
ಕಾಂಗ್ರೆಸ್ಸೀಕರಣಕ್ಕೆ ಕರ್ನಾಟಕ ದಿಕ್ಸೂಚಿ: ಕೆಪಿಸಿಸಿ ಅಧ್ಯಕ್ಷರ ಪದಗ್ರಹಣ ಸಮಾರಂಭದಲ್ಲಿ ಲಕ್ಷ್ಮೀ ಹೆಬ್ಬಾಳ್ಕರ್
ಪ್ರಗತಿವಾಹಿನಿ ಸುದ್ದಿ: ಪಕ್ಷನಿಷ್ಠೆ, ಸೈದ್ಧಾಂತಿಕ ಬದ್ಧತೆಗೆ ಇಡೀ ದೇಶದಲ್ಲಿ ಹೆಸರು ಮಾಡಿರುವ ಬಿಕೆ ಹರಿಪ್ರಸಾದ್ ನೇತೃತ್ವದ ಪಕ್ಷ ಸಂಘಟನೆ ಮತ್ತು ಅಭಿವೃದ್ಧಿಯನ್ನೇ ಧ್ಯೇಯವಾಗಿಟ್ಟುಕೊಂಡ ಡಿಕೆ ಶಿವಕುಮಾರ್ ಅವರ ಆಡಳಿತದ ಮೂಲಕ ಕರ್ನಾಟಕದ ಕಾಂಗ್ರೆಸ್ ಇಡೀ ದೇಶಕ್ಕೆ ಹೊಸ ದಿಕ್ಸೂಚಿ ನೀಡಲಿದೆ. ಆಮೂಲಕ ಮತ್ತೆ ದೇಶವ್ಯಾಪಿ ಕಾಂಗ್ರೆಸ್ಸೀಕರಣಕ್ಕೆ ನಾಂದಿ ಹಾಡಲಿದೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಮಾಜಿ ಸಚಿವೆ, ಬೆಳಗಾವಿ ಗ್ರಾಮೀಣ ಕ್ಷೇತ್ರದ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದ್ದಾರೆ.
ಬೆಂಗಳೂರಿನ ಅರಮನೆ ಮೈದಾನದಲ್ಲಿ ಕೆಪಿಸಿಸಿ ನೂತನ ಅಧ್ಯಕ್ಷರಾಗಿ ಬಿಕೆ ಹರಿಪ್ರಸಾದ್ ಪದಗ್ರಹಣ ಸಮಾರಂಭದಲ್ಲಿ ಮಾತನಾಡಿದ ಲಕ್ಷ್ಮೀ ಹೆಬ್ಬಾಳ್ಕರ್ ಸೇರಿದ್ದ ಸಾವಿರಾರು ಕಾರ್ಯಕರ್ತರಿಗೆ ಉತ್ಸಾಹ ತುಂಬಿದರು. ಜನಪರ ಮತ್ತು ಅಭಿವೃದ್ಧಿ ಪರ ಆಡಳಿತಕ್ಕಾಗಿ ಕಾಂಗ್ರೆಸ್ ಸರ್ಕಾರಕ್ಕೆ ಜನಮೆಚ್ಚುಗೆ ಇದೆ ಎನ್ನುವುದಕ್ಕೆ ಮೊನ್ನೆ ವಿಧಾನ ಪರಿಷತ್ ಚುನಾವಣೆಯಲ್ಲಿ ಬಂದಿರುವ ಫಲಿತಾಂಶ ಸಾಕ್ಷಿಯಾಗಿದೆ. ವಿಪಕ್ಷದ ಬಿಜೆಪಿ ಮತ್ತು ಜೆಡಿಎಸ್ ಶಾಸಕರೇ ಕಾಂಗ್ರೆಸ್ ಅಭ್ಯರ್ಥಿ ಪರವಾಗಿ ಮತ ಚಲಾಯಿಸಿದ್ದು ಇಡೀ ದೇಶಕ್ಕೆ ಹೊಸ ಸಂದೇಶವನ್ನು ನೀಡಿದೆ. ಇಡೀ ದೇಶದಲ್ಲಿ ಬಿಜೆಪಿಯ ದ್ವೇಷದ ರಾಜಕಾರಣ ವಿಜೃಂಭಿಸುತ್ತಿದ್ದರೆ, ರಾಜ್ಯದಲ್ಲಿ ಸ್ನೇಹದ ರಾಜಕಾರಣ ಕಾಣುತ್ತಿದ್ದೇವೆ ಎಂದು ಹೇಳಿದರು.

