*ರಾಜ್ಯದಲ್ಲಿ ಬದಲಾದ ಹವಾಮಾನ: ಬಿರುಗಾಳಿ ಸಹಿತ ಭಾರಿ ಮಳೆ*

ಪ್ರಗತಿವಾಹಿನಿ ಸುದ್ದಿ: ರಾಜ್ಯದಲ್ಲಿ ಮುಂದಿನ ಕೆಲವು ದಿನಗಳ ಕಾಲ ಬಿರುಗಾಳಿ ಸಹಿತ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಸೂಚಿಸಿದೆ.
ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡದ ಬಹುತೇಕ ಭಾಗಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ನಿರೀಕ್ಷೆಯಿದೆ.
ಉತ್ತರ ಮತ್ತು ದಕ್ಷಿಣ ಒಳನಾಡಿನ ಬಹುತೇಕ ಜಿಲ್ಲೆಗಳಲ್ಲಿ ಬಿರುಗಾಳಿಯ ಆರ್ಭಟ ಹೆಚ್ಚಿರಲಿದೆ. ಧಾರವಾಡ, ಗದಗ, ಬೀದರ್, ವಿಜಯಪುರ, ಮಂಡ್ಯ ಮೈಸೂರು ಹಾಗೂ ಶಿವಮೊಗ್ಗ ಭಾಗಗಳಲ್ಲಿ ಗಂಟೆಗೆ 40 ರಿಂದ 50 ಕಿಲೋಮೀಟರ್ ವೇಗದಲ್ಲಿ ಬಲವಾದ ಗಾಳಿ ಬೀಸಲಿದ್ದು, ಅಲ್ಲಲ್ಲಿ ಸಾಧಾರಣ ಮಳೆಯಾಗಲಿದೆ.
ಬಾಗಲಕೋಟೆ, ಬೆಳಗಾವಿ, ಹಾವೇರಿ, ಕೊಪ್ಪಳ, ಚಿಕ್ಕಮಗಳೂರು, ಹಾಸನ, ಕೊಡಗು, ಚಾಮರಾಜನಗರ, ರಾಮನಗರ ಮತ್ತು ಬೆಂಗಳೂರಿನ ವಿವಿಧ ಭಾಗಗಳಲ್ಲಿ ಗಂಟೆಗೆ 30 ರಿಂದ 40 ಕಿಲೋಮೀಟರ್ ವೇಗದಲ್ಲಿ ಬಿರುಗಾಳಿ ಸಹಿತ ಮಳೆಯಾಗುವ ಸಾಧ್ಯತೆಯಿದೆ.
ಬಳ್ಳಾರಿ, ಚಿತ್ರದುರ್ಗ, ದಾವಣಗೆರೆ, ಕೋಲಾರ, ತುಮಕೂರು, ಚಿಕ್ಕಬಳ್ಳಾಪುರ, ಕಲಬುರಗಿ, ರಾಯಚೂರು ಹಾಗೂ ಯಾದಗಿರಿ ಜಿಲ್ಲೆಗಳಲ್ಲೂ ಗಾಳಿಯ ತೀವ್ರತೆ ಹೆಚ್ಚಿರಲಿದ್ದು, ಸಾರ್ವಜನಿಕರು ಅನಗತ್ಯವಾಗಿ ಮನೆಯಿಂದ ಹೊರಬರದೆ ಎಚ್ಚರಿಕೆಯಿಂದ ಇರಲು ಹವಾಮಾನ ಇಲಾಖೆ ಸಲಹೆ ನೀಡಿದೆ.




