*ಭೀಮಾತೀರದಲ್ಲಿ 6 ಜನರ ಹತ್ಯೆ: ಘಟನಾ ಸ್ಥಳಕ್ಕೆ ಐಜಿಪಿ ಸಂದೀಪ ಪಾಟೀಲ್ ಭೇಟಿ*

ಪ್ರಗತಿವಾಹಿನಿ ಸುದ್ದಿ: ವಿಜಯಪುರ ಜಿಲ್ಲೆ ಚಡಚಣ ತಾಲೂಕಿನ ಗೋವಿಂದಪುರ ಗ್ರಾಮದಲ್ಲಿ ಅಮಾನುಷ ಕುಟುಂಬಗಳ ನಡುವಿನ ಕಲಹಕ್ಕೆ 6 ಜನರ ಹತ್ಯೆ ಮಾಡಲಾಗಿದ್ದು, ಹತ್ಯಾಕಾಂಡ ಪ್ರಕರಣ ಘಟನಾ ಸ್ಥಳಕ್ಕೆ ಬೆಳಗಾವಿ ಉತ್ತರ ವಲಯ ಐಜಿಪಿ ಸಂದೀಪ್ ಪಾಟೀಲ್ ಭೇಟಿ ನೀಡಿ ಪರಿಶೀಲಿಸಿದ್ದಾರೆ.
ಶುಕ್ರವಾರ (ಮೇ 29) ಮಧ್ಯಾಹ್ನ 2:30ರ ಸುಮಾರಿಗೆ ಜಮೀನಿನಲ್ಲಿ ಕೆಲವರು ಕೆಲಸ ಮಾಡುತ್ತಿರುವ ಸಮಯದಲ್ಲಿ ಅನೇಕ ಜನ ಬಂದು ಅವರ ಮೇಲೆ ಚಾಕು, ಮಚ್ಚು ಹಾಗೂ ಬೇರೆ ಬೇರೆ ಆಯುಧಗಳಿಂದ ಹಲ್ಲೆ ಮಾಡಿದ್ದಾರೆ. ಈ ಘಟನೆಯಲ್ಲಿ ಒಂದೇ ಕುಟುಂಬದ ಐವರು ಸೇರಿ 6 ಮಂದಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ವಿಜಯಪುರ ಎಸ್ಪಿ ನೇತೃತ್ವದಲ್ಲಿ ತನಿಖೆ ನಡೆಯುತ್ತಿದ್ದು, ಮೃತರ ಶವಗಳನ್ನ ಮರಣೋತ್ತರ ಪರೀಕ್ಷೆಗಾಗಿ ವಿಜಯಪುರದ ಖಾಸಗಿ ಆಸ್ಪತ್ರೆಗೆ ಸ್ಥಳಾಂತರ ಮಾಡಲಾಗಿದೆ.
ಘಟನೆ ಬಗ್ಗೆ ಮಾಧ್ಯಮಗಳ ಜೊತೆ ಮಾತನಾಡಿದ ಬೆಳಗಾವಿ ಉತ್ತರ ವಲಯ ಐಜಿಪಿ ಸಂದೀಪ್ ಪಾಟೀಲ್ ಅವರು ಆರೋಪಿಗಳ ಬಗ್ಗೆಯೂ ಕೂಡ ನಮಗೆ ಮಾಹಿತಿ ಇದೆ. ಆದಷ್ಟು ಶೀಘ್ರದಲ್ಲಿ ಅವರನ್ನು ಬಂಧಿಸುತ್ತೇವೆ ಎಂದು ತಿಳಿಸಿದ್ದಾರೆ.




