*ವಚನ ಸಾಹಿತ್ಯ ಸಂರಕ್ಷಣೆಯಲ್ಲಿ ಡಾ.ಫ.ಗು.ಹಳಕಟ್ಟಿ ಅವರ ಕೊಡುಗೆ ಅಪಾರ*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಡಾ.ಫ.ಗು. ಹಳಕಟ್ಟಿ ಅವರು ಸಾಮಾಜಿಕ, ಶೈಕ್ಷಣಿಕ ಹಾಗೂ ಧಾರ್ಮಿಕವಾಗಿ ಹಲವಾರು ಕೊಡುಗೆಗಳನ್ನು ನೀಡಿದ್ದಾರೆ. ಕಷ್ಟಕರ ಜೀವನದಲ್ಲಿಯೂ ವಚನ ಸಾಹಿತ್ಯಕ್ಕೆ ಕೊಡುಗೆ ನೀಡಿದಂತಹ ಫ.ಗು. ಹಳಕಟ್ಟಿ ಅವರ ತತ್ವ ಸಿದ್ಧಾಂತಗಳನ್ನು ಪಾಲಿಸಲು ನಾಗನೂರು ರುದ್ರಾಕ್ಷಿಮಠದ ಡಾ.ಅಲ್ಲಮಪ್ರಭು ಸ್ವಾಮಿಗಳು ನುಡಿದರು.
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಮಹಾನಗರ ಪಾಲಿಕೆ ಬೆಳಗಾವಿ ಇವರ ಸಂಯುಕ್ತ ಆಶ್ರಯದಲ್ಲಿ ನಗರದ ಕುಮಾರ ಗಂಧರ್ವ ರಂಗ ಮಂದಿರದಲ್ಲಿ ಗುರುವಾರ(ಜು. 2) ಜರುಗಿದ ವಚನ ಪಿತಾಮಹ ಡಾ.ಫ.ಗು ಹಳಕಟ್ಟಿ ರವರ ಜನ್ಮದಿನ ಹಾಗೂ ವಚನ ಸಾಹಿತ್ಯ ಸಂರಕ್ಷಣಾ ದಿನಾಚರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಕಾರ್ಯಕ್ರಮದ ಉಪನ್ಯಾಸಕರಾಗಿ ಆಗಮಿಸಿದ್ದ ಬೀಮ್ಸ್ ವೈದ್ಯಾಧಿಕಾರಿ ಭವ್ಯ ಸಂಪಗಾರ ಅವರು ಮಾತನಾಡಿ ಡಾ.ಫ.ಗು ಹಳಕಟ್ಟಿ ಅವರು ವಕೀಲ ವೃತ್ತಿಯನ್ನು ಆರಂಭಿಸಿದ ಸಂದರ್ಭದಲ್ಲಿ ಉತ್ತರ ಕರ್ನಾಟಕ ಭಾಗದಲ್ಲಿನ ಶೈಕ್ಷಣಿಕ ಕೊರತೆ ನಿವಾರಿಸುವ ನಿಟ್ಟಿನಲ್ಲಿ ಮಕ್ಕಳಿಗೆ ವಿದ್ಯಾಭ್ಯಾಸ ಹಾಗೂ ಬಡ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ನೀಡುವ ಮೂಲಕ ಪ್ರೋತ್ಸಾಹಿಸಿದ್ದರು.
ಮುಂದಿನ ಪೀಳಿಗೆಗೆ ನಮ್ಮ ಸಾಹಿತ್ಯದ ಪರಂಪರೆಯನ್ನು ಮುಂದುವರಿಸುವ ಉದ್ದೇಶದಿಂದ ತಾಳೆಗರಿಯಲ್ಲಿ ಇರುವ ಸಾಹಿತ್ಯವನ್ನು ಕೈ ಬರಹದಲ್ಲಿ ಬರೆದು ವಚನ ಸಾಹಿತ್ಯವನ್ನು ಸಂಗ್ರಹಿಸಿ ಸಂರಕ್ಷಣೆ ಮಾಡುವಲ್ಲಿ ಡಾ.ಫ.ಗು.ಹಳಕಟ್ಟಿ ಅವರ ಪಾತ್ರ ಅತೀ ಮುಖ್ಯವಾಗಿದೆ ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ಅಪರ ಜಿಲ್ಲಾಧಿಕಾರಿ ವಿಜಯಕುಮಾರ ಹೊನಕೇರಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಉಪ ನಿರ್ದೇಶಕಿ ವಿದ್ಯಾವತಿ ಭಜಂತ್ರಿ, ಜಾಗತಿಕ ಲಿಂಗಾಯತ ಮಹಾ ಸಭಾ ಅಧ್ಯಕ್ಷರಾದ ಬಸವರಾಜ ರೊಟ್ಟಿ, ಗಣ್ಯರುಗಳಾದ ರಾಜಶೇಖರ ಭೋಜ, ಅಶೋಕ ಮಳಗಲಿ, ಮುರಗೇಶ ಶಿವಪೂಜಿ ಸೇರಿದಂತೆ ವಿವಿಧ ಕಾಲೇಜುಗಳ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.




