*ಬೆಳಗಾವಿಯಲ್ಲಿ ಮೆಗಾ ರಕ್ತದಾನ ಶಿಬಿರ ಹಾಗೂ ಜಾಗೃತಿ ರ್ಯಾಲಿ ಆಯೋಜನೆ*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ವಿಶ್ವ ರಕ್ತದಾನಿಗಳ ದಿನಾಚರಣೆಯ ಅಂಗವಾಗಿ, ಎಸ್ಬಿಜಿ ಆಯುರ್ವೇದ ವೈದ್ಯಕೀಯ ಮಹಾವಿದ್ಯಾಲಯ ಮತ್ತು ಆಸ್ಪತ್ರೆ, ಬೆಳಗಾವಿಯ ರೋಗನಿದಾನ ವಿಭಾಗ ಹಾಗೂ ಎನ್ಎಸ್ಎಸ್ ಘಟಕವು, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಬೆಳಗಾವಿ, ಜಿಲ್ಲಾ ಏಡ್ಸ್ ತಡೆಗಟ್ಟುವಿಕೆ ಮತ್ತು ನಿಯಂತ್ರಣ ಘಟಕ (DAPCU) ಬೆಳಗಾವಿ, ಕೆಎಸ್ಎಪಿಎಸ್ ಹಾಗೂ ಬೆಳಗಾವಿ ರಕ್ತ ಕೇಂದ್ರದ ಸಹಯೋಗದಲ್ಲಿ 2026ರ ಜೂನ್ 16ರಂದು ಎಸ್ಬಿಜಿ ಆಯುರ್ವೇದ ಆಸ್ಪತ್ರೆ, ಬೆಳಗಾವಿಯಲ್ಲಿ ಮೆಗಾ ರಕ್ತದಾನ ಶಿಬಿರ ಹಾಗೂ ಜಾಗೃತಿ ರ್ಯಾಲಿಯನ್ನು ಆಯೋಜಿಸಿತು.
ಕಾರ್ಯಕ್ರಮವು ಮಹಾವಿದ್ಯಾಲಯದ ಸಭಾಂಗಣದಲ್ಲಿ ಪ್ರಾರ್ಥನೆಯೊಂದಿಗೆ ಆರಂಭಗೊಂಡಿತು. ನಂತರ ಗಣ್ಯ ಅತಿಥಿಗಳ ಸ್ವಾಗತ ಹಾಗೂ ಸನ್ಮಾನ ನೆರವೇರಿಸಲಾಯಿತು. ಗಣ್ಯರ ಉಪಸ್ಥಿತಿಯಲ್ಲಿ ಕಾರ್ಯಕ್ರಮವನ್ನು ಅಧಿಕೃತವಾಗಿ ಉದ್ಘಾಟಿಸಲಾಯಿತು.
ಮುಖ್ಯ ಅತಿಥಿಗಳಾಗಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಬೆಳಗಾವಿಯ ಸದಸ್ಯ ಕಾರ್ಯದರ್ಶಿ ಹಾಗೂ ಹಿರಿಯ ಸಿವಿಲ್ ನ್ಯಾಯಾಧೀಶರಾದ ಕೆ. ಎನ್. ಶಿವಕುಮಾರ್ ಅವರು ಉಪಸ್ಥಿತರಿದ್ದರು. ಗೌರವ ಅತಿಥಿಗಳಾಗಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಉಪನಿರ್ದೇಶಕರಾದ ಡಾ. ಎಂ. ಎಸ್. ಪಲ್ಲೇದ್, ಜಿಲ್ಲಾ ಆರೋಗ್ಯಾಧಿಕಾರಿಗಳಾದ ಡಾ. ಐ. ಪಿ. ಗಡಾದ, ಜಿಲ್ಲಾ ಕಾರ್ಯಕ್ರಮಾಧಿಕಾರಿಗಳಾದ ಡಾ. ಚಾಂದಿನಿ ದೇವಡಿ, ಕ್ಷಯರೋಗ ವೈದ್ಯಾಧಿಕಾರಿಗಳಾದ ಡಾ. ಬಿ. ಎನ್. ತುಕ್ಕಾರ್, ಜಿಲ್ಲಾ ಮಲೇರಿಯಾ ಅಧಿಕಾರಿಗಳಾದ ಡಾ. ವಿವೇಕ ಹೊನ್ನಳ್ಳಿ ಹಾಗೂ ಬೆಳಗಾವಿ ರಕ್ತ ಕೇಂದ್ರದ ವ್ಯವಸ್ಥಾಪಕ ನಿರ್ದೇಶಕರಾದ ಗಿರೀಶ್ ಸಿ. ಬಿ.ಉಪಸ್ಥಿತರಿದ್ದರು.
