
ಪ್ರಗತಿವಾಹಿನಿ ಸುದ್ದಿ: ಚಾಮರಾಜನಗರ: ಕಾಡು ಪ್ರಾಣಿಗಳನ್ನು ಬೇಟೆಯಾಡುತ್ತಿದ್ದ ಮೂವರು ಕಾಡುಗಳ್ಳರು ಅರಣ್ಯ ಸಿಬ್ಬಂದಿಗಳ ಎನ್ ಕೌಂಟರ್ ಗೆ ಬಲಿಯಾಗಿರುವ ಘಟನೆ ನಡೆದಿದೆ.
ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಶಾಗ್ಯ ಅರಣ್ಯ ವ್ಯಾಪ್ತಿಯ ದಟ್ಟಿ ಎಂಬ ಪ್ರದೇಶದಲ್ಲಿ ಈ ಘಟನೆ ನಡೆದಿದೆ. ಕಾಡುಪ್ರಾಣಿಗಳನ್ನು ಬೇಟೆಯಾಡಿದ್ದ ಮೂವರು ಕಾಡುಗಳ್ಳರು, ಪ್ರಾಣಿಗಳ ಮಾಂಸ ಬೇರ್ಪಡಿಸುತ್ತಿದ್ದರು. ಈ ವೇಳೆ ಅರಣ್ಯ ಇಲಾಖೆ ಸಿಬ್ಬಂದಿಗಳು ದಾಳಿ ನಡೆಸಿ ಶಸ್ತ್ರಾಸ್ತ್ರ ಕೆಳಗಿಟ್ಟು ಶರಣಾಗುವಂತೆ ಸೂಚಿಸಿದ್ದಾರೆ. ಆದರೆ ಕಾಡುಗಳ್ಳರು ಶರಣಾಗದೇ ಅರಣ್ಯ ಇಲಾಖೆ ಸಿಬ್ಬಂದಿಗಳ ಮೇಲೆ ಫೈರಿಂಗ್ ನಡೆಸಿದ್ದಾರೆ ಎನ್ನಲಾಗಿದೆ.
ತಕ್ಷಣ ಎಚ್ಚೆತ್ತ ಅರಣ್ಯ ಸಿಬ್ಬಂದಿಗಳು ಕೌಂಟರ್ ಫೈರಿಂಗ್ ನಡೆಸಿದ್ದಾರೆ. ಅರಣ್ಯ ಇಲಾಖೆ ಸಿಬ್ಬಂದಿಗಳ ಗುಂಡೇಟಿಗೆ ಮೂವರು ಕಾಡುಗಳ್ಳರು ಸ್ಥಳದಲ್ಲೇ ಸಾವನ್ನಪಿದ್ದಾರೆ. ಮೃತರನ್ನು ಪೀಟರ್, ಕುಮಾರ್, ಅಂತೋಣಿಸ್ವಾಮಿ ಎಂದು ಗುರುತಿಸಲಾಗಿದೆ.
ಘಟನೆ ಬೆನ್ನಲ್ಲೇ ಮೃತರ ಕುಟುಂಬದವರು ಹನೂರು ಅರಣ್ಯ ಇಲಾಖೆ ಕಚೇರಿಗೆ ನುಗ್ಗಿ ಪೀಠೋಪಕರಣಗಳನ್ನು ಧ್ವಂಸಗೊಳಿಸಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮೃತರ್ಯಾರೂ ಕಾಡುಗಳ್ಳರಲ್ಲ. ಕಾಡಿಗೆ ಹೋದವರನ್ನು ಅರಣ್ಯ ಇಲಾಖೆ ಸಿಬ್ಬಂದಿಗಳು ಎನ್ ಕೌಂಟರ್ ಮಾಡಿದ್ದಾರೆ. ತಮ್ಮ ಕುಟುಂಬದವರ ಸಾವಿಗೆ ನ್ಯಾಯಕೊಡಿಸಿ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.




