*ಬೃಹತ್ ಬೆಳಗಾವಿ ಮಹಾನಗರ ಪಾಲಿಕೆ ಎಂದು ಘೋಷಣೆ ಮಾಡುವಂತೆ ಸಚಿವ ಯತೀಂದ್ರ ಸಿದ್ದರಾಮಯ್ಯಗೆ ಕರವೇ ಮನವಿ*

ಪಾಲಿಕೆಯ ಮುಂಭಾಗ ಕಿತ್ತೂರು ಚನ್ನಮ್ಮ ಹಾಗೂ ಸಂಗೊಳ್ಳಿ ರಾಯಣ್ಣ ಪ್ರತಿಮೆ ಅನಾವರಣಕ್ಕೆ ಕ್ರಮ
ಪ್ರಗತಿವಾಹಿನಿ ಸುದ್ದಿ: ಗಡಿನಾಡು ಗುಡಿ, ಬೆಳಗಾವಿ ಮಹಾನಗರ ನಾಲ್ಕು ದಿಕ್ಕುಗಳಲ್ಲಿ ದಿನದಿಂದ ದಿನಕ್ಕೆ ಅತ್ಯಂತ ವೇಗವಾಗಿ ಬೆಳೆಯುತ್ತಿದೆ.ಬೆಳಗಾವಿ ರಾಜ್ಯದ ಎರಡನೇಯ ರಾಜಧಾನಿಯಾಗುವ ಹೊಸ್ತಿಲಲ್ಲಿದೆ. ಹದಿನೈದು ಲಕ್ಷಕ್ಕೂ ಅಧಿಕ ಜನಸಂಖ್ಯೆ ಹೊಂದಿರುವ ಬೆಳಗಾವಿ ಮಹಾನಗರ ಮೆಟ್ರೋಪಾಲಿಟನ್ ನಗರವಾಗುವತ್ತ ದಾಪುಗಾಲು ಹಾಕುತ್ತಿದೆ. ಹೀಗಾಗಿ ಬೆಳಗಾವಿ ಮಹಾನಗರದ ಬೆಳವಣಿಗೆಗೆ ತಕ್ಕಂತೆ ಬೆಳಗಾವಿ ಮಹಾನಗರ ಪಾಲಿಕೆಯನ್ನು ಮೇಲ್ದರ್ಜೆಗೆ ಏರಿಸುವ ಅವಶ್ಯಕತೆ ಇದ್ದು ಸರ್ಕಾರ ಕೂಡಲೇ ಬೆಳಗಾವಿ ಮಹಾನಗರ ಪಾಲಿಕೆಯನ್ನು ಬೃಹತ್ ಬೆಳಗಾವಿ ಮಹಾನಗರ ಪಾಲಿಕೆ ಎಂದು ಘೋಷಣೆ ಮಾಡಬೇಕು,ಈ ವಿಚಾರದಲ್ಲಿ ನಗರಾಭಿವೃದ್ಧಿ ಇಲಾಖೆ ತ್ವರಿತಗತಿಯ ಕ್ರಮಗಳನ್ನು ಜರುಗಿಸಬೇಕು ಎಂದು ಕರ್ನಾಟಕ ರಕ್ಷಣಾ ವೇದಿಕೆ ಕರ್ಯಕರ್ತರು ಸಚಿವ ಯತೀಂದ್ರ ಸಿದ್ದರಾಮಯ್ಯ ಅವರಿಗೆ ಮನವಿ ಸಲ್ಲಿಸಿದರು.
ಬೆಳಗಾವಿ ಮಹಾನಗರಕ್ಕೆ ಹೊಂದಿಕೊಂಡಿರುವ ಸುಮಾರು 40 ಹಳ್ಳಿಗಳನ್ನು ಬೆಳಗಾವಿ ಮಹಾನಗರ ಪಾಲಿಕೆಯ ವ್ಯಾಪ್ತಿಗೆ ಸೇರಿಸುವ ಪ್ರಸ್ತಾವಣೆ ಇದೆ. ಈ ಪ್ರಸ್ತಾವಣೆ ಇನ್ನುವರೆಗೆ ಕಾರ್ಯರೂಪಕ್ಕೆ ಬಂದಿಲ್ಲ.ಬೆಳಗಾವಿ ಮಹಾನಗರಕ್ಕೆ ಹೊಂದಿಕೊಂಡಿರುವ ಗ್ರಾಮಗಳು ಅಭಿವೃದ್ಧಿಯಿಂದ ವಂಚಿತವಾಗಿವೆ.ನಗರಾಭಿವೃದ್ಧಿ ಇಲಾಖೆ ಕೂಡಲೇ ಬೆಳಗಾವಿ ಮಹಾನಗರಕ್ಕೆ ಹೊಂದಿಕೊಂಡಿರುವ ಸುಮಾರು 40 ಗ್ರಾಮಗಳನ್ನು ಬೆಳಗಾವಿ ಮಹಾನಗರ ಪಾಲಿಕೆಯ ವ್ಯಾಪ್ತಿಗೆ ಸೇರಿಸಿ ಬೃಹತ್ ಬೆಳಗಾವಿ ಮಹಾನಗರ ಪಾಲಿಕೆ ಎಂದು ಘೋಷಣೆ ಮಾಡಿದರೆ ಬೆಳಗಾವಿ ಮಹಾನಗರದ ಅಭಿವೃದ್ಧಿಗೆ ಪೂರಕವಾಗುತ್ತದೆ.ನಗರ ಹಾಗೂ ಗ್ರಾಮೀಣ ಪ್ರದೇಶಗಳ ನಿವಾಸಿಗಳ ಸಮಸ್ಯೆಗಳಿಗೆ ತ್ವರಿತಗತಿಯಲ್ಲಿ ಪರಿಹಾರ ಸಿಗುತ್ತದೆ.
