ದೇಶಾದ್ಯಂತ ಎನ್ ಆರ್ ಸಿ ಜಾರಿಗೆ ಯಾವುದೇ ನಿರ್ಧಾರ ಕೈಗೊಂಡಿಲ್ಲ: ಕೇಂದ್ರ ಸ್ಪಷ್ಟನೆ

ಪ್ರಗತಿವಾಹಿನಿ ಸುದ್ದಿ; ನವದೆಹಲಿ: ದೇಶಾದ್ಯಂತ ರಾಷ್ಟ್ರೀಯ ಪೌರತ್ವ ನೋಂದಣಿ(ಎನ್ ಆರ್ ಸಿ) ಜಾರಿಗೆ ಸಂಬಂಧಿಸಿದಂತೆ ಯಾವುದೇ ನಿರ್ಧಾರ ಕೈಗೊಳ್ಳಲಾಗಿಲ್ಲ ಎಂದು ಕೇಂದ್ರ ಗೃಹ ಸಚಿವಾಲಯ ಲೋಕಸಭೆಯಲ್ಲಿ ಅಧಿಕೃತ ಮಾಹಿತಿ ನೀಡಿದೆ.

ಸಿಎಎ ರೀತಿ ಎನ್ ಆರ್ ಸಿಯನ್ನು ಕೇಂದ್ರ ಸರ್ಕಾರ ದೇಶಾದ್ಯಂತ ಜಾರಿಗೊಳಿಸುವ ಯಾವುದಾದರು ಯೋಜನೆ ಹೊಂದಿದೆಯೇ ಎಂಬ ಪ್ರೆಶ್ನೆಗೆ ಗೃಹ ಸಚಿವಾಲಯದ ರಾಜ್ಯ ಖಾತೆ ಸಚಿವ ನಿತ್ಯಾನಂದ ಲೋಕಸಭೆಗೆ ಲಿಖಿತ ಉತ್ತರ ನೀಡಿದ್ದು, ದೇಶಾದ್ಯಂತ ಎನ್ ಆರ್ ಸಿ ಜಾರಿ ಬಗ್ಗೆ ಯಾವುದೇ ನಿರ್ಧಾರ ಕೈಗೊಂಡಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

ಸೋಮವಾರ ಲೋಕಸಭೆಯಲ್ಲಿ ಆರಂಭಗೊಂಡ ಬಜೆಟ್ ಅಧಿವೇಶನದಲ್ಲಿ ವಿರೋಧ ಪಕ್ಷಗಳು ಸಿಎಎ ಮತ್ತು ಎನ್ ಆರ್ ಸಿ ಮತ್ತು ಎನ್ ಪಿಆರ್ ಬಗ್ಗೆ ಚರ್ಚೆ ನಡೆಸಿ, ಈ ಬಗ್ಗೆ ಕೇಂದ್ರ ಸರ್ಕಾರ ಉತ್ತರ ನೀಡುವಂತೆ ಪಟ್ಟು ಹಿಡಿದವು. ಕಾಂಗ್ರೆಸ್ ಪಕ್ಷದ ಗುಲಾಂ ನಬಿ ಅಜಾದ್, ಡಿಎಂಕೆ, ಸಿಪಿಐ, ಸಿಪಿಐಎಂ, ಎನ್ ಸಿಪಿ, ಆರ್ ಜೆಡಿ, ಟಿಎಂಸಿ, ಎಸ್ಪಿ, ಬಿಎಸ್ಪಿ ನಿಯಮ 267ರ ಅಡಿ ನೋಟಿಸ್ ನೀಡಿ ಎಲ್ಲಾ ಚರ್ಚೆಯನ್ನು ಬದಿಗೊತ್ತಿ ಸಿಎಎ, ಎನ್ ಪಿಆರ್ ಮತ್ತು ಎನ್ ಆರ್ ಸಿ ಬಗ್ಗೆ ಚರ್ಚೆ ನಡೆಸುವಂತೆ ಮನವಿ ಮಾಡಿದ್ದವು. ಈ ಹಿನ್ನಲೆಯಲ್ಲಿ ಉತ್ತರಿಸಿದ ಸಚಿವರು, ದೇಶಾದ್ಯಂತ ಎನ್ ಆರ್ ಸಿ ಜಾರಿ ಕುರಿತ ಪ್ರಶ್ನೆಯೇ ಉದ್ಭವಿಸುವುದಿಲ್ಲ, ಇಂತಹ ಯಾವುದೇ ನಿರ್ಧಾರವನ್ನು ಕೇಂದ್ರ ಕೈಗೊಂಡಿಲ್ಲ ಎಂದು ಹೇಳಿದರು.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button