*ವಿಶ್ವ ಸ್ತನ್ಯಪಾನ ಸಪ್ತಾಹ: ತಾಯಿಯ ಎದೆಹಾಲೇ ಮಗುವಿನ ಮೊದಲ ರಕ್ಷಾ ಕವಚ: ಲಕ್ಷ್ಮೀ ರಾಠೋಡ*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ತಾಯಿಯ ಎದೆಹಾಲು ಮಗುವಿಗೆ ಪ್ರಕೃತಿಯ ಅಮೂಲ್ಯ ಕೊಡುಗೆಯಾಗಿದ್ದು, ಜನನದ ನಂತರ ಮೊದಲ ಆರು ತಿಂಗಳವರೆಗೆ ಕೇವಲ ತಾಯಿಯ ಎದೆಹಾಲನ್ನೇ ನೀಡಬೇಕು. ಎದೆಹಾಲು ಮಗುವಿಗೆ ಸಂಪೂರ್ಣ ಪೌಷ್ಟಿಕ ಆಹಾರವಾಗಿರುವುದರ ಜೊತೆಗೆ ಮೊದಲ ರಕ್ಷಾಕವಚವೂ ಆಗಿದೆ ಎಂದು ಆರೋಗ್ಯ ಸ್ಥಾಯಿ ಸಮಿತಿಯ ಅಧ್ಯಕ್ಷರು ಹಾಗೂ ಮಹಾನಗರ ಪಾಲಿಕೆ ಸದಸ್ಯರಾದ ಲಕ್ಷ್ಮೀ ಮಹಾದೇವ ರಾಠೋಡ್ ತಿಳಿಸಿದರು.
ಬೆಳಗಾವಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ವತಿಯಿಂದ ಆಗಸ್ಟ್ 3 (ಸೋಮವಾರ) ಜರುಗಿದ ವಂಟಮುರಿ ತಾಯಿ ಮತ್ತು ಮಕ್ಕಳ ಆಸ್ಪತ್ರೆಯಲ್ಲಿ ಜಿಲ್ಲಾ ಮಟ್ಟದ ವಿಶ್ವ ಸ್ತನ್ಯಪಾನ ಸಪ್ತಾಹ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಐ.ಪಿ.ಗಡಾದ ಅವರು ಮಾತನಾಡಿ, ಆಗಸ್ಟ್ 1ರಿಂದ 7ರವರೆಗೆ ವಿಶ್ವ ಸ್ತನ್ಯಪಾನ ಸಪ್ತಾಹವನ್ನು ಆಚರಿಸುವ ಮೂಲಕ ಗರ್ಭಿಣಿಯರು, ಬಾಣಂತಿಯರು ಹಾಗೂ ಸಾರ್ವಜನಿಕರಲ್ಲಿ ಸ್ತನ್ಯಪಾನದ ಮಹತ್ವದ ಕುರಿತು ಜಾಗೃತಿ ಮೂಡಿಸಲಾಗುತ್ತಿದೆ. ಮೊದಲ ಆಹಾರ ಮೊದಲ ಉಡುಗೊರೆ, ತಾಯಿಯ ಎದೆಹಾಲಿನ ಪೋಷಣೆ ಎಲ್ಲರ ಜವಾಬ್ದಾರಿ” ಎಂಬ ಸಂದೇಶವನ್ನು ಎಲ್ಲರೂ ಪಾಲಿಸಬೇಕೆಂದು ಕರೆ ನೀಡಿದರು.
ಜಿಲ್ಲಾ ಸಂತಾನೋತ್ಪತ್ತಿ ಮತ್ತು ಮಕ್ಕಳ ಆರೋಗ್ಯ ಕಾರ್ಯಕ್ರಮ ಅಧಿಕಾರಿಗಳಾದ ಡಾ. ಎಸ್. ಎಸ್. ಸಾಯನ್ನವರ್ ಅವರು 2026ರ ವಿಶ್ವ ಸ್ತನ್ಯಪಾನ ಸಪ್ತಾಹದ ಧೈಯವಾಕ್ಯವಾದ “ಸುಸ್ಥಿರ ಜೀವನದ ಭದ್ರ ಅಡಿಪಾಯಕ್ಕಾಗಿ ಸ್ತನ್ಯಪಾನ” ಪರಿಣಾಮಕಾರಿ ಬೆಂಬಲ ವ್ಯವಸ್ಥೆಗಳನ್ನು ಸದೃಢಗೊಳಿಸೋಣ” ಎಂಬ ಸಂದೇಶದ ಕುರಿತು ಮಾಹಿತಿ ನೀಡಿದರು.
ನಗರ ಪ್ರಾಥಮಿಕ ಆರೋಗ್ಯ ಕೇಂದ್ರದ ಆಡಳಿತ ವೈದ್ಯಾಧಿಕಾರಿಗಳಾದ ಡಾ. ರಮೇಶ್ ದಂಡಗಿ ಅವರು ಪ್ರಾಸ್ತಾವಿಕವಾಗಿ ಮಾತನಾಡಿ ವಿಶ್ವ ಸ್ತನ್ಯಪಾನ ಸಪ್ತಾಹದ ಉದ್ದೇಶ ಹಾಗೂ ಮಹತ್ವವನ್ನು ವಿವರಿಸಿದರು.
ಕಾರ್ಯಕ್ರಮದಲ್ಲಿ ತಾಲೂಕು ಆರೋಗ್ಯಾಧಿಕಾರಿಗಳಾದ ಡಾ. ಸಂಜಯ್ ನಾಂದ್ರೆ, ತಾಯಿ ಮತ್ತು ಮಕ್ಕಳ ಆಸ್ಪತ್ರೆಯ ಆಡಳಿತ ವೈದ್ಯಾಧಿಕಾರಿಗಳಾದ ಡಾ. ಪ್ರಾಚೀತಿ ಉದಯ್ ಕುಮಾರ್, ಡಾ. ಸನ್ಮತಿ, ಡಾ. ಮಹಾಂತೇಶ್, ಡಾ. ಅನುಷಾ ಪಾಟೀಲ ಸೇರಿದಂತೆ ವೈದ್ಯರು, ಆರೋಗ್ಯ ಸಿಬ್ಬಂದಿ, ಗರ್ಭಿಣಿಯರು, ಬಾಣಂತಿಯರು ಹಾಗೂ ಸಾರ್ವಜನಿಕರು ಭಾಗವಹಿಸಿದ್ದರು. ಉಪ ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಪ್ರಕಾಶ್ ಜಿ. ಮಾಣೆ ಅವರು ಕಾರ್ಯಕ್ರಮ ನಿರ್ವಹಿಸಿದರು.




