
ಪ್ರಗತಿವಾಹಿನಿ ಸುದ್ದಿ: ದ್ವೇಷ ಭಾಷಣ ಕಾಯಿದೆಯಡಿ ಶ್ರೀರಾಮ ಸೇನೆ ಅಧ್ಯಕ್ಷ ಪ್ರಮೋದ್ ಮುತಾಲಿಕ್ ಸೇರಿದಂತೆ ಆರು ಜನರ ವಿರುದ್ಧ ಹುಬ್ಬಳ್ಳಿ ಉಪನಗರ ಪೊಲೀಸ್ ಠಾಣೆಯಲ್ಲಿ ಪೊಲೀಸರು ಸ್ವಯಂ ಪ್ರೇರಿತ ದೂರು ದಾಖಲಿಸಿಕೊಂಡಿದ್ದಾರೆ.
ಹುಬ್ಬಳ್ಳಿಯ ಆರ್.ಎನ್. ಶೆಟ್ಟಿ ಕಲ್ಯಾಣ ಮಂಟಪದಲ್ಲಿ ನಡೆದಿದ್ದ ಕಾರ್ಯಕ್ರಮದಲ್ಲಿ ಕಬ್ಬಿಣದ ಆಯುಧ ಪ್ರದರ್ಶಿಸಿ, ಮಹಿಳೆಯರಿಗೆ ತ್ರಿಶೂಲ ಆಕಾರದ ಆಯುಧ ವಿತರಣೆ ಆರೋಪದ ಮೇಲೆ ಪ್ರಮೋದ್ ಮುತಾಲಿಕ್ ಮತ್ತು ಇತರರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.
ಶ್ರೀರಾಮಸೇನೆಯ ಮಹಿಳಾ ಘಟಕ ದುರ್ಗಾ ಸೇನೆಯಿಂದ ನಡೆದಿದ್ದ ತ್ರಿಶೂಲ ದೀಕ್ಷಾ ಕಾರ್ಯಕ್ರಮದಲ್ಲಿ ಈ ಕೃತ್ಯ ನಡೆದಿತ್ತು. ಶ್ರೀರಾಮ ಸೇನೆ ಸಂಸ್ಥಾಪಕ ಅಧ್ಯಕ್ಷ ಪ್ರಮೋದ ಮುತಾಲಿಕ್ ಹಾಗೂ ಇತರರು ಕಾರ್ಯಕ್ರಮಕ್ಕೆ ಪೂರ್ವಾನುಮತಿ ಪಡೆದಿರಲಿಲ್ಲ ಎಂದು ಆರೋಪಿಸಲಾಗಿದ್ದು ಅಕ್ರಮವಾಗಿ ಕಾರ್ಯಕ್ರಮ ನಡೆಸಿದ್ದಾರೆಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.