ಬೆಳಗಾವಿ ಮಹಾನಗರ ಪಾಲಿಕೆಯ ಮುಂಭಾಗದಲ್ಲಿ ಸ್ವಾತಂತ್ರ್ಯ ಸಂಗ್ರಾಮದ ಬೆಳ್ಳಿಚುಕ್ಕಿ ವೀರರಾಣಿ ಕಿತ್ತೂರು ಚನ್ನಮ್ಮಾಜಿಯ ಹಾಗೂ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣನ ಪ್ರತಿಮೆ ಅನಾವರಣ ಮಾಡುವಂತೆ ತಾವು ಸ್ಥಳದಲ್ಲೇ ಕ್ರಮ ಜರುಗಿಸಬೇಕು ಎಂದು ತಮ್ಮಲ್ಲಿ ವಿನಂತಿಸಿಕೊಳ್ಳುತ್ತೇವೆ ಈ ವಿಚಾರದಲ್ಲಿ ವಿಳಂಬ ಮಾಡಬಾರದು ಎಂದು ವಿನಂತಿಸಿದರು.
ಬೆಳಗಾವಿ ಮಹಾನಗರದ ಜನತೆಗೆ ರಾಕಸಕ್ಕೊಪ್ಪ ಹಾಗು ಹಿಡಕಲ್ ಜಲಾಶಯದಿಂದ ನೀರು ಪೂರೈಕೆಯಾಗುತ್ತಿದೆ.ಈಗ ಬೆಳಗಾವಿ ಮಹಾನಗರದ ಜನಸಂಖ್ಯೆ ದುಪ್ಪಟ್ಟು ಆಗಿದೆ. ಹದಿನೈದು ಲಕ್ಷಕ್ಕೂ ಹೆಚ್ಚು ಜನಸಂಖ್ಯೆ ಹೊಂದಿರುವ ಬೆಳಗಾವಿ ಮಹಾನಗರಕ್ಕೆ ನೀರು ಪೂರೈಕೆ ವ್ಯವಸ್ಥೆಯನ್ನು ಹೆಚ್ಚಿಸುವ ಅವಶ್ಯಕತೆ ಇದೆ.ಈಗ ವಾರಕ್ಕೂಮ್ಮೆ,ಕೆಲವು ಪ್ರದೇಶಗಳಲ್ಲಿ ಹದಿನೈದು ದಿನಕ್ಕೊಮ್ಮೆ ನೀರು ಪೂರೈಕೆ ಆಗುತ್ತಿದೆ. ಇದರಿಂದ ಬೆಳಗಾವಿ ಮಹಾಜನತೆಗೆ ತೀವ್ರ ತೊಂದರೆ ಆಗುತ್ತಿದೆ. ಬೆಳಗಾವಿ ಮಹಾನಗರಕ್ಕೆ ಹಿಡಕಲ್ ಜಲಾಶಯದಿಂದ ಈಗಾಗಲೇ ಒಂದು ಪೈಪಲೈನ್ ಇದೆ. ಸರ್ಕಾರ ಕೂಡಲೇ ಇನ್ನೊಂದು ಪೈಪಲೈನ್ ಅಳವಡಿಸಲು ಮತ್ತು ಇನ್ನೆರಡು ನೀರು ಶುದ್ಧೀಕರಣ ಘಟಕಗಳನ್ನು ಸ್ಥಾಪಿಸಲು ಅಗತ್ಯ ಅನುದಾನ ಬಿಡುಗಡೆ ಮಾಡಬೇಕು ಎಂದು ಒತ್ತಾಯಿಸಿದರು.
ಬೆಳಗಾವಿ ಮಹಾನಗರದಲ್ಲಿ ಹಲವಾರು ವರ್ಷಗಳಿಂದ ನಿರಂತರ ನೀರು ಪೂರೈಕೆ ಮಾಡುವ 24 X 7 ಯೋಜನೆಯ ಕಾಮಗಾರಿ ನಡೆಯುತ್ತಿದೆ.ಈ ಕಾಮಗಾರಿ ನಿಗದಿತ ಅವಧಿಯಲ್ಲಿ ಮುಕ್ತಾಯ ಆಗುತ್ತಿಲ್ಲ. ಈ ಕಾಮಗಾರಿಯನ್ನು ತ್ವರಿತಗತಿಯಲ್ಲಿ ನಡೆಸುವಂತೆ ಕ್ರಮ ಜರುಗಿಸಿ ಕಾಮಗಾರಿಯನ್ನು ಆದಷ್ಟು ಬೇಗ ಪೂರ್ಣಗೊಳಿಸಬೇಕು ಎಂದು ,ಅನವಿ ಪತ್ರ ಸಲ್ಲಿಸಿದರು.


