
ಪ್ರಗತಿವಾಹಿನಿ ಸುದ್ದಿ: ವಾಯುಭಾರ ಕುಸಿತದಿಂದಾಗಿ ಕರಾವಳಿ, ಮಲೆನಾಡು ಹಾಗೂ ಒಳನಾಡು ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಈ ಹಿನ್ನೆಲೆಯಲ್ಲಿ ಹಲವು ಜಿಲ್ಲೆಗಳಲ್ಲಿ ಅಲರ್ಟ್ ಘೋಷಿಸಲಾಗಿದೆ.
ಸಮುದ್ರ ಮಟ್ಟದಲ್ಲಿ ಉಂಟಾಗಿರುವ ಸುಳಿಗಾಳಿ ಹಾಗೂ ಗಾಳಿಯ ವೇಗ ಹೆಚ್ಚಿರುವುದರಿಂದ ರಾಜ್ಯದ ವಿವಿಧ ಭಾಗಗಳಲ್ಲಿ ಇಂದಿನಿಂದ ಮಳೆಯ ಪ್ರಮಾಣ ಹೆಚ್ಚಾಗಲಿದೆ. ರಾಜಧಾನಿ ಬೆಂಗಳೂರು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಮುಂದಿನ 24 ರಿಂದ 48 ಗಂಟೆಗಳ ಕಾಲ ಮೋಡಕವಿದ ವಾತಾವರಣದೊಂದಿಗೆ ಸಾಧಾರಣದಿಂದ ಭಾರಿ ಮಳೆಯಾಗುವ ಸಾಧ್ಯತೆಯಿದೆ.
ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಬಿರುಗಾಳಿ ಸಹಿತ ಭಾರಿ ಮಳೆಯಾಗುವ ಮುನ್ಸೂಚನೆ ನೀಡಲಾಗಿದೆ. ಸಮುದ್ರದಲ್ಲಿ ಅಲೆಗಳ ಅಬ್ಬರ ಹೆಚ್ಚಿರಲಿದ್ದು, ಮೀನುಗಾರರು ಕಡಲಿಗೆ ಇಳಿಯದಂತೆ ಮುನ್ನೆಚ್ಚರಿಕೆ ನೀಡಲಾಗಿದೆ.
ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು ಮತ್ತು ಹಾಸನ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದ್ದು, ಎಲ್ಲೋ ಅಲರ್ಟ್ ಘೋಷಿಸಲಾಗಿದೆ.
ಮೈಸೂರು, ಮಂಡ್ಯ, ತುಮಕೂರು, ಚಾಮರಾಜನಗರ,ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ರಾಮನಗರ, ಕೋಲಾರ, ಚಿಕ್ಕಬಳ್ಳಾಪುರ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.
ಬೆಳಗಾವಿ, ಬಾಗಲಕೋಟೆ, ಧಾರವಾಡ, ಹಾವೇರಿ, ಗದಗ, ವಿಜಯಪುರ,ಕಲಬುರಗಿ, ಯಾದಗಿರಿ, ಬಳ್ಳಾರಿ ಜಿಲ್ಲೆಗಳಲ್ಲಿ ಗುಡುಗು, ಮಿಂಚು ಸಹಿತ ಸಾಧಾರಣ ಮಳೆಯಾಗುವ ಮುನ್ಸೂಚನೆಯಿದೆ. ಕೆಲವೆಡೆಗಳಲ್ಲಿ ಗಂಟೆಗೆ 30-40 ಕಿ.ಮೀ ವೇಗದಲ್ಲಿ ಗಾಳಿ ಬೀಸಲಿದೆ.




