
ಪ್ರಗತಿವಾಹಿನಿ ಸುದ್ದಿ: ವಾಲ್ಮೀಕಿ ನಿಗಮದ 89.63 ಕೋಟಿ ರೂ. ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಸಚಿವ ನಾಗೇಂದ್ರ ಅವರ ಜಾಮೀನು ಷರತ್ತು ಸಡಿಲಿಸಿ ದೆಹಲಿಗೆ ಪ್ರಯಾಣ ಬೆಳೆಸಲು ಅನುಮತಿ ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ತಿರಸ್ಕರಿಸಿದೆ.
ದೆಹಲಿಯಲ್ಲಿ ನಡೆಯುವ ಪಕ್ಷದ ಸಭೆಯಲ್ಲಿ ಭಾಗವಹಿಸಲು ತೆರಳಬೇಕಾಗಿರುವುದರಿಂದ ಜಾಮೀನಿನ ಷರತ್ತನ್ನು 15 ದಿನಗಳವರೆಗೆ ಸಡಿಲಗೊಳಿಸಿ ಪ್ರಯಾಣಕ್ಕೆ ಅನುಮತಿ ನೀಡಬೇಕು ಎಂದು ನಾಗೇಂದ್ರ ಪರ ವಕೀಲರು ಮಂಗಳವಾರ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು.
ಈ ಮನವಿಯನ್ನು ಪ್ರಶ್ನಿಸಿದ ಇಡಿ ಪರ ವಕೀಲರು, “ಅರ್ಜಿದಾರರು ಯಾವ ಕಾರಣಕ್ಕಾಗಿ ದೆಹಲಿಗೆ ಹೋಗಬೇಕು ಎಂಬುದನ್ನು ಸಮರ್ಪಕವಾಗಿ ವಿವರಿಸಿಲ್ಲ. ಸೂಕ್ತ ದಾಖಲೆಗಳನ್ನು ನ್ಯಾಯಾಲಯಕ್ಕೆ ಒದಗಿಸಿಲ್ಲ. ಇಡಿ ವಿಚಾರಣೆಗೆ ಸರಿಯಾಗಿ ಸಹಕರಿಸುತ್ತಿಲ್ಲ. ಹೀಗಾಗಿ ಅರ್ಜಿದಾರರ ಮನವಿಯನ್ನು ಪುರಸ್ಕರಿಸಬಾರದು” ಎಂದು ಆಕ್ಷೇಪ ವ್ಯಕ್ತಪಡಿಸಿದರು.
ಎರಡೂ ಕಡೆಯ ವಾದಗಳನ್ನು ಆಲಿಸಿದ ನ್ಯಾಯಾಲಯ, ಇಡಿ ಪರ ವಕೀಲರ ಆಕ್ಷೇಪವನ್ನು ಪರಿಗಣಿಸಿ ಜಾಮೀನು ಷರತ್ತು ಸಡಿಲಿಕೆ ಮನವಿಯನ್ನು ನಕಾರ ಮಾಡಿತು.




