*ಪ್ರತಿ ಶುದ್ಧ ಕುಡಿವ ನೀರು ಘಟಕ ದುರಸ್ತಿಗೆ 3,000 ರೂ. ವೆಚ್ಚ: ಈಶ್ವರ ಖಂಡ್ರೆ*

ಪ್ರಗತಿವಾಹಿನಿ ಸುದ್ದಿ: ಬೆಂಗಳೂರು: ಶುದ್ಧ ಕುಡಿಯುವ ನೀರು ಪೂರೈಸಲು ಗ್ರಾಮೀಣ ಪ್ರದೇಶದಲ್ಲಿ ಸ್ಥಾಪಿಸಲಾಗಿರುವ ಪ್ರತಿ ಶುದ್ಧ ಕುಡಿಯುವ ನೀರಿನ ಘಟಕಗಳ ದುರಸ್ತಿಗೆ 3 ಸಾವಿರ ರೂ. ನೀಡಲಾಗಿದ್ದು, ಕಾರ್ಯಯೋಗ್ಯಗೊಳಿಸಲಾಗುವುದು ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಈಶ್ವರ ಬಿ ಖಂಡ್ರೆ ವಿಧಾನಸಭೆಗಿಂದು ತಿಳಿಸಿದ್ದಾರೆ.
ಪ್ರಶ್ನೋತ್ತರ ಕಲಾಪದಲ್ಲಿ ಉತ್ತರ ನೀಡಿದ ಅವರು ರಾಜ್ಯದಲ್ಲಿ ಒಟ್ಟು 20,340 ಶುದ್ಧ ಕುಡಿಯುವ ನೀರಿನ ಘಟಕಗಳನ್ನು ಸ್ಥಾಪಿಸಲಾಗಿದೆ. ಈ ಪೈಕಿ 17208 ಘಟಕಗಳು ಕಾರ್ಯನಿರ್ವಹಿಸುತ್ತಿದ್ದು, 602 ಘಟಕ ಕಾರ್ಯ ಸ್ಥಗಿತಗೊಳಿಸಿವೆ. 2530 ಘಟಕಗಳು ದುರಸ್ತಿ ಆಗಬೇಕಿದೆ ಎಂದು ಮಾಹಿತಿ ನೀಡಿದರು.
ಕಾರ್ಯನಿರ್ವಹಿಸದ ಶುದ್ಧ ಕುಡಿಯುವ ನೀರಿನ ಘಟಕಗಳನ್ನು ಗ್ರಾಮ ಪಂಚಾಯತಿ ಅನುದಾನದಿಂದ ದುರಸ್ತಿ ಮಾಡಲು, ಪಂಚಾಯತಿಯಲ್ಲಿ ಅನುದಾನ ಲಭ್ಯವಿಲ್ಲದಿದ್ದಲ್ಲಿ ಇಲಾಖೆಯ ಅನುದಾನ ಒದಗಿಸಲಾಗುವುದು ಎಂದು ತಿಳಿಸಿದರು.
ರಾಜ್ಯದಲ್ಲಿನ ಶುದ್ಧ ಕುಡಿಯುವ ನೀರು ಘಟಕಗಳ ದುರಸ್ತಿಗೆ 29.50 ಕೋಟಿ ರೂ. ಹಂಚಿಕೆ ಮಾಡಿದ್ದು, 13 ಕೋಟಿ ರೂ. ಬಿಡುಗಡೆ ಮಾಡಲಾಗಿದೆ. ಆನೆಕಲ್ ವಿಧಾನಸಭಾ ಕ್ಷೇತ್ರದಲ್ಲಿ ಒಟ್ಟು 228 ಶುದ್ಧ ಕುಡಿಯುವ ನೀರಿನ ಘಟಕಗಳಿದ್ದು, ಆ ಪೈಕಿ 219 ಘಟಕ ಕಾರ್ಯನಿರ್ವಹಿಸುತ್ತಿವೆ. 9 ಘಟಕಗಳು ಸ್ಥಗಿತವಾಗಿವೆ ಎಂದೂ ತಿಳಿಸಿದರು.