ಮುಖ್ಯ ಅತಿಥಿಗಳಾದ ಕೆ. ಎನ್. ಶಿವಕುಮಾರ್ ಅವರು ಮಾತನಾಡಿ, ಯುವಜನರು ರಕ್ತದಾನ ಮಾಡುವ ಮೂಲಕ ಜೀವಗಳನ್ನು ಉಳಿಸಲು ಮುಂದಾಗಬೇಕು ಎಂದು ಕರೆ ನೀಡಿದರು. ರಕ್ತದಾನವು ಒಂದು ಮಹತ್ತರ ಮಾನವೀಯ ಸೇವೆಯಾಗಿದ್ದು, ಪ್ರತಿಯೊಬ್ಬರ ಸಾಮಾಜಿಕ ಜವಾಬ್ದಾರಿಯಾಗಿದೆ ಎಂದು ತಿಳಿಸಿದರು.
ಸ್ವಯಂಪ್ರೇರಿತ ರಕ್ತದಾನದ ಮಹತ್ವ, ಸುರಕ್ಷಿತ ರಕ್ತದಾನದ ಬಗ್ಗೆ ಜಾಗೃತಿ ಮೂಡಿಸುವ ಅಗತ್ಯತೆ ಹಾಗೂ ಯುವಜನರನ್ನು ಮಾನವೀಯ ಚಟುವಟಿಕೆಗಳಲ್ಲಿ ಭಾಗವಹಿಸಲು ಪ್ರೋತ್ಸಾಹಿಸುವ ಕುರಿತು ಡಾ. ಚಾಂದಿನಿ ದೇವಾಡಿ ಅವರು ವಿವರಿಸಿದರು.
ಕಾರ್ಯಕ್ರಮದ ಅಧ್ಯಕ್ಷರಾದ ಡಾ. ಅಡಿವೇಶ್ ಅರಕೇರಿ ಅವರು ರಕ್ತದಾನ ಶಿಬಿರದಲ್ಲಿ ರಕ್ತದಾನಿಗಳ ಪಾತ್ರ ಅತ್ಯಂತ ಮಹತ್ವದ್ದಾಗಿದೆ. ಅವರ ದಾನವು ಅಗತ್ಯವಿರುವ ರೋಗಿಗಳ ಜೀವ ಉಳಿಸಲು ಸಹಕಾರಿಯಾಗುತ್ತದೆ ಎಂದು ತಿಳಿಸಿದರು.
ಬೆಳಗಾವಿ ನಗರದಲ್ಲಿ ಅನೇಕ ಬಾರಿ ರಕ್ತದಾನ ಮಾಡಿದ ದಾನಿಗಳನ್ನು ಸಮಾಜಕ್ಕೆ ನೀಡಿದ ಅಮೂಲ್ಯ ಕೊಡುಗೆಯನ್ನು ಗುರುತಿಸಿ ಸನ್ಮಾನಿಸಲಾಯಿತು.
ರೋಗನಿದಾನ ವಿಭಾಗದ ಸಹಾಯಕ ಪ್ರಾಧ್ಯಾಪಕರಾದ ಡಾ. ಸಾಗರ ಎಸ್. ಕೆ. ಅವರು ಕಾರ್ಯಕ್ರಮದ ಸಂಘಟನಾ ಕಾರ್ಯದರ್ಶಿಯಾಗಿ ಕಾರ್ಯನಿರ್ವಹಿಸಿದರು.
ಎನ್ಎಸ್ಎಸ್ ಕಾರ್ಯಕ್ರಮಾಧಿಕಾರಿಗಳಾದ ಡಾ. ನವೀನ್ ಎ. ಎಂ.ಅವರು ಕಾರ್ಯಕ್ರಮದ ಸಮನ್ವಯವನ್ನು ವಹಿಸಿಕೊಂಡಿದ್ದರು.
ಉದ್ಘಾಟನಾ ಸಮಾರಂಭದ ನಂತರ ರವರೆಗೆ ರಕ್ತದಾನದ ಕುರಿತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವ ಉದ್ದೇಶದಿಂದ ಜಾಗೃತಿ ರ್ಯಾಲಿ ನಡೆಸಲಾಯಿತು. ಈ ರ್ಯಾಲಿಯಲ್ಲಿ ಸುಮಾರು 500 ಜನರು ಭಾಗವಹಿಸಿದರು.

ವಿದ್ಯಾರ್ಥಿಗಳು, ಅಧ್ಯಾಪಕರು, ಆಸ್ಪತ್ರೆಯ ಸಿಬ್ಬಂದಿ ಹಾಗೂ ಸಾರ್ವಜನಿಕರು ಉತ್ಸಾಹದಿಂದ ಭಾಗವಹಿಸಿದ್ದು, ಒಟ್ಟು ಸುಮಾರು 125 ಯೂನಿಟ್ ರಕ್ತ ಸಂಗ್ರಹಿಸಲಾಯಿತು.




