*ಮತ್ತೊಂದು ಭೀಕರ ಅಪಘಾತ: ಎಕ್ಸ್ ಪ್ರೆಸ್ ವೇನಲ್ಲಿ ಬಸ್ ಪಲ್ಟಿ; ಸ್ಥಳದಲ್ಲೆ ಇಬ್ಬರು ಸಾವು*

ಪ್ರಗತಿವಾಹಿನಿ ಸುದ್ದಿ: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇನಲ್ಲಿ ಭೀಕರ ಅಪಘಾತ ಸಂಭವಿಸಿದ್ದು, ಇಬ್ಬರು ಸ್ಥಳದಲ್ಲೇ ಮೃಪಟ್ಟಿದ್ದಾರೆ.
ಹೆದ್ದಾರಿಯಲ್ಲಿದ್ದ ಸೈನ್ ಬೋರ್ಡ್ಗೆ ಕೇರಳ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ (KSRTC) ಬಸ್ ನಿಯಂತ್ರಣ ತಪ್ಪಿ ಡಿಕ್ಕಿ ಹೊಡೆದಿದ್ದು, ಇಬ್ಬರು ಪ್ರಯಾಣಿಕರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ರಾಮನಗರ ತಾಲೂಕಿನ ಅವರಗೆರೆ ಗೇಟ್ ಬಳಿ ಈ ಘಟನೆ ನಡೆದಿದೆ.
ಅಪಘಾತದ ರಭಸಕ್ಕೆ ಬಸ್ ಹೆದ್ದಾರಿಯಲ್ಲೇ ಪಲ್ಟಿಯಾಗಿದ್ದು, ಬಸ್ನಲ್ಲಿದ್ದ ಹಲವು ಪ್ರಯಾಣಿಕರು ತೀವ್ರವಾಗಿ ಗಾಯಗೊಂಡಿದ್ದಾರೆ. ಕೇರಳದಿಂದ ಬೆಂಗಳೂರಿನ ಕಡೆಗೆ ಬರುತ್ತಿದ್ದ ಕೆಎಸ್ಆರ್ಟಿಸಿ ಬಸ್, ರಾಮನಗರ ತಾಲೂಕಿನ ಅವರಗೆರೆ ಗೇಟ್ ತಲುಪುತ್ತಿದ್ದಂತೆ ಚಾಲಕನ ನಿಯಂತ್ರಣ ತಪ್ಪಿ ಹೆದ್ದಾರಿ ಪಕ್ಕದಲ್ಲಿದ್ದ ಬೃಹತ್ ಸೈನ್ ಬೋರ್ಡ್ಗೆ ಡಿಕ್ಕಿ ಹೊಡೆದಿದೆ. ಡಿಕ್ಕಿ ಹೊಡೆದು ಬಸ್ ರಸ್ತೆಯಲ್ಲೇ ಉರುಳಿ ಬಿದ್ದಿದೆ. ಪರಿಣಾಮವಾಗಿ ಇಬ್ಬರು ಪ್ರಯಾಣಿಕರು ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ. ಬಸ್ನಲ್ಲಿದ್ದ ಇತರ ಪ್ರಯಾಣಿಕರಿಗೆ ಸಣ್ಣಪುಟ್ಟ ಹಾಗೂ ಗಂಭೀರ ಗಾಯಗಳಾಗಿದ್ದು, ಅವರನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಲಾಗಿದೆ.
ಅಪಘಾತದ ಬಳಿಕ ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇನಲ್ಲಿ ಕೆಲಕಾಲ ವಾಹನ ಸಂಚಾರ ಸಂಪೂರ್ಣವಾಗಿ ಅಸ್ತವ್ಯಸ್ತಗೊಂಡಿತ್ತು. ವಿಷಯ ತಿಳಿಯುತ್ತಿದ್ದಂತೆ ಬಿಡದಿ ಠಾಣೆಯ ಪೊಲೀಸರು ಸ್ಥಳಕ್ಕಾಗಮಿಸಿ ಪರಿಶೀಲನೆ ನಡೆಸಿದ್ದಾರೆ.



