*ಪ್ರವಾಹ ಪರಿಸ್ಥಿತಿ ವೀಕ್ಷಿಸಿ ಜನರಿಗೆ ಧೈರ್ಯ ತುಂಬಿದ ಶಾಸಕಿ ಶಶಿಕಲಾ ಜೊಲ್ಲೆ*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಕಳೆದ ಎರಡು ದಿನಗಳಿಂದ ಮಹಾರಾಷ್ಟ್ರದಲ್ಲಿ ಸುರಿಯುತ್ತಿರುವ ಭಾರಿ ಮಳೆಯಿಂದಾಗಿ ನಿಪ್ಪಾಣಿ ಮತಕ್ಷೇತ್ರದ ನದಿಗಳು ಅಪಾಯದ ಮಟ್ಟ ಮೀರಿ ಹರಿಯುತ್ತಿದ್ದು, ಪ್ರವಾಹ ಪರಿಸ್ಥಿತಿ ಎದುರಾಗಿದ್ದು, ಪ್ರವಾಹ ಪರಿಸ್ಥಿತಿ ವೀಕ್ಷಿಸಿದ ಶಾಸಕಿ ಶಶಿಕಲಾ ಜೊಲೆ ಅವರು ನದಿ ತೀರದ ಜನರೊಂದಿಗೆ ನಾವಿದ್ದೇವೆ ಎಂದು ಭರವಸೆ ನೀಡಿದ್ದಾರೆ.
ಶಶಿಕಲಾ ಜೊಲ್ಲೆ ಅವರು ಸೋಮವಾರ ಕ್ಷೇತ್ರದ ಭೀವಶಿ ಗ್ರಾಮಕ್ಕೆ ಖುದ್ದಾಗಿ ಭೇಟಿ ನೀಡಿ, ವೇದಗಂಗಾ ನದಿಯ ನೀರಿನ ಮಟ್ಟ ಹಾಗೂ ಪ್ರವಾಹ ಪರಿಸ್ಥಿತಿಯನ್ನು ವೀಕ್ಷಿಸಿದರು.
ಮಹಾರಾಷ್ಟ್ರದ ಮಳೆಯ ಆರ್ಭಟಕ್ಕೆ ಈಗಾಗಲೇ ನಿಪ್ಪಾಣಿ ಕ್ಷೇತ್ರದ ಕಾರದಗಾ, ಜತ್ರಾಟ ಹಾಗೂ ಸಿದ್ನಾಳ ಸೇತುವೆಗಳು ಜಲಾವೃತಗೊಂಡಿದ್ದು, ಜನಸಂಪರ್ಕ ಕಡಿತಗೊಂಡಿದೆ. ಈ ಹಿನ್ನೆಲೆಯಲ್ಲಿ ನದಿ ತೀರದ ಗ್ರಾಮಸ್ಥರೊಂದಿಗೆ ಮಾತನಾಡಿದ ಶಾಸಕರು, ಸಾರ್ವಜನಿಕರು ಧೃತಿಗೆಡಬಾರದು ಎಂದು ಧೈರ್ಯ ತುಂಬಿದರು.
ನದಿ ತೀರದ ಜನರೊಂದಿಗೆ ನಾವಿದ್ದೇವೆ. ಸಾರ್ವಜನಿಕರು ಯಾವುದೇ ಕಾರಣಕ್ಕೂ ಆತಂಕ ಪಡುವ ಅಗತ್ಯವಿಲ್ಲ. ಪ್ರವಾಹ ಪರಿಸ್ಥಿತಿಯನ್ನು ಸಮರ್ಥವಾಗಿ ಎದುರಿಸಲು ಸರ್ಕಾರ ಹಾಗೂ ಆಡಳಿತ ಮಂಡಳಿಯಿಂದ ಎಲ್ಲಾ ಅಗತ್ಯ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ. ಸಾರ್ವಜನಿಕರು ಕೂಡ ಮುನ್ನೆಚ್ಚರಿಕೆ ವಹಿಸಬೇಕು. ಶೀಘ್ರದಲ್ಲೇ ತಾಲೂಕು ಮಟ್ಟದ ಅಧಿಕಾರಿಗಳೊಂದಿಗೆ ಪ್ರವಾಹ ಪರಿಸ್ಥಿತಿ ಕುರಿತು ತುರ್ತು ಸಭೆ ನಡೆಸಿ ಸೂಕ್ತ ವ್ಯವಸ್ಥೆ ಕಲ್ಪಿಸಲಾಗುವುದು ಎಂದು ಭರವಸೆ ನೀಡಿದರು.




