*ಡಿಕೆಶಿ ಸಂಪುಟದಲ್ಲಿ ನನಗೂ ಸ್ಥಾನ ಸಿಗಲಿ: ಹಾನಗಲ್ ಶಾಸಕ ಶ್ರೀನಿವಾಸ ಮಾನೆ*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಮುಂದೆ ಆಗುವ ಸಂಪುಟ ವಿಸ್ತರಣೆ ವೇಳೆ ನನಗೂ ಅವಕಾಶ ಕೊಡಬೇಕು, ನಾನೂ ಪ್ರಬಲ ಆಕಾಂಕ್ಷಿ ಎಂದು ಹಾನಗಲ್ ಶಾಸಕ ಶ್ರೀನಿವಾಸ ಮಾನೆ ಅವರು ತಿಳಿಸಿದ್ದಾರೆ.
ಬೆಳಗಾವಿಯ ನಗರದ ಪ್ರವಾಸಿ ಪ್ರವಾಸಿ ಮಂದಿರದಲ್ಲಿ ಸಿಎಂ ಡಿ.ಕೆ ಶಿವಕುಮಾರ ಅವರನ್ನು ಭೇಟಿ ಮಾಡಲು ಆಗಮಿಸಿದ ವೇಳೆ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಕರ್ನಾಟಕ ಸರ್ಕಾರದ ರಚನೆಯಲ್ಲಿ ಕಿತ್ತೂರು ಕರ್ನಾಟಕ ಪಾತ್ರ ಬಹುಮುಖ್ಯವಾಗಿದೆ. ಇಲ್ಲಿ ಅತಿಹೆಚ್ಚು ಸ್ಥಾನಗಳಿಸುವ ಪಕ್ಷವೇ ರಾಜ್ಯದಲ್ಲಿ ಅಧಿಕಾರಕ್ಕೆ ಬಂದಿರುವುದು ಇತಿಹಾಸ. ಕಿತ್ತೂರು ಕರ್ನಾಟಕ ಭಾಗಕ್ಕೆ ಮೊದಲ ಹಂತದಲ್ಲಿ ಇಬ್ಬರಿಗೆ ಅವಕಾಶ ಸಿಕ್ಕಿದೆ. ಸಂಪುಟ ವಿಸ್ತರಣೆ ವೇಳೆ ಹೆಚ್ಚು ಸ್ಥಾನ ಸಿಗುವ ನಿರೀಕ್ಷೆ ಇದೆ ಎಂದರು.
ಮೊದಲ ಮೂರು ವರ್ಷ ಹಾವೇರಿ ಜಿಲ್ಲೆಗೆ ಸಚಿವ ಸ್ಥಾನದ ಪ್ರಾತಿನಿಧ್ಯ ಸಿಕ್ಕಿರಲಿಲ್ಲ. ಈಗ ವಿಸ್ತರಣೆ ವೇಳೆ ಹಾವೇರಿಗೆ ಪ್ರಾತಿನಿಧ್ಯ ನೀಡುವ ಭರವಸೆಯನ್ನು ನಮ್ಮ ನಾಯಕರು ನೀಡಿದ್ದಾರೆ. ಹೀಗಾಗಿ ಸಂಪುಟ ವಿಸ್ತರಣೆ ಆದರೆ ನಾನೂ ಕೂಡ ಪ್ರಬಲ ಆಕಾಂಕ್ಷಿ ಆಗಿರುವೆ. ಹಾನಗಲ್, ಶಿಗ್ಗಾವಿ ಉಪಚುನಾವಣೆಯಲ್ಲಿ ಕಾಂಗ್ರೆಸ್ ಗೆದ್ದಿದೆ. ಹೀಗಾಗಿ ನಮ್ಮ ನಾಯಕರು ಹಾವೇರಿಗೆ ಅವಕಾಶ ಕೊಡುವ ಭರವಸೆ ಇದೆ. ನಾನೂ ಕೂಡ ಸಚಿವ ಸ್ಥಾನದ ಪ್ರಬಲ ಆಕಾಂಕ್ಷಿ ಆಗಿದ್ದೇನೆ ಎಂದು ತಿಳಿಸಿದರು.




