
ಪ್ರಗತಿವಾಹಿನಿ ಸುದ್ದಿ: ಕರ್ನಾಟಕ ಸರ್ಕಾರದ ಕೃಷಿ ಇಲಾಖೆಯ ಅವೈಜ್ಞಾನಿಕ ನೇಮಕಾತಿ ಪ್ರಕ್ರಿಯೆಯನ್ನು ತಕ್ಷಣವೇ ರದ್ದುಪಡಿಸಬೇಕೆಂದು ಆಗ್ರಹಿಸಿ ಕೃಷಿ ವಿಶ್ವವಿದ್ಯಾಲಯದ ವಿದ್ಯಾರ್ಥಿಗಳು ನಡೆಸುತ್ತಿರುವ ಧರಣಿ ಸತ್ಯಾಗ್ರಹದ ಭಾಗವಾಗಿ, ವಿದ್ಯಾರ್ಥಿ ಮುಖಂಡರ ನಿಯೋಗವು ಕೇಂದ್ರ ಗ್ರಾಹಕ ವ್ಯವಹಾರಗಳ ಸಚಿವ ಪ್ರಲ್ಹಾದ ಜೋಶಿ ಹಾಗೂ ಬೆಳಗಾವಿ ಸಂಸದ ಜಗದೀಶ ಶೆಟ್ಟರ್ ಅವರನ್ನು ಭೇಟಿಯಾಗಿ ಮನವಿ ಸಲ್ಲಿಸಿತು.
ರಾಜ್ಯ ಸರ್ಕಾರದ ಮೇಲೆ ಒತ್ತಡ ತಂದು ಈ ಅವೈಜ್ಞಾನಿಕ ನೇಮಕಾತಿಯನ್ನು ರದ್ದುಗೊಳಿಸುವಂತೆ ಹಾಗೂ ಕೃಷಿ ಪದವೀಧರರಿಗೆ ನ್ಯಾಯ ಒದಗಿಸುವಂತೆ ವಿದ್ಯಾರ್ಥಿಗಳು ಈ ಸಂದರ್ಭದಲ್ಲಿ ಗಣ್ಯರಲ್ಲಿ ಒತ್ತಾಯಿಸಿದರು. ವಿದ್ಯಾರ್ಥಿಗಳ ಹೋರಾಟ ಮತ್ತು ಬೇಡಿಕೆಗಳನ್ನು ಆಲಿಸಿದ ನಾಯಕರು, ಈ ಕುರಿತು ಸೂಕ್ತ ಕ್ರಮ ಕೈಗೊಳ್ಳುವ ಭರವಸೆ ನೀಡಿದರು.
ಈ ಸಂದರ್ಭದಲ್ಲಿ ವಿದ್ಯಾರ್ಥಿ ಮುಖಂಡರಾದ ರಾಹುಲ ನಾಯಕ, ಸಾಗರ ತುಳಸಿಗೇರಿ, ಸಮೇಧ ಬಾವಿ, ಸಮೃದ್ಧ ಗಿರೆಣ್ಣವರ, ಯೂನಸ್ ಬಿರಾದರ ಸೇರಿದಂತೆ ಕೃಷಿ ವಿಶ್ವವಿದ್ಯಾಲಯದ ಅನೇಕ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.


