*ರಾಹುಲ್ ಗಾಂಧಿ ಭೇಟಿಯಾದ ಮಾಜಿ ಸಿಎಂ ಸಿದ್ದರಾಮಯ್ಯ: ಕುತೂಹಲ ಮೂಡಿಸಿದ ಚರ್ಚೆ*

ಪ್ರಗತಿವಾಹಿನಿ ಸುದ್ದಿ: ಮಹತ್ವದ ಬೆಳವಣಿಗೆಯೊಂದರಲ್ಲಿ ದೆಹಲಿಗೆ ತೆರಳಿರುವ ಮಾಅಜಿ ಸಿಎಂ ಸಿದ್ದರಾಮಯ್ಯ ಲೋಕಸಭಾ ವಿಪಕ್ಷ ನಾಯಕ ರಾಹುಲ್ ಗಾಂಧಿಯವರನ್ನು ಭೇಟಿಯಾಗಿ ಚರ್ಚೆ ನಡೆಸಿದ್ದಾರೆ.
ಇಂದು ಬೆಳಿಗ್ಗೆ ಸಿದ್ದರಾಮಯ್ಯ, ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರನ್ನು ಭೇಟಿಯಾಗಿ ಮಾತುಕತೆ ನಡೆಸಿದರು. ಇತ್ತೀಚೆಗೆ ಕೆ.ಆರ್ ಪೇಟೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದ್ದ ಸಿದ್ದರಾಮಯ್ಯ, ಚುನಾವಣಾ ರಾಜಕೀಯ ನಿವೃತ್ತಿ ಹೊಂದುವ ಬಗ್ಗೆ ಹೇಳಿಕೆ ನೀಡಿದ್ದರು. ಮಾಜಿ ಸಿಎಂ ಸಿದ್ದರಾಮಯ್ಯ ಅವರ ಈ ಹೇಳಿಕೆ ಕಾಂಗ್ರೆಸ್ ನಲ್ಲಿ ಭಾರಿ ರಾಜಕೀಯ ಚರ್ಚೆಗಳಿಗೆ ಕಾರಣವಾಗಿತ್ತು. ಇದೇ ವಿಚಾರವಾಗಿ ಕೂಡ ರಾಹುಲ್ ಗಾಂಧಿ ಜೊತೆ ಚರ್ಚಿಸಿದ್ದಾರೆ ಎಂದು ಹೇಳಲಾಗುತ್ತಿದೆ.
ಇನ್ನು ಇಂದು ಸಂಜೆ ಸಿದ್ದರಾಮಯ್ಯ ಕೆ.ಸಿ.ವೇಣುಗೋಪಾಲ್ ಅವರನ್ನು ಭೇಟಿಯಾಗುತ್ತಿದ್ದಾರೆ. ರಾಜ್ಯ ರಾಜಕೀಯ ಬೆಳವಣಿಗೆಗಳು, ಸಚಿವ ಸಂಪುಟದಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿ ಸೇರಿದಂತೆ ಹಲವು ವಿಚರಗಳನ್ನು ಚರ್ಚಿಸುವ ಸಾಧ್ಯತೆ ಇದೆ ಎನ್ನಲಾಗಿದೆ.
ಒಟ್ಟಾರೆ ಸಿದ್ದರಾಮಯ್ಯ ಅವರ ದೆಹಲಿ ಪ್ರವಾಸ ಹಾಗೂ ಹೈಕಮಾಂಡ್ ನಾಯಕರ ಭೇಟಿ ರಾಜ್ಯ ರಾಜಕೀಯದಲ್ಲಿ ತೀವ್ರ ಕುತೂಹಲ ಮೂಡಿಸಿದೆ.



