ಅಧಿಕಾರಿಯಿಂದ ಪತ್ನಿ ಕೊಲೆ ಯತ್ನ: ಚಿಕಿತ್ಸೆ ಫಲಕಾರಿಯಾಗದೇ ಸಾವು

ಪ್ರಗತಿವಾಹಿನಿ ಸುದ್ದಿ; ಮೈಸೂರು: ಶಿಶು ಯೋಜನಾ ಅಧಿಕಾರಿಯಿಂದಲೇ ಪತ್ನಿ ಹತ್ಯೆಗೆ ಯತ್ನ ನಡೆಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾವು ಬದುಕಿನ ನಡುವೆ ಹೋರಾಟ ನಡೆಸಿದ್ದ ಪತ್ನಿ ಚಿಕಿತ್ಸೆ ಫಲಕಾರಿಯಾಗದೆ ಕೊನೆಗೂ ಮೃತಪಟ್ಟಿದ್ದಾರೆ.

ನಾಗವೇಣಿ ಅಲಿಯಾಸ್ ಮಣಿ (41) ಸಾವನ್ನಪ್ಪಿದ್ದು, ಪತಿ ವೆಂಕಟಪ್ಪ ಕಿರುಕುಳದಿಂದ ನಾಗವೇಣಿ ಸಾವನ್ನಪ್ಪಿದ್ದಾರೆ ಎಂದು ಪೊಷಕರು ಆರೋಪಿಸಿದ್ದಾರೆ.

ವೆಂಕಟಪ್ಪ ಟಿ.ನರಸೀಪುರ ತಾಲೂಕಿನಲ್ಲಿ ಸಹಾಯಕ ಶಿಶುಯೋಜನಾ ಅಧಿಕಾರಿಯಾಗಿ ಕೆಲಸ ಮಾಡುತ್ತಿದ್ದನು. ಪತ್ನಿಗೆ ಹಿಂಸೆ ನೀಡಿ, ನೇಣು ಬಿಗಿದು ಕೊಲೆ ಮಾಡಲು ಯತ್ನಿಸಿದ್ದ ಎಂದು ನಾಗವೇಣಿ ಪೋಷಕರು ಪೊಲೀಸರಿಗೆ ದೂರು ನೀಡಿದ್ದಾರೆ.

ವೆಂಕಟಪ್ಪಗೆ 1997ರಲ್ಲಿ ನಾಗವೇಣಿಯನ್ನು ಮದುವೆ ಮಾಡಿಕೊಡಲಾಗಿತ್ತು. ಮೈಸೂರು ತಾಲೂಕಿನ ಸೋಮನಾಥಪುರ ಗ್ರಾಮದಲ್ಲಿ ಈ ದಂಪತಿ ವಾಸವಿದ್ದರು. ಇತ್ತೀಚಿಗೆ ವೆಂಕಟಪ್ಪ ಪತ್ನಿಗೆ ಮಾನಸಿಕ ಹಾಗೂ ದೈಹಿಕವಾಗಿ ಕಿರುಕುಳ ನೀಡುತ್ತಿದ್ದ. ಆದರೆ ಮಾರ್ಚ್ 3ರಂದು ನಾಗವೇಣಿ ಮನೆಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಳು. ತಕ್ಷಣ ನಾಗವೇಣಿಯನ್ನು ಕುಟುಂಬಸ್ಥರು ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದರು.

ಅಂದಿನಿಂದ ನಾಗವೇಣಿ ಕೋಮಾ ಸ್ಥಿತಿಗೆ ತಲುಪಿದ್ದಳು. ಸಾವು ಬದುಕಿನ ನಡುವೆ ಹೋರಾಟ ನಡೆಸಿದ್ದ ನಾಗವೇಣಿ ಇಂದು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಜಯಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button