ಇದರೊಂದಿಗೆ ಹತ್ತು ದಿನಗಳ ಸಿಐಡಿ ಕಸ್ಟಡಿ ಅಂತ್ಯಗೊಂಡ ಹಿನ್ನೆಲೆ ನೀಲಣ್ಣವರ್ ರನ್ನು ಹಿಂಡಲಗಾ ಜೈಲಿಗೆ ರವಾನೆ ಮಾಡಲಾಯಿತು.



