Belagavi NewsBelgaum NewsKannada NewsKarnataka NewsLatest

*ರೈತರ ಕುಟುಂಬಗಳ ಸಂಕಷ್ಟಕ್ಕೆ ಸ್ಪಂದಿಸಿದ ಲಕ್ಷ್ಮೀ ಹೆಬ್ಬಾಳಕರ್: ಪರಿಹಾರದ ಚೆಕ್ ವಿತರಣೆ, ಸಾಂತ್ವನ*

ಪ್ರಗತಿವಾಹಿನಿ ಸುದ್ದಿ | ಬೆಳಗಾವಿ:

ಬೆಳಗಾವಿ ಗ್ರಾಮೀಣ ವಿಧಾನಸಭಾ ಕ್ಷೇತ್ರದ ವಿವಿಧ ಗ್ರಾಮಗಳಲ್ಲಿ ರೈತರು ಆತ್ಮಹತ್ಯೆ ಮಾಡಿಕೊಂಡಿರುವ ಹಾಗೂ ಆಕಸ್ಮಿಕವಾಗಿ ಸಾವನ್ನಪ್ಪಿರುವ ಕುಟುಂಬಗಳಿಗೆ ರಾಜ್ಯ ಸರ್ಕಾರದಿಂದ ಮಂಜೂರಾಗಿರುವ ಪರಿಹಾರಧನದ ಚೆಕ್‌ಗಳನ್ನು ಮಾಜಿ ಸಚಿವೆ ಹಾಗೂ ಬೆಳಗಾವಿ ಗ್ರಾಮೀಣ ಕ್ಷೇತ್ರದ ಶಾಸಕಿ ಲಕ್ಷ್ಮೀ ಹೆಬ್ಬಾಳಕರ್ ಅವರು ಮಂಗಳವಾರ ವಿತರಿಸಿ, ಕುಟುಂಬ ಸದಸ್ಯರಿಗೆ ಸಾಂತ್ವನ ಹೇಳಿದರು.

ಸರ್ಕಾರದ ಪರಿಹಾರ ಸೌಲಭ್ಯವನ್ನು ಶೀಘ್ರವಾಗಿ ಸಂತ್ರಸ್ತ ಕುಟುಂಬಗಳಿಗೆ ತಲುಪಿಸುವ ಉದ್ದೇಶದಿಂದ ಆಯೋಜಿಸಲಾದ ಕಾರ್ಯಕ್ರಮದಲ್ಲಿ ಫಲಾನುಭವಿಗಳಿಗೆ ಪರಿಹಾರದ ಚೆಕ್‌ಗಳನ್ನು ಹಸ್ತಾಂತರಿಸಿದ ಅವರು, ಕುಟುಂಬದ ಸದಸ್ಯರೊಂದಿಗೆ ಕೆಲಕಾಲ ಮಾತುಕತೆ ನಡೆಸಿ ಧೈರ್ಯ ತುಂಬಿದರು.

Home add -Advt

ಹಿಂಡಲಗಾ ಗ್ರಾಮದ ಅಶೋಕ ಮಾರುತಿ ಉಚಗಾಂವ್ಕರ್ ಅವರು ಆಕಸ್ಮಿಕವಾಗಿ ಸಾವನ್ನಪ್ಪಿದ ಹಿನ್ನೆಲೆಯಲ್ಲಿ ಅವರ ಕುಟುಂಬಕ್ಕೆ 2 ಲಕ್ಷ ರೂಪಾಯಿ ಪರಿಹಾರದ ಚೆಕ್ ನೀಡಲಾಯಿತು.

ಅರಳಿಕಟ್ಟಿ ಗ್ರಾಮದ ರೈತ ನೀಲಕಂಠ ಸಿದ್ದಪ್ಪ ಯಳ್ಳೂರ್ ಅವರು ಆತ್ಮಹತ್ಯೆ ಮಾಡಿಕೊಂಡ ಹಿನ್ನೆಲೆಯಲ್ಲಿ ಅವರ ಕುಟುಂಬಕ್ಕೆ ಸರ್ಕಾರದಿಂದ ಮಂಜೂರಾದ 5 ಲಕ್ಷ ರೂಪಾಯಿ ಪರಿಹಾರದ ಚೆಕ್ ವಿತರಿಸಲಾಯಿತು.

