Latest

ವಿದ್ಯಾರ್ಥಿಗಳು ಮತ್ತು ಪೋಷಕರಿಗೆ ಶಿಕ್ಷಣ ಸಚಿವರಿಂದ ಆತ್ಮಸ್ಥೈರ್ಯ

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಎಸ್ಎಸ್ಎಲ್​​ಸಿ ಪರೀಕ್ಷೆ ಫಲಿತಾಂಶ ಇಂದು ಮಧ್ಯಾಹ್ನ ಪ್ರಕಟವಾಗಲಿದ್ದು, ವಿದ್ಯಾರ್ಥಿಗಳು ಮತ್ತು ಪೋಷಕರಿಗೆ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಸುರೇಶ್ ಕುಮಾರ್ ಆತ್ಮಸ್ಥೈರ್ಯ ತುಂಬಿದ್ದಾರೆ.

ವಿದ್ಯಾರ್ಥಿಗಳ ಪೋಷಕರಿಗೆ ತಮ್ಮ ಫೇಸ್​​ಬುಕ್​​​ ಖಾತೆ ಮೂಲಕ ಆತ್ಮಸ್ಥೈರ್ಯ ತುಂಬಿರುವ ಸಚಿವ ಸುರೇಶ್​​ ಕುಮಾರ್​​, ಇಂದು ದಿನಾಂಕ 10-08-2020 ಮಧ್ಯಾಹ್ನ 3.30ರ ಹೊತ್ತಿಗೆ ಎಸ್​ಎಸ್​ಎಲ್​​ಸಿ ವಿದ್ಯಾರ್ಥಿಗಳ ಫಲಿತಾಂಶ ಪ್ರಕಟವಾಗುತ್ತದೆ. ತಮ್ಮ ಮೊಬೈಲಿಗೆ ಫಲಿತಾಂಶ ಬರುವುದರಿಂದ ಕೊರೋನಾ ವಾತಾವರಣದಲ್ಲಿ ವಿದ್ಯಾರ್ಥಿಗಳು ಪರೀಕ್ಷೆ ಬರೆದಿರುವುದೇ ದೊಡ್ಡ ಸಾಧನೆ ಎಂಬುದು ತಮಗೆ ತಿಳಿದಿರಲಿ ಎಂದಿದ್ದಾರೆ.

ತಮ್ಮ ಮಕ್ಕಳ ಫಲಿತಾಂಶ ಎಷ್ಟೇ ಆಗಿರಲಿ, ಅವರಿಗೆ ಹೇಳುವಾಗ ನಿಧಾನವಾಗಿ ಪ್ರೀತಿಯಿಂದ ತಿಳಿಸಿ. ಗಳಿಸಿದ ಅಂಕಗಳಿಗೆ ತೃಪ್ತಿ ಪಡುವಂತೆ ಮನವೊಲಿಸಿ ಅವರಲ್ಲಿ ಆತ್ಮವಿಶ್ವಾಸವನ್ನು ತುಂಬಿ ಎಂದು ಪೋಷಕರಲ್ಲಿ ಮನವಿ ಮಾಡಿದ್ದಾರೆ. ಅಲ್ಲದೇ ಫಲಿತಾಂಶ ಬಂದ ಬಳಿಕ ವಿದ್ಯಾರ್ಥಿಗಳನ್ನು ಬೇರೆಯವರೊಂದಿಗೆ ಹೋಲಿಕೆ ಮಾಡಬೇಡಿ. ಒಂದು ವೇಳೆ ಅವರ ನಿರೀಕ್ಷೆಗಿಂತ ಕಡಿಮೆ ಅಂಕ ಬಂದಲ್ಲಿ ಮರು ಮೌಲ್ಯಮಾಪನ ಮತ್ತು ಮರು ಎಣಿಕೆಗೆ ಅವಕಾಶವಿರುತ್ತದೆ ಎಂದು ತಿಳಿಸಿದ್ದಾರೆ.

ಮಗು ಮನೆಯ ಬೆಳಕು ಆ ಬೆಳಕು ಸದಾ ಪ್ರಜ್ವಲಿಸಲಿ ಎಂಬುದೇ ನಮ್ಮೆಲ್ಲರ ಆಶಯ ಎಂದು ಸಚಿವರು ತಿಳಿಸಿದ್ದಾರೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button