*ರೈಲು ಅಪಘಾತದಲ್ಲಿ ಮೃತಪಟ್ಟ ಯುವಕನ ಕುಟುಂಬಕ್ಕೆ ಲಕ್ಷ್ಮೀ ಹೆಬ್ಬಾಳಕರ್ ಸಾಂತ್ವನ*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ರಾಜಹಂಸಗಡ ಗ್ರಾಮದ ಕಾಂಗ್ರೆಸ್ ಪಕ್ಷದ ಸಕ್ರಿಯ ಕಾರ್ಯಕರ್ತರಾಗಿದ್ದ 28 ವರ್ಷದ ಸುನಿಲ್ ಬಸ್ತವಾಡಕರ್ ಅವರು ಇತ್ತೀಚೆಗೆ ಚಿಕ್ಕೋಡಿ ಬಳಿ ಸಂಭವಿಸಿದ ರೈಲು ಅಪಘಾತದಲ್ಲಿ ಅಕಾಲಿಕವಾಗಿ ಮೃತಪಟ್ಟ ಹಿನ್ನೆಲೆಯಲ್ಲಿ ಮಾಜಿ ಸಚಿವೆ, ಶಾಸಕಿ ಲಕ್ಷ್ಮೀ ಹೆಬ್ಬಾಳಕರ್ ಅವರು ಇಂದು ಅವರ ನಿವಾಸಕ್ಕೆ ಭೇಟಿ ನೀಡಿದರು.
ಮೃತ ಸುನಿಲ್ ಅವರ ಕುಟುಂಬದ ಸದಸ್ಯರನ್ನು ಭೇಟಿ ಮಾಡಿದ ಲಕ್ಷ್ಮೀ ಹೆಬ್ಬಾಳಕರ್ ಅವರು, ದುಃಖದಲ್ಲಿರುವ ಕುಟುಂಬಕ್ಕೆ ಧೈರ್ಯ ತುಂಬಿ ಸಾಂತ್ವನ ಹೇಳಿದರು. ಯುವಕನ ಅಕಾಲಿಕ ನಿಧನದಿಂದ ಕುಟುಂಬಕ್ಕೆ ಉಂಟಾಗಿರುವ ನೋವಿನಲ್ಲಿ ತಾವೂ ಭಾಗಿಯಾಗಿರುವುದಾಗಿ ತಿಳಿಸಿ, ಈ ಕಷ್ಟದ ಸಂದರ್ಭದಲ್ಲಿ ಕುಟುಂಬದೊಂದಿಗೆ ಇರುವುದಾಗಿ ಭರವಸೆ ನೀಡಿದರು.
28ನೇ ವಯಸ್ಸಿನಲ್ಲಿಯೇ ಸುನಿಲ್ ಅವರು ದುರಂತ ಅಂತ್ಯ ಕಂಡಿರುವುದು ಅತ್ಯಂತ ನೋವಿನ ಸಂಗತಿಯಾಗಿದೆ. ಅವರ ನಿಧನದಿಂದ ಕುಟುಂಬದವರು ಹಾಗೂ ಗ್ರಾಮಸ್ಥರು ತೀವ್ರ ದುಃಖಕ್ಕೊಳಗಾಗಿದ್ದಾರೆ ಎಂದು ಅವರು ಹೇಳಿದರು.
ಮೃತ ಸುನಿಲ್ ಅವರ ಆತ್ಮಕ್ಕೆ ಭಗವಂತನು ಚಿರಶಾಂತಿ ನೀಡಲಿ ಹಾಗೂ ಕುಟುಂಬದ ಸದಸ್ಯರಿಗೆ ಈ ದುಃಖವನ್ನು ಭರಿಸುವ ಶಕ್ತಿ ಮತ್ತು ಧೈರ್ಯ ನೀಡಲಿ ಎಂದು ಲಕ್ಷ್ಮೀ ಹೆಬ್ಬಾಳಕರ್ ಅವರು ಪ್ರಾರ್ಥಿಸಿದರು.




