Belagavi NewsBelgaum NewsKannada NewsKarnataka NewsLatest

*ಮತ್ತೆ ₹9 ಕೋಟಿ ವೆಚ್ಚದ ರಸ್ತೆ ಅಭಿವೃದ್ಧಿಗೆ ಚಾಲನೆ ನೀಡಿದ ಲಕ್ಷ್ಮೀ ಹೆಬ್ಬಾಳಕರ್*

ಮತ್ತೆ ₹9 ಕೋಟಿ ವೆಚ್ಚದ ರಸ್ತೆ ಅಭಿವೃದ್ಧಿಗೆ ಚಾಲನೆ ನೀಡಿದ ಲಕ್ಷ್ಮೀ ಹೆಬ್ಬಾಳಕರ್

ಬೆಳವಟ್ಟಿ–ಕರ್ಲೆ–ಕವಳೆವಾಡಿ ಹಾಗೂ ಕುದ್ರೆಮನಿ–ಸೋನೋಲಿ ಸಂಪರ್ಕ ರಸ್ತೆಗಳ ಕಾಮಗಾರಿಗೆ ಭೂಮಿಪೂಜೆ

Home add -Advt

ಪ್ರಗತಿವಾಹಿನಿ ಸುದ್ದಿ/ ಬೆಳಗಾವಿ: ಬೆಳಗಾವಿ ಗ್ರಾಮೀಣ ಕ್ಷೇತ್ರದಲ್ಲಿ ರಸ್ತೆ ಅಭಿವೃದ್ಧಿಗೆ ಮತ್ತಷ್ಟು ವೇಗ ನೀಡಿರುವ ಮಾಜಿ ಸಚಿವೆ, ಶಾಸಕಿ ಲಕ್ಷ್ಮೀ ಹೆಬ್ಬಾಳಕರ್ ಅವರು, ಮಂಗಳವಾರ ಒಟ್ಟು ₹20 ಕೋಟಿ ವೆಚ್ಚದ ಪ್ರಮುಖ ರಸ್ತೆ ಕಾಮಗಾರಿಗಳಿಗೆ ಭೂಮಿಪೂಜೆ ನೆರವೇರಿಸಿ ಚಾಲನೆ ನೀಡಿದರು.

ಮಂಗಳವಾರ ಬೆಳಗ್ಗೆ ಬೆಳಗಾವಿ ನಗರದ ಭಾಗವಾಗಿರುವ ಚಿಕ್ಕುಬಾಗ್ ಪ್ರದೇಶದಲ್ಲಿ ₹11 ಕೋಟಿ ವೆಚ್ಚದ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಚಾಲನೆ ನೀಡಿದ್ದ ಲಕ್ಷ್ಮೀ ಹೆಬ್ಬಾಳಕರ್, ಬಳಿಕ ಕ್ಷೇತ್ರದ ಗ್ರಾಮೀಣ ಭಾಗದಲ್ಲಿ ಮತ್ತೆರಡು ಮಹತ್ವದ ರಸ್ತೆ ಕಾಮಗಾರಿಗಳಿಗೆ ಚಾಲನೆ ನೀಡಿದರು.

ಬೆಳವಟ್ಟಿ ಗ್ರಾಮದಿಂದ ಕರ್ಲೆ ಹಾಗೂ ಕವಳೆವಾಡಿ ಗ್ರಾಮಗಳ ಮುಖ್ಯ ರಸ್ತೆಗೆ ಸಂಪರ್ಕ ಕಲ್ಪಿಸುವ ರಸ್ತೆಯನ್ನು ₹5 ಕೋಟಿ ವೆಚ್ಚದಲ್ಲಿ ನಿರ್ಮಿಸಲಾಗುತ್ತಿದ್ದು, ಗ್ರಾಮಗಳ ಸುಗಮ ಸಂಚಾರಕ್ಕೆ ಈ ರಸ್ತೆ ಮಹತ್ವದ ಸಂಪರ್ಕ ಕೊಂಡಿಯಾಗಲಿದೆ. ಗ್ರಾಮಸ್ಥರು, ರೈತರು ಹಾಗೂ ಸಾರ್ವಜನಿಕರ ಸಂಚಾರಕ್ಕೆ ಅನುಕೂಲವಾಗುವಂತೆ ರಸ್ತೆಯ ಅಭಿವೃದ್ಧಿಗೆ ವಿಶೇಷ ಆದ್ಯತೆ ನೀಡಲಾಗಿದೆ.

