Belagavi NewsBelgaum NewsHealthKannada NewsKarnataka News

*ಸ್ವಯಂ ಪ್ರೇರಿತ ರಕ್ತದಾನ ಶಿಬಿರಕ್ಕೆ ಅಭೂತಪೂರ್ವ ಸ್ಪಂದನೆ: ರಕ್ತದಾನ ಶಿಬಿರಕ್ಕೆ ಪ್ರಾದೇಶಿಕ ಆಯುಕ್ತರಿಂದ ಚಾಲನೆ*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಜಿಲ್ಲಾ ಪಂಚಾಯತ ವತಿಯಿಂದ ಶಿಕ್ಷಕರ ದಿನಾಚರಣೆ ಅಂಗವಾಗಿ ಜಿಲ್ಲಾದ್ಯಂತ ಗುರುವಾರ ಆಯೋಜಿಸಿದ್ದ ಸ್ವಯಂ ಪ್ರೇರಿತ ರಕ್ತದಾನ ಶಿಬಿರಕ್ಕೆ ಅಭೂತಪೂರ್ವ ಸ್ಪಂದನೆ ವ್ಯಕ್ತವಾಗಿದ್ದು, ಸರ್ಕಾರಿ ನೌಕರರು, ಸಿಬ್ಬಂದಿ, ಸಂಘ-ಸಂಸ್ಥೆಗಳ ಸದಸ್ಯರು ಹಾಗೂ ಸಾರ್ವಜನಿಕರು ಸಾವಿರಾರು ಸಂಖ್ಯೆಯಲ್ಲಿ ಬಂದು ರಕ್ತದಾನ ಮಾಡಿದರು.

ಜಿಲ್ಲೆಯ ಎಲ್ಲ ತಾಲೂಕು ಸೇರಿದಂತೆ ಒಟ್ಟು 23 ಸ್ಥಳಗಳಲ್ಲಿ ರಕ್ತದಾನ ಶಿಬಿರವನ್ನು ಆಯೋಜಿಸಲಾಗಿತ್ತು. ವಿಶೇಷ ಚೇತನರು, ಪೌರಕಾರ್ಮಿಕರು, ವಿಬಿ-ಜಿ ರಾಮ್ ಜಿ ಯೋಜನೆಯಡಿ ಕೆಲಸ ಮಾಡುವ ಕೂಲಿಕಾರರು, ರೈತರು, ವ್ಯಾಪಾರಿಗಳು ಕೂಡ ಸ್ವಯಂ ಪ್ರೇರಿತರಾಗಿ ಬಂದು ರಕ್ತದಾನ ಮಾಡುವ ಮೂಲಕ ಶಿಬಿರದ ಯಶಸ್ಸಿಗೆ ಕೈಜೋಡಿಸಿದರು.

Home add -Advt

ನಗರದ ಚಿಮ್ಸ್ ಸೂಪರ್ ಸ್ಪೆಶಾಲಿಟಿ ಆಸ್ಪತ್ರೆಯಲ್ಲಿ ಗುರುವಾರ(ಸೆ.3) ಪ್ರಾದೇಶಿಕ ಆಯುಕ್ತರಾದ ಜಾನಕಿ ಕೆ.ಎಮ್. ರವರು ರಕ್ತದಾನ ಶಿಬಿರಕ್ಕೆ ಚಾಲನೆ ನೀಡಿದರು.

ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಾಹುಲ್ ಶಿಂಧೆ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್, ಡಿ.ಸಿ.ಎಫ್. ಎನ್.ಇ. ಕ್ರಾಂತಿ, ಜಿಪಂ ಯೋಜನಾ ನಿರ್ದೇಶಕ ರವಿ ಬಂಗಾರೆಪ್ಪನವರ್,  ಬಿಮ್ಸ್ ನಿರ್ದೇಶಕ ವಿನಯ ದಾಸ್ತಿಕೊಪ್ಪ, ಪಿಎಂ ಪೋಷಣ ಅಭಿಯಾನದ ಜಿಲ್ಲಾ ಶಿಕ್ಷಣಾಧಿಕಾರಿ ಲಕ್ಷ್ಮಣರಾವ್ ಯಕ್ಕುಂಡಿ, ಡಾ.ಚಾಂದನಿ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು, ಸಿಬ್ಬಂದಿ, ಸಂಘ-ಸಂಸ್ಥೆಗಳ ಸದಸ್ಯರು ಹಾಗೂ ಸಾರ್ವಜನಿಕರು ಭಾಗವಹಿಸಿದ್ದರು.

ವಿವಿಧ ಮತಕ್ಷೇತ್ರಗಳ ಶಾಸಕರು, ಸ್ವಾಮೀಜಿಯವರು, ಜನಪ್ರತಿನಿಧಿಗಳು ಆಯಾ ತಾಲೂಕಿನ ರಕ್ತದಾನ ಶಿಬಿರದಲ್ಲಿ ಭಾಗವಹಿಸಿ ಶಿಬಿರಗಳಿಗೆ ಚಾಲನೆ ನೀಡಿ, ಹೆಚ್ಚಿನ ಸಂಖ್ಯೆಯಲ್ಲಿ ರಕ್ತದಾನ ಮಾಡುವಂತೆ ಸಾರ್ವಜನಿಕರಿಗೆ ಪ್ರೋತ್ಸಾಹ ನೀಡಿದರು.

ಬೆಳಿಗ್ಗೆ 8 ಗಂಟೆಯಿಂದ ರಕ್ತದಾನ ಆರಂಭಿಸಿ ಸಂಜೆ 7 ಗಂಟೆಯವರೆಗೂ ರಕ್ತದಾನ ಶಿಬಿರ ಜರುಗಿತು. ರಕ್ತದಾನಕ್ಕೆ ಬರುವ ಎಲ್ಲರಿಗೂ ಮೂಲಸೌಕರ್ಯಗಳಾದ ಕುಡಿಯುವ ನೀರು, ಊಟ, ಉಪಹಾರ, ವಿಶ್ರಾಂತಿ ವ್ಯವಸ್ಥೆ, ವೈದ್ಯಕೀಯ ತಪಾಸಣೆ, ಆರೋಗ್ಯದ ಮಾರ್ಗದರ್ಶನ ನೀಡುವ ವ್ಯವಸ್ಥೆಯನ್ನು ಜೊತೆಗೆ ರಕ್ತದಾನಿಗಳಿಗೆ ಪ್ರಮಾಣಪತ್ರ ನೀಡಿ ಅಭಿನಂದನೆ ಸಲ್ಲಿಸಲಾಯಿತು.

Related Articles

Back to top button