ಕೋರ್ಟ್ ನಿಯಮ ಉಲ್ಲಂಘಿಸಿ ದೆಹಲಿಗೆ ಪ್ರಯಾಣ ಕೈಗೊಂಡ ಸಚಿವ ನಾಗೇಂದ್ರ; ಮತ್ತೆ ಎದುರಾಗುತ್ತಾ ಸಂಕಷ್ಟ?

ಪ್ರಗತಿವಾಹಿನಿ ಸುದ್ದಿ: ವಾಲ್ಮೀಕಿ ಅಭಿವೃದ್ಧಿ ನಿಗಮದ ಹಣ ದುರುಪಯೋಗ ಹಗರಣದಲ್ಲಿ ಷರತ್ತುಬದ್ಧ ಜಾಮೀನಿನ ಮೇಲೆ ಹೊರಗಿರುವ ಬಿ.ನಾಗೇಂದ್ರ ಅವರಿಗೆ ಸಚಿವ ಸಂಪುಟದಲ್ಲಿ ಮತ್ತೆ ಸ್ಥಾನ ಸಿಕ್ಕ ಬಳಿಕ ದೆಹಲಿಗೆ ಪ್ರಯಾಣ ಬೆಳಸುವ ಮೂಲಕ ಕೋರ್ಟ್ ಷರತ್ತು ಉಲ್ಲಂಘನೆ ಮಾಡಿದ್ದಾರೆ ಎಂಬ ಆರೋಪ ಕೇಳಿಬಂದಿದೆ.
ಇದನ್ನು ಗಂಭೀರವಾಗಿ ಪರಿಗಣಿಸಿರುವ ಜಾರಿ ನಿರ್ದೇಶನಾಲಯ (ಇಡಿ) ಸಾಕ್ಷ್ಯ ಸಂಗ್ರಹಕ್ಕೆ ಮುಂದಾಗಿದೆ. ಆರೋಪ ಸಾಬೀತಾದರೆ ನಾಗೇಂದ್ರ ಅವರ ಜಾಮೀನು ರದ್ದುಗೊಳಿಸಲು ಇ.ಡಿ ಕೋರ್ಟ್ ಮೆಟ್ಟಿಲೇರುವ ಸಾಧ್ಯತೆ ಇದೆ.
ವಾಲ್ಮೀಕಿ ನಿಗಮದ ಹಗರಣದಲ್ಲಿ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ನಾಗೇಂದ್ರ ಅವರಿಗೆ ಜಾಮೀನು ನೀಡುವಾಗ, ಕರ್ನಾಟಕ ರಾಜ್ಯದಿಂದ ಹೊರಗೆ ಪ್ರಯಾಣಿಸಬೇಕಾದರೆ ನ್ಯಾಯಾಲಯದಿಂದ ಮುಂಚಿತವಾಗಿ ಲಿಖಿತ ಅನುಮತಿ ಪಡೆಯುವುದು ಕಡ್ಡಾಯ ಎಂಬ ಸ್ಪಷ್ಟ ಷರತ್ತು ವಿಧಿಸಿತ್ತು.
ಕಠಿಣ ಷರತ್ತುಗಳಿದ್ದರೂ ನಾಗೇಂದ್ರ ಅವರು ನ್ಯಾಯಾಲಯದ ಅನುಮತಿ ಪಡೆಯದೇ ಇದೇ ಜುಲೈ 15 ಮತ್ತು ಜುಲೈ 26ರಂದು ದೆಹಲಿಗೆ ಪ್ರಯಾಣಿಸಿದ್ದಾರೆ ಎನ್ನಲಾಗಿದೆ. ಜುಲೈ 15ರ ಸಂಜೆ 6:15ರ ಇಂಡಿಗೋ ವಿಮಾನ ಹಾಗೂ ಜುಲೈ 26ರ ಮಧ್ಯಾಹ್ನ 1:55ರ ವಿಮಾನದಲ್ಲಿ ಅವರು ದೆಹಲಿಗೆ ತೆರಳಿದ್ದರೆಂದು ಇಡಿಗೆ ಮಾಹಿತಿ ಲಭಿಸಿದೆ.
ಈ ಮಾಹಿತಿ ಲಭ್ಯವಾಗುತ್ತಿದ್ದಂತೆ ಇಡಿ ಅಧಿಕಾರಿಗಳು ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಸಿಸಿಟಿವಿ ದೃಶ್ಯಾವಳಿಗಳು, ಶಿಷ್ಟಾಚಾರ ವಿಭಾಗದ ರಿಜಿಸ್ಟರ್ಗಳು ಹಾಗೂ ವಿಮಾನಯಾನ ಸಂಸ್ಥೆಯ ದಾಖಲೆಗಳನ್ನು ಪರಿಶೀಲಿಸುತ್ತಿದ್ದಾರೆ.
ನ್ಯಾಯಾಲಯ ಮೂರು ಬಾರಿ ನಾಗೇಂದ್ರ ಅವರಿಗೆ ರಾಜ್ಯದಿಂದ ಹೊರಗೆ ಹೋಗಲು ಅನುಮತಿ ನೀಡಿತ್ತು 2026ರ ಏಪ್ರಿಲ್ 26 ರಿಂದ ಜೂನ್ 2ರವರೆಗೆ, ಜೂನ್ 11 ರಿಂದ ಜುಲೈ 7ರವರೆಗೆ, ಜುಲೈ 16 ರಿಂದ ಜುಲೈ 25ರವರೆಗೆ ನ್ಯಾಯಾಲಯದಿಂದ ಅನುಮತಿ ಸಿಕ್ಕಿತ್ತು. ನ್ಯಾಯಾಲಯ ಅನುಮತಿ ನೀಡಿದ್ದ ಅವಧಿಗಿಂತ ಹೊರತಾಗಿ ಜುಲೈ 15 ಹಾಗೂ ಜುಲೈ 26ರಂದು ನಾಗೇಂದ್ರ ಅವರು ದೆಹಲಿಯಲ್ಲಿ ಕಾಣಿಸಿಕೊಂಡಿದ್ದಾರೆ ಎಂದು ಹೇಳಲಾಗುತ್ತಿದ್ದು, ಈ ನಿಟ್ಟಿನಲ್ಲಿ ಇಡಿ ಪರಿಶೀಲನೆ ನಡೆಸಿದೆ.


