*ಮೃತ ಮಹಿಳೆಯ ಕುಟುಂಬಕ್ಕೆ ಪರಿಹಾರ ನೀಡದ ಹಿನ್ನೆಲೆ: KKRTC ಬಸ್ ಜಪ್ತಿ ಮಾಡಿ ಕೋರ್ಟ್ ಗೆ ತಂದ ಸಿಬ್ಬಂದಿ*

ಪ್ರಗತಿವಾಹಿನಿ ಸುದ್ದಿ: ಕೋರ್ಟ್ ನಿಂದ ಆದೇಶವಾಗಿದ್ದರೂ ಅಪಘಾತದಲ್ಲಿ ಮೃತಪಟ್ಟ ಮಹಿಳೆಯ ಕುಟುಂಬಕ್ಕೆ ನಿಗದಿತ ಪರಿಹಾರ ಮೊತ್ತ ನೀಡಲು ವಿಳಂಬ ಮಾಡಿದ ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಗೆ (KKRTC) ಸೇರಿದ ಬಸ್ ನ್ನೇ ಜಪ್ತಿ ಮಾಡಿರುವ ಘಟನೆ ನಡೆದಿದೆ.
ಬೀದರ್ ನ್ಯಾಯಾಲಯ, ಕೋರ್ಟ್ ಆದೇಶ ಪಾಲಿಸದ ಹಿನ್ನೆಲೆಯಲ್ಲಿ ಕೆಕೆಆರ್ಟಿಸಿ ಸಂಸ್ಥೆಗೆ ಸೇರಿದ ಬಸ್ಸನ್ನೇ ಜಪ್ತಿ ಮಾಡಲು ಸೂಚಿಸಿದೆ. ಈ ಹಿನ್ನೆಲೆಯಲ್ಲಿ ಬಸ್ ಜಪ್ತಿ ಮಾಡಲಾಗಿದೆ.
2021 ರ ಆಗಸ್ಟ್ 15 ರಂದು ಭಾಲ್ಕಿ ತಾಲೂಕಿನ ಟೆಕ್ನಿ ಗ್ರಾಮದ ಬಳಿ ಭೀಕರ ರಸ್ತೆ ಅಪಘಾತ ಸಂಭವಿಸಿತ್ತು. ಈ ಅಪಘಾತದಲ್ಲಿ ರೇಖಾ ಸುನೀಲ್ (35) ಎಂಬ ಮಹಿಳೆ ಮೃತಪಟ್ಟಿದ್ದರು. ಈ ಕುರಿತು ವಿಚಾರಣೆ ನಡೆಸಿದ್ದ ಬೀದರ್ನ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು, ಮೃತ ಮಹಿಳೆಯ ಕುಟುಂಬಕ್ಕೆ ಸುಮಾರು 22.50 ಲಕ್ಷ ರೂಪಾಯಿ ಪರಿಹಾರ ಮೊತ್ತ ಪಾವತಿಸುವಂತೆ ಅಕ್ಟೋಬರ್ 2025ರಲ್ಲಿ ಕೆಕೆಆರ್ಟಿಸಿಗೆ ಆದೇಶ ನೀಡಿತ್ತು. ಆದರೆ, ಕೋರ್ಟ್ ಆದೇಶ ಹೊರಬಿದ್ದು 7 ತಿಂಗಳು ಕಳೆದರೂ ಸಾರಿಗೆ ಸಂಸ್ಥೆ ಮಾತ್ರ ಪರಿಹಾರ ನೀಡದೆ ನಿರ್ಲಕ್ಷ್ಯ ವಹಿಸಿತ್ತು.
ಇದರಿಂದ ಆಕ್ರೋಶಗೊಂಡ ಕುಟುಂಬದವರು ನ್ಯಾಯಾಲಯದ ಮೊರೆ ಹೋಗಿದ್ದರು. ಇದೀಗ ಕೋರ್ಟ್ ಸೂಚನೆಯ ಮೇರೆಗೆ ಕೆಕೆಆರ್ಟಿಸಿ ಬಸ್ ಅನ್ನು ಜಪ್ತಿ ಮಾಡಿ ಬೀದರ್ ಕೋರ್ಟ್ ಆವರಣಕ್ಕೆ ತಂದು ನಿಲ್ಲಿಸಲಾಗಿದೆ.


