*ಜಂತರ್ ಮಂತರ್ ಹೋರಾಟ ಬೆಂಬಲಿಸಿ ಬೆಳಗಾವಿಯಲ್ಲಿ ವಿದ್ಯಾರ್ಥಿಗಳ ಬೃಹತ್ ಪ್ರತಿಭಟನೆ*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ನೀಟ್ ಪರೀಕ್ಷೆಯಲ್ಲಿನ ಅಕ್ರಮಗಳನ್ನು ಖಂಡಿಸಿ ಮತ್ತು ದೆಹಲಿಯ ಜಂತರ್ ಮಂತರ್ನಲ್ಲಿ ನಡೆಯುತ್ತಿರುವ ವಿದ್ಯಾರ್ಥಿಗಳು, ಸಾಮಾಜಿಕ ಹೋರಾಟಗಾರರ ಪ್ರತಿಭಟನೆಗೆ ದೇಶಾಧ್ಯಂತ ಬೆಂಬಲ ವ್ಯಕ್ತವಾಗುತ್ತಿದೆ. ಬೆಳಗಾವಿ ನಗರದಲ್ಲಿ ಕಾಂಗ್ರೆಸ್ ಯುವ ಮುಖಂಡ ಅಮನ್ ಸೇಠ್ ನೇತೃತ್ವದಲ್ಲಿ ವಿದ್ಯಾರ್ಥಿಗಳು ಬೀದಿಗಿಳಿದು ಧರಣಿ ನಡೆಸಿದರು.
ಗುರುವಾರ ಬೆಳಗಾವಿ ರಾಣಿ ಚನ್ನಮ್ಮ ವೃತ್ತದಲ್ಲಿ ಜಮಾಯಿಸಿದ ಐದನೂರಕ್ಕೂ ಅಧಿಕ ವಿದ್ಯಾರ್ಥಿ, ವಿದ್ಯಾರ್ಥಿನಿಯರು ಕೇಂದ್ರ ಸರ್ಕಾರ, ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ವಿರುದ್ಧ ದಿಕ್ಕಾರ ಕೂಗಿ ತಮ್ಮ ಆಕ್ರೋಶ ವ್ಯಕ್ತಪಡಿಸಿದರು.

ಕೈಯಲ್ಲಿ ಮಹಾತ್ಮಾ ಗಾಂಧೀಜಿ, ಸಂವಿಧಾನಶಿಲ್ಪಿ ಡಾ.ಬಿ.ಆರ್. ಅಂಬೇಡ್ಕರ್, ಭಗತ್ ಸಿಂಗ್ ಅವರ ಭಾವಚಿತ್ರ ಹಾಗೂ ತ್ರಿವರ್ಣ ಧ್ವಜವನ್ನು ಕೈಯಲ್ಲಿ ಹಿಡಿದು ವಿದ್ಯಾರ್ಥಿಗಳು ಪ್ರತಿಭಟಿಸಿದರು. ಪ್ರಶ್ನೆ ಪತ್ರಿಕೆ ಸೋರಿಕೆಯಿಂದ ಆತ್ಮಹತ್ಯೆ ಮಾಡಿಕೊಂಡ 20 ವಿದ್ಯಾರ್ಥಿಗಳ ಸಾವಿಗೆ ನ್ಯಾಯ ಸಿಗಬೇಕು. ಅದಕ್ಕಾಗಿ ಕೇಂದ್ರ ಸಚಿವ ಧಮೇಂದ್ರ ಪ್ರಧಾನ್ ರಾಜೀನಾಮೆ ಕೊಡಬೇಕು. ಪ್ರಧಾನಿ ಮೋದಿ ದೇಶದ ಜನತೆಗೆ ಕ್ಷಮೆ ಕೇಳಬೇಕು. ಮೃತ ವಿದ್ಯಾರ್ಥಿಗಳ ಕುಟುಂಬಕ್ಕೆ ಸೂಕ್ತ ಪರಿಹಾರ ಕೊಡುವಂತೆ ಪ್ರತಿಭಟನಾಕಾರರು ಒತ್ತಾಯಿಸಿದರು.
ಪ್ರತಿಭಟನೆ ಶುರುವಾಗುತ್ತಿದ್ದಂತೆ ಮಳೆ ಬರಲು ಆರಂಭಿಸಿತು. ಆದರೂ, ಯಾವೊಬ್ಬ ಪ್ರತಿಭಟನಾಕಾರ ಕೂಡ ಸ್ಥಳದಿಂದ ಕದಲಿಲ್ಲ. ಮಳೆಯಲ್ಲೆ ಘೋಷಣೆ ಮೊಳಗಿಸುತ್ತಾ, ತಮ್ಮ ಹಕ್ಕೊತ್ತಾಯ ಮಂಡಿಸಿದರು.



