
ಪ್ರಗತಿವಾಹಿನಿ ಸುದ್ದಿ: ಮಾಜಿ ಶಾಸಕ, ರಾಜ್ಯ ಮಾಜಿ ಶಾಸಕರ ವೇದಿಕೆ ಅಧ್ಯಕ್ಷ ಎಚ್.ಎಂ. ಚಂದ್ರಶೇಖರಪ್ಪ (78) ಅನಾರೋಗ್ಯದಿಂದ ಭಾನುವಾರ ಸಂಜೆ ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ ನಿಧನರಾದರು.
ಚಂದ್ರಶೇಖರಪ್ಪ ಅವರ ಪಾರ್ಥಿವ ಶರೀರದ ಅಂತಿಮ ದರ್ಶನಕ್ಕೆ ಸೋಮವಾರ ಬೆಳಿಗ್ಗೆಯಿಂದ ಬಸವನಗುಡಿಯ ಅವರ ನಿವಾಸದ ಎದುರು ವ್ಯವಸ್ಥೆ ಮಾಡಲಾಗಿದೆ. ಸಂಜೆ 4 ಗಂಟೆಗೆ ಗಾಜನೂರು-ಹೊಸಹಳ್ಳಿ ಬಳಿಯ ತೋಟದಲ್ಲಿ ವೀರಶೈವ ಲಿಂಗಾಯಿತ ಸಮಾಜದ ಸಂಪ್ರದಾಯದಂತೆ ಅಂತಿಮ ವಿಧಿ ವಿಧಾನವು ನೆರವೇರಲಿದೆ
ಚಂದ್ರಶೇಖರಪ್ಪ ಅವರಿಗೆ ಇಬ್ಬರು ಪುತ್ರರು ಇದ್ದಾರೆ. ಹಿರಿಯ ಪುತ್ರ ಎಚ್.ಸಿ.ಯೋಗೀಶ್ ಕಳೆದ ವಿಧಾನಸಭಾ ಚುನಾವಣೆಯಲ್ಲಿ ಶಿವಮೊಗ್ಗ ನಗರದಿಂದ ಕಾಂಗ್ರೆಸ್ ಪಕ್ಷದಿಂದ ಸ್ಪರ್ಧಿಸಿ ಸೋಲನ್ನಪ್ಪಿದ್ದರು.
1999ರಲ್ಲಿ ಶಿವಮೊಗ್ಗ ಕ್ಷೇತ್ರದಿಂದ ವಿಧಾನಸಭೆಗೆ ಕಾಂಗ್ರೆಸ್ ಪಕ್ಷದಿಂದ ಆಯ್ಕೆಯಾಗಿದ್ದರು. ಚಂದ್ರಶೇಖರಪ್ಪ ಅವರ ತಂದೆ ಎಚ್.ಎಂ. ಮಲ್ಲಿಕಾರ್ಜುನಪ್ಪ ಕೂಡ ಶಾಸಕರಾಗಿದ್ದರು. ಶಿವಮೊಗ್ಗ ನಗರಸಭೆ ಸದಸ್ಯರಾಗಿ ರಾಜಕೀಯ ಬದುಕು ಆರಂಭಿಸಿದ್ದ ಎಚ್.ಎಂ.ಚಂದ್ರಶೇಖರಪ್ಪ 1982ರಿಂದ 84ರವರೆಗೆ ಶಿವಮೊಗ್ಗ ನಗರಸಭೆ ಅಧ್ಯಕ್ಷರಾಗಿದ್ದರು.
10 ವರ್ಷಗಳ ಕಾಲ ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾಗಿ ಕೆಲಸ ಮಾಡಿದ್ದರು. ಮಾಜಿ ಶಾಸಕರ ವೇದಿಕೆ ಅಧ್ಯಕ್ಷರಾಗಿ ಕ್ರಿಯಾಶೀಲರಾಗಿದ್ದ ಅವರು, ಶಿವಮೊಗ್ಗದಲ್ಲಿ ವೀರಶೈವ ಲಿಂಗಾಯತ ಸಮಾಜದ ಸಂಘಟನೆಯಲ್ಲಿ ತೊಡಗಿದ್ದರು.