1980ರ ಕಾಲದಲ್ಲಿ ಸೇವಾದಳ, ಎನ್ಎಸ್ ಯುಐ ಮೂಲಕ ಮೇಲಕ್ಕೆ ಬಂದ ಬಿಕೆ ಹರಿಪ್ರಸಾದರು ಎಐಸಿಸಿ ಕಾರ್ಯದರ್ಶಿಯಾಗಿ ಇಡೀ ದೇಶದಲ್ಲಿ 19ಕ್ಕು ಹೆಚ್ಚು ರಾಜ್ಯಗಳಲ್ಲಿ ಉಸ್ತುವಾರಿಯಾಗಿ ಕೆಲಸ ಮಾಡಿದವರು. ಸುದೀರ್ಘ ರಾಜಕಾರಣದಲ್ಲಿ ಎಂದೂ ಅಧಿಕಾರದ ಹಿಂದೆ ಹೋದವರಲ್ಲ. ಸದಾ ತನ್ನ ಕರ್ಮವನ್ನು ಮಾಡುತ್ತಲೇ ಬಂದ ಹರಿಪ್ರಸಾದ್ ಮತ್ತು ಡಿಕೆ ಶಿವಕುಮಾರ್ ಅವರನ್ನು ಗುರುತಿಸಿ ಹೈಕಮಾಂಡ್ ಗುರುತರ ಜವಾಬ್ದಾರಿ ಕೊಟ್ಟಿದೆ. ಮುಖ್ಯಮಂತ್ರಿ ಆದರೂ ಡಿಕೆ ಶಿವಕುಮಾರ್ ಅವರು ತಾನೊಬ್ಬ ಜನಸೇವಕ ಎಂದೇ ಹೇಳುತ್ತಾರೆ. ಇವರಿಬ್ಬರ ರಾಜಕೀಯ ಹಾದಿ ಪಕ್ಷದ ಯುವ ಕಾರ್ಯಕರ್ತರಿಗೆ ಮಾದರಿಯಾಗಿದೆ ಎಂದು ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದರು.
ಇವರ ನಾಯಕತ್ವದಲ್ಲಿ ಮುಂದಿನ ಗ್ರಾಮ ಪಂಚಾಯತ್ ಮತ್ತು 2028ರ ಚುನಾವಣೆಯನ್ನು ಕಾಂಗ್ರೆಸ್ ಅಭೂತಪೂರ್ವ ರೀತಿಯಲ್ಲಿ ಗೆಲ್ಲಲಿದೆ. ಆಮೂಲಕ ಕಾಂಗ್ರೆಸ್ ಪಕ್ಷಕ್ಕೆ ಹೊಸ ಶಕ್ತಿ ಸಿಗಲಿದೆ. ಇದಕ್ಕಾಗಿ ನಮ್ಮೆಲ್ಲ ಕಾರ್ಯಕರ್ತರು ಪಕ್ಷ ಸಂಘಟನೆಗಾಗಿ ಶಕ್ತಿ ತುಂಬುವ ಕೆಲಸ ಮಾಡಬೇಕಾಗಿದೆ ಎಂದು ಹೆಬ್ಬಾಳ್ಕರ್ ಕರೆ ನೀಡಿದರು.
“ಕಾರ್ಯಕರ್ತರೇ ಪಕ್ಷದ ಜೀವಾಳ. ಕಾರ್ಯಕರ್ತರಿಲ್ಲದೆ ಪಕ್ಷವಿಲ್ಲ, ಪಕ್ಷವಿಲ್ಲದೆ ಸರ್ಕಾರವಿಲ್ಲ” ಎಂದು ಹೇಳಿದ ಲಕ್ಷ್ಮಿ ಹೆಬ್ಬಾಳ್ಕರ್, ಗ್ರಾಮ ಮಟ್ಟದಿಂದ ಸಂಘಟನೆಯನ್ನು ಮತ್ತಷ್ಟು ಬಲಪಡಿಸುವಂತೆ ಕರೆ ನೀಡಿದರು. “ಬಿ.ಕೆ. ಹರಿಪ್ರಸಾದ್ ಅವರ ನಾಯಕತ್ವದಲ್ಲಿ ಬಿಬಿಎಂಪಿ, ಸ್ಥಳೀಯ ಸಂಸ್ಥೆಗಳು ಹಾಗೂ ಮುಂಬರುವ ಎಲ್ಲ ಚುನಾವಣೆಗಳಲ್ಲಿ ಕಾಂಗ್ರೆಸ್ ವಿಜಯದ ನೂತನ ಇತಿಹಾಸ ಬರೆಯಲಿದೆ” ಎಂದು ಹೇಳಿದರು.
ಸಮಾರಂಭದಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಎಐಸಿಸಿ ಉಸ್ತುವಾರಿ ರಣದೀಪ್ ಸುರ್ಜೇವಾಲ, ಮುಖ್ಯಮಂತ್ರಿ ಡಿಕೆ ಶಿವಕುಮಾರ್, ಮಾಜಿ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಾ.ಜಿ ಪರಮೇಶ್ವರ್ ಸೇರಿದಂತೆ ಎಲ್ಲ ಸಚಿವರು, ಪಕ್ಷದ ನಾಯಕರು ಉಪಸ್ಥಿತರಿದ್ದರು.


