
ಪ್ರಗತಿವಾಹಿನಿ ಸುದ್ದಿ: ಕೆಲ ದಿನಗಳ ಹಿಂದೆ ಸುರಿದ ಭಾರಿ ಮಳೆಗೆ ಬೆಂಗಳೂರಿನ ಬೌರಿಂಗ್ ಆಸ್ಪತ್ರೆಯ ಕಾಂಪೌಂಡ್ ಕುಸಿದು 7 ಜನರು ಮೃತಪಟ್ಟ ಘಟನೆ ನಡೆದಿತ್ತು. ಆ ಘಟನೆ ಮಾಸುವ ಮುನ್ನವೇ ಬೆಂಗಳೂರಿನಲ್ಲಿ ಮತ್ತೊಂದು ದುರಂತ ಸಂಭವಿಸಿದೆ. ಇಂದು ಸಂಜೆ ಸುರಿದ ಧಾರಾಕಾರ ಮಳೆಗೆ ಕಾಂಪೌಂಡ್ ಕುಸಿದು ಬಿದ್ದು ಆಟೋ ಚಾಲಕರೊಬ್ಬರು ಸಾವನ್ನಪ್ಪಿದ್ದಾರೆ.
ವಿಜಯನಗರದಲ್ಲಿ ಈ ದುರಂತ ಸಂಭವಿಸಿದೆ. ಭಾರ್ ಮಳೆಯಿಂದಾಗಿ ರಸ್ತೆಗಳು ಜಲಾವೃತಗೊಂಡು ನದಿಯಂತೆ ಹರಿಯುತ್ತಿದ್ದವು. ಈ ವೇಳೆ ಆಟೋ ಚಾಲಕ ಕಾಂಪೌಂಡ್ ಬಳಿ ನಿಂತಿದ್ದರು. ಏಕಾಏಕಿ ಕಾಂಪೌಂಡ್ ಕುಸಿದಿದ್ದು, ಅವಶೇಷಗಳ ಅಡಿ ಸಿಲುಕಿ ಆಟೋ ಚಾಲಕ ಮೃತಪಟ್ಟಿದ್ದಾರೆ.
ಬೋರಯ್ಯ ಮೃತ ಆಟೋ ಚಾಲಕ. ಘಟನಾ ಸ್ಥಳಕ್ಕೆ ವಿಜಯನಗರ ಠಾಣೆ ಪೊಲಿಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತದೇಹವನ್ನು ವಿಕ್ಟೋರಿಯಾ ಆಸ್ಪತ್ರೆಗೆ ರವಾನಿಸಲಾಗಿದೆ.




