*ಇಬ್ಬರು ಮಕ್ಕಳೊಂದಿಗೆ ನಾಪತ್ತೆಯಾದ ದಂಪತಿ*

ಪ್ರಗತಿವಾಹಿನಿ ಸುದ್ದಿ: ಬೆಂಗಳೂರಿಗೆ ಹೋಗಿ ಬರುತ್ತೇವೆ ಎಂದು ಹೇಳಿ ಹೊರಟ ದಂಪತಿ ತಮ್ಮ ಇಬ್ಬರು ಮಕ್ಕಳೊಂದಿಗೆ ನಾಪತ್ತೆಯಾಗಿರುವ ಘಟನೆ ನಡೆದಿದೆ.
ದಾವಣಗೆರೆ ನಗರದ ಬನಶಂಕರಿ ಬಡಾವಣೆಯಲ್ಲಿ ವಾಸವಾಗಿದ್ದ ರಮೇಶ್ ಕುಮಾರ್ (38), ಅವರ ಪತ್ನಿ ಜಯಶೀಲ (36), ಪುತ್ರ ಹಿತೇಶ್ (9) ಹಾಗೂ ಪುತ್ರಿ ಪ್ರೇರಣ (3) ನಾಪತ್ತೆಯಾದವರು. ದಾವಣಗೆರೆ ತಾಲೂಕಿನ ಶ್ಯಾಗಲೆ ಗ್ರಾಮದವರಾದ ರಮೇಶ್ ಕುಮಾರ್ ಷೇರು ಮಾರುಕಟ್ಟೆ ಹೂಡಿಕೆ ವ್ಯವಹಾರ ನಡೆಸುತ್ತಿದ್ದರು. ಹಲವರಿಂದ ಹಣ ಸಂಗ್ರಹಿಸಿ ಹೂಡಿಕೆ ಮಾಡಿದ್ದರು. ಆದರೆ ಕೆಲ ತಿಂಗಳಿಂದ ಷೇರುಮಾರುಕಟ್ಟೆ ಹೂಡಿಕೆಯಲ್ಲಿ ಭಾರಿ ನಷ್ಟ ಅನುಭವಿಸಿದ್ದರು ಎನ್ನಲಾಗಿದೆ.
ಇದೀಗ ಕುಟುಂಬ ಸಮೇತ ಬೆಂಗಳೂರಿಗೆ ಹೋಗಿ ಬರುತ್ತೇವೆ ಎಂದು ಹೇಳಿ ಹೋದವರು ಮನೆಗೆ ವಾಪಾಸ್ ಆಗಿಲ್ಲ. ರಮೇಶ್ ಅವರ ಪೋಷಕರು ಹಾಗೂ ಸಂಬಂಧಿಕರು ಬೆಂಗಳೂರು ಸೇರಿದಂತೆ ಪರಿಚಯವಿರುವ ಹಲವು ಕಡೆಗಳಲ್ಲಿ ಹುಡುಕಾಟ ನಡೆಸಿದ್ದಾರೆ. ಆದರೂ ನಾಲ್ವರು ಪತ್ತೆಯಗೈಲ್ಲ.
ಆತಂಕದಲ್ಲಿರುವ ಕುಟುಂಬ ಸದಸ್ಯರು ದಾವಣಗೆರೆಯ ವಿದ್ಯಾನಗರ ಪೊಲೀಸ್ ಠಾಣೆಯಲ್ಲಿ ನಾಪತ್ತೆ ಪ್ರಕರಣ ದಾಖಲಿಸಿದ್ದಾರೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ಆರಂಭಿಸಿದ್ದು, ರಮೇಶ್ ಅವರ ಕೊನೆಯ ಮೊಬೈಲ್ ನೆಟ್ವರ್ಕ್ ಲೊಕೇಶನ್ ಹಾಗೂ ಕೆಎಸ್ಆರ್ಟಿಸಿ ಬಸ್ ನಿಲ್ದಾಣದ ಸಿಸಿಟಿವಿ ದೃಶ್ಯಗಳನ್ನು ಪರಿಶೀಲಿಸುತ್ತಿದ್ದಾರೆ.