ಇದೇ ವೇಳೆ ಕುದ್ರೆಮನಿ ಹಾಗೂ ಸೋನೋಲಿ ಗ್ರಾಮಗಳಿಗೆ ಸಂಪರ್ಕ ಕಲ್ಪಿಸುವ ರಸ್ತೆ ಕಾಮಗಾರಿಗೂ ₹4 ಕೋಟಿ ವೆಚ್ಚದಲ್ಲಿ ಚಾಲನೆ ನೀಡಲಾಯಿತು. ಈ ರಸ್ತೆ ನಿರ್ಮಾಣದಿಂದ ಗ್ರಾಮಸ್ಥರು, ರೈತರು ಹಾಗೂ ಸಾರ್ವಜನಿಕರ ದಿನನಿತ್ಯದ ಸಂಚಾರ ಮತ್ತಷ್ಟು ಸುಗಮವಾಗಲಿದ್ದು, ಕ್ಷೇತ್ರದ ಮೂಲಸೌಕರ್ಯಕ್ಕೂ ಹೆಚ್ಚಿನ ಬಲ ಸಿಗಲಿದೆ.

“ಗ್ರಾಮಗಳ ಪ್ರಗತಿಯೇ ಕ್ಷೇತ್ರದ ಪ್ರಗತಿ. ಕ್ಷೇತ್ರದ ಪ್ರತಿಯೊಂದು ಗ್ರಾಮಕ್ಕೂ ಉತ್ತಮ ರಸ್ತೆ, ಮೂಲಸೌಕರ್ಯ ಹಾಗೂ ಅಗತ್ಯ ಸೌಲಭ್ಯಗಳನ್ನು ಕಲ್ಪಿಸುವುದು ನಮ್ಮ ಆದ್ಯತೆ. ಬೆಳಗಾವಿ ಗ್ರಾಮೀಣ ಕ್ಷೇತ್ರದ ಸರ್ವಾಂಗೀಣ ಅಭಿವೃದ್ಧಿಗಾಗಿ ನಿರಂತರವಾಗಿ ಶ್ರಮಿಸಲಾಗುತ್ತಿದೆ,” ಎಂದು ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು.

ಒಂದೇ ದಿನದಲ್ಲಿ ನಗರ ಭಾಗದಲ್ಲಿ ₹11 ಕೋಟಿ ಹಾಗೂ ಗ್ರಾಮೀಣ ಭಾಗದಲ್ಲಿ ₹9 ಕೋಟಿ ಸೇರಿದಂತೆ ಒಟ್ಟು ₹20 ಕೋಟಿ ವೆಚ್ಚದ ರಸ್ತೆ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಿರುವುದು ಕ್ಷೇತ್ರದ ರಸ್ತೆ ಮೂಲಸೌಕರ್ಯ ಅಭಿವೃದ್ಧಿಗೆ ನೀಡಲಾಗುತ್ತಿರುವ ಆದ್ಯತೆಯನ್ನು ತೋರಿಸುತ್ತದೆ.

ಈ ಸಂದರ್ಭದಲ್ಲಿ ಯುವ ಕಾಂಗ್ರೆಸ್ ಮುಖಂಡ ಮೃಣಾಲ್ ಹೆಬ್ಬಾಳಕರ್, ಆಯಾ ಗ್ರಾಮಗಳ ಹಿರಿಯರು, ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.

Related Articles

Back to top button