Belagavi NewsBelgaum NewsEducationKarnataka NewsLatest

*ಇನಾಂ ಬಡಸ್‌ನಲ್ಲಿ ₹61 ಲಕ್ಷ ವೆಚ್ಚದ ಶಾಲೆ, ಅಂಗನವಾಡಿ ಕಟ್ಟಡ ಲೋಕಾರ್ಪಣೆ*

ಪ್ರಗತಿವಾಹಿನಿ ಸುದ್ದಿ: ಬೆಳಗಾವಿ: ಗ್ರಾಮೀಣ ಕ್ಷೇತ್ರದ ಇನಾಂ ಬಡಸ್ ಗ್ರಾಮದಲ್ಲಿ ಒಟ್ಟು ₹61 ಲಕ್ಷ ರೂ. ವೆಚ್ಚದಲ್ಲಿ ನಿರ್ಮಿಸಲಾದ ನೂತನ ಸರ್ಕಾರಿ ಮರಾಠಿ ಪೂರ್ವ ಪ್ರಾಥಮಿಕ ಶಾಲೆ ಹಾಗೂ ಅಂಗನವಾಡಿ ಕಟ್ಟಡಗಳನ್ನು ಮಂಗಳವಾರ ಸಾರ್ವಜನಿಕ ಸೇವೆಗೆ ಲೋಕಾರ್ಪಣೆಗೊಳಿಸಲಾಯಿತು.

Home add -Advt

ಗ್ರಾಮೀಣ ಭಾಗದ ಮಕ್ಕಳಿಗೆ ಉತ್ತಮ ಶೈಕ್ಷಣಿಕ ವಾತಾವರಣ ಹಾಗೂ ಅಗತ್ಯ ಮೂಲಸೌಕರ್ಯ ಕಲ್ಪಿಸುವ ಉದ್ದೇಶದಿಂದ ₹42 ಲಕ್ಷ ವೆಚ್ಚದಲ್ಲಿ ಸರ್ಕಾರಿ ಮರಾಠಿ ಪೂರ್ವ ಪ್ರಾಥಮಿಕ ಶಾಲೆಯ ನೂತನ ಕಟ್ಟಡ ನಿರ್ಮಿಸಲಾಗಿದೆ. ಇದೇ ವೇಳೆ ₹19 ಲಕ್ಷ ವೆಚ್ಚದಲ್ಲಿ ಸುಸಜ್ಜಿತ ಅಂಗನವಾಡಿ ಕಟ್ಟಡವನ್ನೂ ನಿರ್ಮಿಸಲಾಗಿದ್ದು, ಎರಡೂ ಕಟ್ಟಡಗಳ ಉದ್ಘಾಟನೆಯ ಮೂಲಕ ಗ್ರಾಮಸ್ಥರ ಬಹುದಿನಗಳ ಬೇಡಿಕೆ ಈಡೇರಿದಂತಾಗಿದೆ.

ಬೆಳಗಾವಿ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಮೃಣಾಲ್ ಹೆಬ್ಬಾಳಕರ್ ಹಾಗೂ ಸ್ಥಳೀಯ ಜನಪ್ರತಿನಿಧಿಗಳು ರಿಬ್ಬನ್ ಕತ್ತರಿಸುವ ಮೂಲಕ ನೂತನ ಕಟ್ಟಡಗಳನ್ನು ಉದ್ಘಾಟಿಸಿ ಸಾರ್ವಜನಿಕ ಸೇವೆಗೆ ಸಮರ್ಪಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಮೃಣಾಲ್‌ ಹೆಬ್ಬಾಳಕರ್, ಗ್ರಾಮೀಣ ಪ್ರದೇಶದ ಮಕ್ಕಳಿಗೆ ನಗರ ಪ್ರದೇಶದ ಮಕ್ಕಳಿಗೆ ದೊರೆಯುವಂತೆಯೇ ಗುಣಮಟ್ಟದ ಶಿಕ್ಷಣ ಮತ್ತು ಅಗತ್ಯ ಮೂಲಸೌಕರ್ಯ ಒದಗಿಸುವುದು ಸರ್ಕಾರದ ಪ್ರಮುಖ ಆದ್ಯತೆಯಾಗಿದೆ. ಮಕ್ಕಳ ಶೈಕ್ಷಣಿಕ ಬೆಳವಣಿಗೆಗೆ ಪೂರಕವಾದ ಉತ್ತಮ ವಾತಾವರಣ ಕಲ್ಪಿಸುವಲ್ಲಿ ನೂತನ ಶಾಲಾ ಕಟ್ಟಡ ಪ್ರಮುಖ ಪಾತ್ರ ವಹಿಸಲಿದೆ ಎಂದು ಹೇಳಿದರು.

