Karnataka NewsLatestPolitics

*ಅರಣ್ಯವಾಸಿಗಳ ಹಕ್ಕುಗಳ ರಕ್ಷಣೆ, ಮೂಲಭೂತ ಸೌಲಭ್ಯಗಳಿಗೆ ಆದ್ಯತೆ ನೀಡಿ: ಅಧಿಕಾರಿಗಳಿಗೆ ಸಿಎಂ ಸೂಚನೆ*

ಪ್ರಗತಿವಾಹಿನಿ ಸುದ್ದಿ: ವಿಧಾನಸೌಧದಲ್ಲಿ ಸೋಮವಾರ ನಡೆದ ಅರಣ್ಯ ಇಲಾಖೆ ಪ್ರಗತಿ ಪರಿಶೀಲನೆ ಸಭೆಯಲ್ಲಿ ಸಿಎಂ ಡಿ ಕೆ ಶಿವಕುಮಾರ್ ಅವರು ಅಧಿಕಾರಿಗಳಿಗೆ ಹಲವು ಮಹತ್ವದ ಸೂಚನೆಗಳನ್ನು ನೀಡಿದ್ದಾರೆ.

ಸಭೆ ಹೈಲೈಟ್ಸ್:

ಗಣಿಗಾರಿಕೆ ಸೇರಿ ನಾನಾ ಚಟುವಟಿಕೆಗಳಿಗೆ ಸರ್ಕಾರಿ ಜಾಗ ಪಡೆದು ವರ್ಷಗಳ ಕಾಲ ಚಟುವಟಿಕೆ ಆರಂಭಿಸದಿದ್ದರೆ ಕ್ರಮ ಕೈಗೊಳ್ಳಿ.

ಬಾಕಿ ಇರುವ ಅರಣ್ಯ ಅನುಮತಿ ಪ್ರಕರಣಗಳನ್ನು ಜುಲೈ 15ರೊಳಗೆ ಇತ್ಯರ್ಥಪಡಿಸಿ.

Home add -Advt

ಅರಣ್ಯವಾಸಿಗಳ ಹಕ್ಕುಗಳ ರಕ್ಷಣೆ, ಮೂಲಭೂತ ಸೌಲಭ್ಯಗಳಿಗೆ ಆದ್ಯತೆ ನೀಡಿ.

ನಮ್ಮ ಅರಣ್ಯ ಪ್ರಾಣಿ ಸಂಪತ್ತು ಅಮೂಲ್ಯವಾದದ್ದು. ಸಂರಕ್ಷಣೆ ಪರಿಣಾಮಕಾರಿಯಾಗಿ ಆಗಬೇಕು.

ಕೈಗಾರಿಕೆ ಹಾಗೂ ಗಣಿಗಾರಿಕೆ ಯೋಜನೆಗಳಿಗೆ ಅಗತ್ಯವಿರುವ ಎಲ್ಲಾ ಅನುಮತಿಗಳನ್ನು ನಿಗದಿತ ಕಾಲಮಿತಿಯೊಳಗೆ ನೀಡುವ ವ್ಯವಸ್ಥೆ ಮಾಡಬೇಕು.

ಸರ್ಕಾರದ ಜಾಗವನ್ನು ಪಡೆದು ಐದಾರು ವರ್ಷಗಳ ಕಾಲ ಖಾಲಿ ಬಿಟ್ಟರೆ ಸರ್ಕಾರಕ್ಕೆ ಯಾವುದೇ ಆದಾಯ ದೊರೆಯುವುದಿಲ್ಲ. ಅಷ್ಟೇ ಅಲ್ಲದೆ, ಈ ಅವಧಿಯಲ್ಲಿ ಉತ್ಪಾದನಾ ವೆಚ್ಚ, ಸರಕುಗಳ ಬೆಲೆ ಹಾಗೂ ಯೋಜನೆಯ ಒಟ್ಟು ಮೌಲ್ಯವೂ ಹೆಚ್ಚಾಗುತ್ತದೆ. ಇಂತಹ ವಿಳಂಬವನ್ನು ಸಹಿಸುವುದಿಲ್ಲ.

ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿ ತುಷಾರ ಗಿರಿನಾಥ್ ಅವರು, ಬಾಕಿ ಇರುವ ಎಲ್ಲಾ ಹಳೆಯ ಅರಣ್ಯ ಅನುಮತಿ ಪ್ರಕರಣಗಳನ್ನು ಜುಲೈ 15ರೊಳಗೆ ಇತ್ಯರ್ಥಪಡಿಸಲು ಕ್ರಮ ಕೈಗೊಳ್ಳಲಾಗಿದೆ ಎಂದು ಮಾಹಿತಿ ನೀಡಿದರು.

