
ಪ್ರಗತಿವಾಹಿನಿ ಸುದ್ದಿ: ಸ್ನೇಹಿತರೊಂದಿಗೆ ಪ್ರವಾಸಕ್ಕೆ ಬಂದಿದ್ದ ಯುವತಿ ಲಾಡ್ಜ್ ರೂಮಿನಲ್ಲಿಯೇ ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ನಡೆದಿದೆ.
ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕಿನ ವಳಲಹಳ್ಳಿ ಕೂಡಿಗೆಯಲ್ಲಿ ಈ ಘಟನೆ ನಡೆದಿದೆ. 23 ವರ್ಷದ ವರ್ಷ ಮೃತ ಯುವತಿ. ಬೆಂಗಳೂರಿನ ನಾಗಸಂದ್ರದ ನಿವಾಸಿ. ಪ್ರಿಯಕರ ರಘು ಹಾಗೂ ಸ್ನೇಹಿತರ ಜೊತೆ ಪ್ರವಾಸಕ್ಕೆಂದು ಬಂದಿದ್ದಳು.
ಮೂರು ದಿನಗಳ ಕಾಲ ಬೆಟ್ಟದ ಭೈರವೇಶ್ವರ, ಮಜಗಹಳ್ಳಿ ಫಾಲ್ಸ್ ಸೇರಿದಂತೆ ಹಲವೆಡೆ ಸುತ್ತಾಡಿದ್ದಾರೆ. ವಳಲಹಳ್ಳಿ ಕೂಡಿಗೆಯಲ್ಲಿರುವ ಲಾಡ್ಜ್ ನಲ್ಲಿ ರೂಮ್ ನಲ್ಲಿ ತಂಗಿದ್ದರು. ಲಾಡ್ಜ್ ರೂಮ್ ನಲ್ಲಿ ಸ್ನಾನಕ್ಕೆಂದು ಹೋಗಿದ್ದ ವರ್ಷ ಮೃತಪಟ್ಟಿದ್ದಾಳೆ.
ಕೂಡಲೇ ರಘು ಹಾಗೂ ಸ್ನೇಹಿತ ದರ್ಶನ್ ವರ್ಷಳನ್ನು ಸಕಲೇಶಪುರ ತಾಲೂಕು ಕ್ರಾಫರ್ಡ್ ಆಸ್ಪತ್ರೆಗೆ ದಾಖಲಿಸಿದ್ದರು. ಆದರೆ ಯುವತಿ ಮೃತಪಟ್ಟಿದ್ದಳೆಂದು ಆಸ್ಪತ್ರೆ ಸಿಬ್ಬಂದಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಯುವತಿಯ ಸಾವಿಗೆ ನಿಖರ ಕಾರಣ ತಿಳಿದುಬಂದಿಲ್ಲ. ಲಾಡ್ಜ್ ರೂಂ ನಲ್ಲಿ ಯುವತಿ ಮೃತಪಟ್ಟಿರುವುದು ಹಲವು ಅನುಮಾನಕ್ಕೆ ಕಾರಣವಾಗಿದೆ. ಸಕಲೇಶಪುರ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.