ಕ್ಷೇತ್ರದ ಶಾಸಕಿ ಲಕ್ಷ್ಮೀ ಹೆಬ್ಬಾಳಕರ್ ಅವರ ಆಶಯದಂತೆ ಗ್ರಾಮೀಣ ಭಾಗದಲ್ಲಿ ಶಿಕ್ಷಣ, ಮಕ್ಕಳ ಆರೈಕೆ ಹಾಗೂ ಮೂಲಸೌಕರ್ಯ ಅಭಿವೃದ್ಧಿಗೆ ಆದ್ಯತೆ ನೀಡಲಾಗುತ್ತಿದೆ. ಶಾಲಾ ಶಿಕ್ಷಣದ ಜೊತೆಗೆ ಮಕ್ಕಳ ಪೂರ್ವ ಪ್ರಾಥಮಿಕ ಹಂತದಲ್ಲೇ ಉತ್ತಮ ಕಲಿಕಾ ವಾತಾವರಣ ಕಲ್ಪಿಸುವುದು ಅಗತ್ಯವಾಗಿದ್ದು, ಈ ನಿಟ್ಟಿನಲ್ಲಿ ಇನಾಂ ಬಡಸ್‌ನಲ್ಲಿ ನಿರ್ಮಿಸಲಾದ ಶಾಲೆ ಮತ್ತು ಅಂಗನವಾಡಿ ಕಟ್ಟಡಗಳು ಮಹತ್ವದ ಹೆಜ್ಜೆಯಾಗಿವೆ ಎಂದು ಅವರು ತಿಳಿಸಿದರು.

ನೂತನ ಕಟ್ಟಡಗಳಿಂದ ಗ್ರಾಮದ ಮಕ್ಕಳು ಸುರಕ್ಷಿತ ಹಾಗೂ ಉತ್ತಮ ವಾತಾವರಣದಲ್ಲಿ ಶಿಕ್ಷಣ ಪಡೆಯಲು ಅನುಕೂಲವಾಗಲಿದೆ. ಅಂಗನವಾಡಿ ಕೇಂದ್ರದ ಮೂಲಕ ಮಕ್ಕಳ ಪೌಷ್ಟಿಕತೆ, ಆರೋಗ್ಯ ಮತ್ತು ಪೂರ್ವ ಪ್ರಾಥಮಿಕ ಶಿಕ್ಷಣಕ್ಕೆ ಹೆಚ್ಚಿನ ಒತ್ತು ನೀಡಲು ಸಾಧ್ಯವಾಗಲಿದೆ. ಇದರಿಂದ ಮಕ್ಕಳ ಸಮಗ್ರ ಬೆಳವಣಿಗೆಗೆ ಅನುಕೂಲವಾಗಲಿದೆ ಎಂದು ಸ್ಥಳೀಯರು ಸಂತಸ ವ್ಯಕ್ತಪಡಿಸಿದರು.

ಕಾರ್ಯಕ್ರಮದಲ್ಲಿ ಕಾಡಾ ಅಧ್ಯಕ್ಷ ಯುವರಾಜ ಕದಂ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಬಾಳು ದೇಸೂರಕರ್, ಮುಖಂಡರಾದ ಮನೋಹರ್ ಬೆಳಗಾಂವ್ಕರ್, ನಾರಾಯಣ ಕಾಂಬಳೆ, ಗಿತೇಶ್ ತಾನಾಬ್, ದುರ್ಗಪ್ಪ ಪಾಟೀಲ, ದತ್ತು ಪಾಟೀಲ ಸೇರಿದಂತೆ ಕಾಂಗ್ರೆಸ್ ಪಕ್ಷದ ಹಿರಿಯ-ಕಿರಿಯ ನಾಯಕರು, ಕಾರ್ಯಕರ್ತರು, ಸ್ಥಳೀಯ ಜನಪ್ರತಿನಿಧಿಗಳು ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.

ನೂತನ ಶಾಲೆ ಹಾಗೂ ಅಂಗನವಾಡಿ ಕಟ್ಟಡಗಳ ಉದ್ಘಾಟನೆಯ ಸಂದರ್ಭದಲ್ಲಿ ಗ್ರಾಮಸ್ಥರು ಸಂತಸ ವ್ಯಕ್ತಪಡಿಸಿ, ಮಕ್ಕಳ ಶಿಕ್ಷಣ ಮತ್ತು ಮೂಲಸೌಕರ್ಯಕ್ಕೆ ಆದ್ಯತೆ ನೀಡಿರುವುದಕ್ಕೆ ಶಾಸಕಿ ಲಕ್ಷ್ಮೀ ಹೆಬ್ಬಾಳಕರ್ ಹಾಗೂ ಸಂಬಂಧಿಸಿದ ಜನಪ್ರತಿನಿಧಿಗಳಿಗೆ ಕೃತಜ್ಞತೆ ಸಲ್ಲಿಸಿದರು.

Related Articles

Back to top button