Latest
ಸರ್ಕಾರ ರಚನೆಯಲ್ಲಿ ಪ್ರಮುಖ ಪಾತ್ರ ವಹಿಸಿದವರ ಋಣ ತೀರಿಸಬೇಕಿದೆ: ಸಚಿವ ಈಶ್ವರಪ್ಪ

ಪ್ರಗತಿವಾಹಿನಿ ಸುದ್ದಿ; ಶಿವಮೊಗ್ಗ: ಕಾಂಗ್ರೆಸ್–ಜೆಡಿಎಸ್ ತೊರೆದು ಬಿಜೆಪಿಗೆ ಬಂದು ಸರ್ಕಾರ ರಚನೆಯಲ್ಲಿ ಹಲವರು ಪ್ರಮಖ ಪಾತ್ರ ವಹಿಸಿದ್ದಾರೆ. ಅವರ ಋಣವನ್ನು ನಾವು ತೀರಿಸಬೇಕಿದೆ. ಕರೆದು ಮೋಸ ಮಾಡಲು ಆಗದು ಎಂದು ಗ್ರಾಮೀಣಾಭಿವೃದ್ಧಿ ಸಚಿವ ಕೆ ಎಸ್ ಈಶ್ವರಪ್ಪ ತಿಳಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ವಿಧಾನಪರಿಷತ್ ಚುನಾವಣೆಗೆ ಅಭ್ಯರ್ಥಿಗಳ ಆಯ್ಕೆ ವಿಚಾರವಾಗಿ ಹಲವು ವರ್ಷದಿಂದ ಪಕ್ಷ ಕಟ್ಟಲು ದುಡಿದ ಸಾಮಾನ್ಯ ಕಾರ್ಯಕರ್ತರು ಇದ್ದಾರೆ. ಪ್ರಸ್ತುತ 9 ಸ್ಥಾನಗಳಿದ್ದು, ಅವರಿಗೂ ಅವಕಾಶ ಕಲ್ಪಿಸಬೇಕಿದೆ ಎಂದರು.
ಹಳಬರು, ಹೊಸಬರು ಎಂಬ ವಿಚಾರವೇ ಇಲ್ಲ. ಸರ್ಕಾರ ಉಳಿಸಿದವರಿಗೂ, ಸಾಮಾನ್ಯ ಕಾರ್ಯಕರ್ತರಿಗೂ ತೃಪ್ತಿ ತರುವ ರೀತಿ ಆಯ್ಕೆ ಪ್ರಕ್ರಿಯೆ ನಡೆಯಲಿದೆ ಎಂದು ಹೇಳಿದರು.
ಇನ್ನು ಸೋಮವಾರ ಬಿಜೆಪಿ ಕೋರ್ ಕಮಿಟಿ ಸಭೆ ನಡೆಯಲಿದ್ದು, ಸಭೆಯಲ್ಲಿ ಅಭ್ಯರ್ಥಿಗಳ ಆಯ್ಕೆ ನಡೆಯಲಿದೆ ಎಂದು ತಿಳಿಸಿದ್ದಾರೆ.