ಅದೇ ರೀತಿ ಹಿರೇಬಾಗೇವಾಡಿ ಗ್ರಾಮದ ರೈತ ಈರಣಗೌಡ ಬಸನಗೌಡ ಹಾದಿಮನಿ ಅವರು ಆತ್ಮಹತ್ಯೆ ಮಾಡಿಕೊಂಡ ಹಿನ್ನೆಲೆಯಲ್ಲಿ ಅವರ ಕುಟುಂಬಕ್ಕೂ 5 ಲಕ್ಷ ರೂಪಾಯಿ ಪರಿಹಾರದ ಚೆಕ್ ಹಸ್ತಾಂತರಿಸಲಾಯಿತು.

ಈ ಸಂದರ್ಭದಲ್ಲಿ ಮಾತನಾಡಿದ ಲಕ್ಷ್ಮೀ ಹೆಬ್ಬಾಳಕರ್, “ಕುಟುಂಬದ ಆಧಾರಸ್ತಂಭವನ್ನು ಕಳೆದುಕೊಳ್ಳುವ ನೋವನ್ನು ಯಾವುದೇ ಪರಿಹಾರಧನ ಭರಿಸಲು ಸಾಧ್ಯವಿಲ್ಲ. ಆದರೆ ಇಂತಹ ಸಂಕಷ್ಟದ ಸಂದರ್ಭಗಳಲ್ಲಿ ಸರ್ಕಾರ ನಿಮ್ಮೊಂದಿಗಿದೆ ಎಂಬ ಭರವಸೆಯನ್ನು ನೀಡುವುದು ನಮ್ಮ ಕರ್ತವ್ಯ. ಸಂಕಷ್ಟದಲ್ಲಿರುವ ರೈತರ ಕುಟುಂಬಗಳಿಗೆ ಅಗತ್ಯ ನೆರವು ಹಾಗೂ ಸರ್ಕಾರಿ ಸೌಲಭ್ಯಗಳು ತಲುಪುವಂತೆ ನಿರಂತರವಾಗಿ ಕೆಲಸ ಮಾಡಲಾಗುತ್ತಿದೆ,” ಎಂದು ಹೇಳಿದರು.

ರಾಜ್ಯ ಸರ್ಕಾರ ರೈತರ ಕಲ್ಯಾಣಕ್ಕೆ ಅತ್ಯಂತ ಆದ್ಯತೆ ನೀಡಿದ್ದು, ರೈತರ ಕುಟುಂಬಗಳ ಆರ್ಥಿಕ ಮತ್ತು ಸಾಮಾಜಿಕ ಭದ್ರತೆಯನ್ನು ಕಾಪಾಡುವ ನಿಟ್ಟಿನಲ್ಲಿ ಹಲವು ಕಲ್ಯಾಣ ಕಾರ್ಯಕ್ರಮಗಳನ್ನು ಜಾರಿಗೊಳಿಸಿದೆ. ಸಂಕಷ್ಟದಲ್ಲಿರುವ ಯಾವುದೇ ರೈತ ಕುಟುಂಬ ಸರ್ಕಾರದ ನೆರವಿನಿಂದ ವಂಚಿತರಾಗದಂತೆ ಅಧಿಕಾರಿಗಳೂ ಕಾರ್ಯನಿರ್ವಹಿಸಬೇಕು ಎಂದು ಅವರು ಸೂಚಿಸಿದರು.

ಈ ಸಂದರ್ಭದಲ್ಲಿ ಸ್ಥಳೀಯ ಮುಖಂಡರು, ಗ್ರಾಮಸ್ಥರು ಹಾಗೂ ಸಂಬಂಧಿತ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.

Related Articles

Back to top button