
ಪ್ರಗತಿವಾಹಿನಿ ಸುದ್ದಿ: ಬಳ್ಳಾರಿ ಚಲೋ ಪಾದಯಾತ್ರೆ ಮುಗಿದ ಬೆನ್ನಲ್ಲೇ ರಾಜ್ಯ ಸರ್ಕಾರದ ವಿರುದ್ಧ ವಿಪಕ್ಷ ಬಿಜೆಪಿ ಮತ್ತೊಂದು ಪಾದಯಾತ್ರೆಗೆ ಮುಂದಾಗಿದೆ. ಸೆಪ್ಟೆಂಬರ್ 15ರಿಂದ ಐದು ದಿನಗಳ ಕಾಲ ಪಾದಯಾತ್ರೆ ನಡೆಸುವುದಾಗಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಘೋಷಿಸಿದ್ದಾರೆ.
ಬೆಂಗಳೂರಿನಲ್ಲಿ ಮಾತನಾಡಿದ ಅವರು, ವಂದೇ ಮಾತರಂ ಗೀತೆಯ ಮೊದಲ ಎರಡು ಚರಣ ಮಾತ್ರ ಹಾಡಿದರೆ ಸಾಕು ಎಂದು ರಾಜ್ಯ ಸರ್ಕಾರ ಆದೇಶ ಹೊರಡಿಸಿದ್ದನ್ನು ಖಂಡಿಸಿ ಹಾಗೂ ಆದೇಶ ಹಿಂಪಡೆಯುವಂತೆ ಒತ್ತಾಯಿಸಿ ಬಿಜೆಪಿ ಐದು ದಿನಗಳ ಪಾದಯಾತ್ರೆ ಹಮ್ಮಿಕೊಂಡಿದೆ.
ಸೆಪ್ಟೆಂಬರ್ 15ರಿಂದ ಐದು ದಿನಗಳ ಕಾಲ 224 ವಿಧಾನಸಭಾ ಕ್ಷೇತ್ರಗಳಲ್ಲಿ ಬಿಜೆಪಿ ಪಾದಯಾತ್ರೆ ನಡೆಯಲಿದೆ. ಪ್ರತಿಯೊಂದು ಕ್ಷೇತ್ರದಲ್ಲೂ ಅರ್ಧ ಕಿ.ಮೀನಿಂದ ಒಂದು ಕಿ.ಮೀವರೆಗೆ ಪಾದಯಾತ್ರೆ ನಡೆಸಿ, ಬಳಿಕ ತಹಶೀಲ್ದಾರ್ ಹಾಗೂ ಜಿಲ್ಲಾಧಿಕಾರಿಗಳಿಗೆ ಅಧಿಕೃತವಾಗಿ ಮನವಿ ಪತ್ರ ಸಲ್ಲಿಸಲಾಗುತ್ತದೆ. ಈ ಮೂಲಕ ಸಚಿವ ಸಂಪುಟದ ಆದೇಶವನ್ನು ವಾಪಸ್ ಪಡೆಯುವಂತೆ ರಾಜ್ಯ ಸರ್ಕಾರದ ಮೇಲೆ ಬಿಜೆಪಿ ತೀವ್ರ ಒತ್ತಡ ಹೇರಲು ತೀರ್ಮಾನಿಸಲಾಗಿದೆ ಎಂದರು.