*ಅರಣ್ಯ ಭೂಮಿ ಒತ್ತುವರಿ ತೆರವು, ಮಾನವ–ವನ್ಯಜೀವಿ ಸಂಘರ್ಷ ತಡೆ ಹಾಗೂ ಅರಣ್ಯ ಸಂರಕ್ಷಣೆಗೆ ಸಂಬಂಧಿಸಿದ ಕ್ರಮಗಳ ಕುರಿತು ಸಿಎಂ ಅವರು ಅಧಿಕಾರಿಗಳಿಂದ ಮಾಹಿತಿ ಪಡೆದು ಪರಿಶೀಲನೆ ನಡೆಸಿದರು.

ಅರಣ್ಯವಾಸಿಗಳ ಅರಣ್ಯ ಹಕ್ಕುಗಳನ್ನು ಯಾವುದೇ ಕಾರಣಕ್ಕೂ ಕಡೆಗಣಿಸಬಾರದು. ಸಣ್ಣಪುಟ್ಟ ನೆಪಗಳನ್ನು ಮುಂದಿಟ್ಟು ಅವರಿಗೆ ತೊಂದರೆ ನೀಡಬಾರದು. ನಿಯಮಾನುಸಾರ ಕುಡಿಯುವ ನೀರು, ರಸ್ತೆ, ವಿದ್ಯುತ್ ಸೇರಿದಂತೆ ಅಗತ್ಯ ಮೂಲಭೂತ ಸೌಲಭ್ಯಗಳನ್ನು ಒದಗಿಸಲು ಆದ್ಯತೆ ನೀಡಬೇಕು ಎಂದು ಸಿಎಂ ಸೂಚಿಸಿದರು.

ನೆಡುತೋಪು ನಿರ್ಮಾಣ ಹಾಗೂ ಸಾರ್ವಜನಿಕರಿಗೆ ಸಸಿ ವಿತರಣೆ ಕಾರ್ಯಕ್ರಮಗಳನ್ನು ಇನ್ನಷ್ಟು ಪರಿಣಾಮಕಾರಿಯಾಗಿ ಜಾರಿಗೊಳಿಸುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

ಇಲಾಖೆಯ ಆಡಳಿತ ವ್ಯವಸ್ಥೆ, ಪ್ರಮುಖ ಯೋಜನೆಗಳು ಹಾಗೂ ವಿವಿಧ ಹಂತಗಳಲ್ಲಿ ಖಾಲಿ ಇರುವ ಹುದ್ದೆಗಳ ಕುರಿತು ಸಮಗ್ರ ಮಾಹಿತಿ ಪಡೆದು, ಅಗತ್ಯ ಹುದ್ದೆಗಳ ಭರ್ತಿಗೆ ಕ್ರಮ ಕೈಗೊಳ್ಳುವ ಕುರಿತು ಸಿಎಂ ಚರ್ಚೆ ನಡೆಸಿದರು.

ಬೆಳೆನಾಶ, ಜಾನುವಾರು ಜೀವಹಾನಿ, ಮಾನವ ಪ್ರಾಣ ಹಾನಿ, ಶಾಶ್ವತ ಅಂಗವಿಕಲತೆ, ಭಾಗಶಃ ಅಂಗವಿಕಲತೆ, ಮಾನವ ಗಾಯ, ಆಸ್ತಿನಾಶ, ಮಾಶಾಸನ ಗಳಿಗಾಗಿ ೨೦೨೫-೨೦೨೬ನೇ ಸಾಲಿನಲ್ಲಿ ೬೩೦೬ ಲಕ್ಷ ರೂ ಪರಿಹಾರ ವಿತರಿಸಲಾಗಿದೆ. ಮಾನವ, ಅರಣ್ಯಜೀವಿ ಸಂಘರ್ಷ ತಪ್ಪಿಸಲು ರೇಲ್ವೇ ಬ್ಯಾರಿಕೇಡ್‌, ಆನೆತಡೆ ಕಂದಕ ಮತ್ತು ಸೌರತಂತಿ ಬೇಲಿಗಳನ್ನು ಅಳವಡಿಸಲಾಗುತ್ತಿರುವ ಬಗ್ಗೆ ಹಾಗೂ ಆನೆ ಕಾರ್ಯಪಡೆ, ಚಿರತೆ ಕಾರ್ಯಪಡೆ ಹಾಗೂ ಎಸ್‌ಎಂಎಸ್‌ ಮತ್ತು ಇತರೆ ಡಿಜಿಟಲ್‌ ಬೋರ್ಡ್‌ಗಳ ಮೂಲಕ ಅರಿವು ಮೂಡಿಸುತ್ತಿರುವ ಪ್ರಮಾಣಗಳ ಬಗ್ಗೆ ಅಧಿಕಾರಿಗಳು ಸಭೆಗೆ ಮಾಹಿತಿ ನೀಡಿದರು.

