*ಸಭಾಪತಿ ಸ್ಥಾನಕ್ಕೆ ಬಸವರಾಜ ಹೊರಟ್ಟಿ ರಾಜೀನಾಮೆ*

ಪ್ರಗತಿವಾಹಿನಿ ಸುದ್ದಿ: ಕರ್ನಾಟಕ ವಿಧಾನ ಪರಿಷತ್ನ ಸಭಾಪತಿ ಬಸವರಾಜ ಹೊರಟ್ಟಿ ಅವರು ತಮ್ಮ ಸಭಾಪತಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.
ಕೇವಲ ಎರಡು ದಿನಗಳ ಹಿಂದಷ್ಟೇ ಸಭಾಪತಿ ಸ್ಥಾನಕ್ಕೆ ರಾಜೀನಾಮೆ ನೀಡುವ ಕುರಿತು ಹರಿದಾಡುತ್ತಿದ್ದ ಸುದ್ದಿಗಳನ್ನು ಅವರು ತಳ್ಳಿಹಾಕಿ, ತಮ್ಮ ಮೇಲೆ ಯಾವುದೇ ಒತ್ತಡ ಇಲ್ಲ ಎಂದು ಸ್ಪಷ್ಟಪಡಿಸಿದ್ದರು.
ಈ ಬಗ್ಗೆ ಹುಬ್ಬಳ್ಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ್ದ ಹೊರಟ್ಟಿ ‘ವಿಧಾನ ಪರಿಷತ್ ಸಭಾಪತಿ ಸ್ಥಾನಕ್ಕೆ ರಾಜೀನಾಮೆ ನೀಡುವಂತೆ ನನ್ನ ಮೇಲೆ ಯಾರೂ ಒತ್ತಡ ಹಾಕಿಲ್ಲ. ಇದು ಗಾಳಿ ಸುದ್ದಿ’ ಎಂದು ಹೇಳಿದ್ದರು.
ಅನಾರೋಗ್ಯದ ಹಿನ್ನೆಲೆಯಲ್ಲಿ ಆಸ್ಪತ್ರೆಗೆ ದಾಖಲಾಗಿದ್ದ ವೇಳೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆರೋಗ್ಯ ವಿಚಾರಿಸಿದ್ದರೂ, ರಾಜೀನಾಮೆ ಕುರಿತು ಯಾವುದೇ ಪ್ರಸ್ತಾಪ ಮಾಡಿರಲಿಲ್ಲ ಎಂದಿದ್ದರು. ಅಲ್ಲದೆ, ಕಾಂಗ್ರೆಸ್ನ ಇಬ್ಬರು ಸದಸ್ಯರು ಸಭಾಪತಿ ಸ್ಥಾನದ ಮೇಲೆ ಕಣ್ಣಿಟ್ಟಿದ್ದು, ಅವರೇ ಇಂತಹ ಗಾಳಿ ಸುದ್ದಿಗಳನ್ನು ಹರಡುತ್ತಿದ್ದಾರೆ ಎಂದು ಆರೋಪಿಸಿದ್ದರು.
ಇದೇ ವೇಳೆ, ‘ನಾನು ಕುರ್ಚಿಗೆ ಅಂಟಿಕೊಂಡಿಲ್ಲ. ಸರ್ಕಾರ ಸೂಚಿಸಿದರೆ ತಕ್ಷಣ ಸಭಾಪತಿ ಸ್ಥಾನಕ್ಕೆ ರಾಜೀನಾಮೆ ನೀಡುತ್ತೇನೆ. ಅವಿಶ್ವಾಸ ನಿರ್ಣಯ ಬರುವವರೆಗೂ ಕಾಯುವುದಿಲ್ಲ. ಮುಖ್ಯಮಂತ್ರಿ ಮೇಲೆ ಒತ್ತಡವಿದ್ದರೆ ನನ್ನನ್ನು ಬದಲಿಸಲಿ’ ಎಂದು ಹೇಳಿದ್ದರು. ಈ ಹಿಂದೆ ಸರ್ಕಾರ ಬದಲಾದಾಗಲೂ ಸಭಾಪತಿಯನ್ನು ಅವಧಿಗೂ ಮುನ್ನ ಕೆಳಗಿಳಿಸಿದ ಉದಾಹರಣೆ ಇಲ್ಲ. ಸಭಾಪತಿ ಸ್ಥಾನದಿಂದ ಕೆಳಗಿಳಿಸಲು ಸೂಕ್ತ ಕಾರಣ ಇರಬೇಕು ಎಂದೂ ಅವರು ಅಭಿಪ್ರಾಯ ವ್ಯಕ್ತಪಡಿಸಿದ್ದರು.