*ಇದಕ್ಕೆ ಪ್ರತಿಕ್ರಿಯಿಸಿದ ಮುಖ್ಯಮಂತ್ರಿಗಳು, ಪ್ರಾಣಿಗಳು ಸಹ ಈ ಎಲ್ಲಾ ಅಡೆತಡೆಗಳನ್ನು ದಾಟಲು ನಾನಾ ಮಾರ್ಗಗಳನ್ನು ಕಂಡುಕೊಳ್ಳುತ್ತವೆ. ಹೀಗಾಗಿ ಅಧಿಕಾರಿಗಳು ಕೂಡ ಆಗಾಗ ಇತರೆ ಹೊಸ ಮಾರ್ಗೋಪಾಯಗಳ ಬಗ್ಗೆ ಅಧ್ಯಯನ ನಡೆಸಬೇಕು ಎಂದು ಸೂಚನೆ ನೀಡಿದರು.

ಚರ್ಚೆ ಆದ ಇತರೆ ವಿಚಾರಗಳು:

  • ಇಲಾಖೆಯ ಖಾಲಿ ಹುದ್ದೆಗಳ ಭರ್ತಿ ಕುರಿತು ಪರಿಶೀಲನೆ ಮತ್ತು ಚರ್ಚೆ.
  • ಪ್ರಾಣಿ ಸಂಪತ್ತಿನ ಮೇಲೆ ನಿಗಾ ಇಡಲು ಥರ್ಮಲ್‌ ದ್ರೋಣ್‌ ವ್ಯವಸ್ಥೆ.
  • ಶರಾವತಿ ಪಂಪ್ ಸ್ಟೋರೇಜ್‌, ಗೋವಾ ತಮ್ನೇರ್‌, ಕಳಸಾ ಬಂಡೂರಿ ಮತ್ತು ಬಿಡಿಎ ಫೆರಿಫೆರಲ್‌ ರಿಂಗ್‌ ರಸ್ತೆ ವಿಚಾರಕ್ಕೆ ಸಂಬಂಧಿಸಿದಂತೆ ರಾಜ್ಯ ಮತ್ತು ಕೇಂದ್ರ ಅರಣ್ಯ ಇಲಾಖೆಗಳ ವಿವಿಧ ಹಂತಗಳಲ್ಲಿ ಬಾಕಿ ಇರುವ ಅರಣ್ಯ ಅನುಮತಿ ವಿಚಾರಗಳಲ್ಲಿ ತ್ವರಿತ ಗತಿಯಲ್ಲಿ ಕ್ರಮ ವಹಿಸುವಂತೆ ಸೂಚನೆ.
    *ಸರಕಾರದ ಮುಖ್ಯ ಕಾರ್ಯದರ್ಶಿ ಡಾ ಶಾಲಿನಿ ರಜನೀಶ್, ಅಪರ ಮುಖ್ಯ ಕಾರ್ಯದರ್ಶಿಗಳಾದ ತುಷಾರ್ ಗಿರಿನಾಥ್, ರಿತೇಶ್ ಕುಮಾರ್ ಸಿಂಗ್, ಅಂಜುಮ್ ಪರ್ವೇಜ್, ಕರ್ನಾಟಕ ಅರಣ್ಯ ಪಡೆ ಮುಖ್ಯಸ್ಥರಾದ ಮೀನಾಕ್ಷಿ ನೇಗಿ, ಸಿಎಂ ಆರ್ಥಿಕ ಸಲಹೆಗಾರ ಎಲ್ ಕೆ ಅತೀಕ್ ಮತ್ತಿತರ ಅಧಿಕಾರಿಗಳು ಸಭೆಯಲ್ಲಿ ಉಪಸ್ಥಿತರಿದ್ದರು.

Related Articles

Back to top button