ಕೊರೊನಾ ನೆಪ ಹೇಳಿಕೊಂಡು ಜವಾಬ್ದಾರಿಯಿಂದ ನುಣುಚಿಕೊಳ್ಳದಿರಿ

ಪ್ರಗತಿವಾಹಿನಿ ಸುದ್ದಿ, ಬಳ್ಳಾರಿ : ಅಧಿಕಾರಿಗಳು ಪ್ರತಿನಿತ್ಯ ನಿರ್ವಹಿಸಲಾಗುವ ಜವಾಬ್ದಾರಿಗಳನ್ನು ಸಮರ್ಪಕವಾಗಿ ನಿಭಾಯಿಸಬೇಕು. ಕೊರೊನಾ ನೆಪವನ್ನೇಳಿಕೊಂಡು ಜವಾಬ್ದಾರಿಯಿಂದ ನುಣುಚಿಕೊಳ್ಳದಂತೆ ಸೂಚನೆ ನೀಡಲಾಗಿದೆ ಎಂದು ಅರಣ್ಯ, ಪರಿಸರ, ಜೀವಿಶಾಸ್ತ್ರ ಹಾಗೂ ಬಳ್ಳಾರಿ ಜಿಲ್ಲಾ ಉಸ್ತುವಾರಿ ಸಚಿವರಾದ ಬಿ.ಎಸ್.ಆನಂದಸಿಂಗ್ ಅವರು ಹೇಳಿದರು.
ನಗರದ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಸುದ್ದಿಗಾರರೊಂದಿಗೆ ಸೋಮವಾರ ಮಾತನಾಡಿದ ಅವರು, ಇಂದು ಅಧಿಕಾರಿಗಳ ಸಭೆ ನಡೆಸಿ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಲಾಗಿದೆ. ಈ ರೀತಿಯ ದೂರುಗಳು ಬರದಂತೆ ನೋಡಿಕೊಳ್ಳಲು ತಿಳಿಸಲಾಗಿದೆ ಎಂದರು.
ಜಿಲ್ಲೆಯಲ್ಲಿ ಕೋವಿಡ್ ನಿಯಂತ್ರಣದಲ್ಲಿದ್ದು, ಸದ್ಯ ೪೨೦೦ಪ್ರಕರಣಗಳು ಮಾತ್ರ ಸಕ್ರಿಯವಾಗಿವೆ ಎಂದು ಹೇಳಿದ ಸಚಿವ ಸಿಂಗ್ ಅವರು ಬಳ್ಳಾರಿಯಲ್ಲಿ ವಿಮಾನ ನಿಲ್ದಾಣ ನಿರ್ಮಾಣಕ್ಕೆ ಸಂಬಂಧಿಸಿದ ಪ್ರಶ್ನೆಯೊಂದಕ್ಕೆ ಉತ್ತರಿಸಿ, ಸರಕಾರ ಬಳ್ಳಾರಿಯಲ್ಲಿ ವಿಮಾನ ನಿಲ್ದಾಣ ನಿರ್ಮಾಣಕ್ಕೆ ಬದ್ಧವಾಗಿದೆ. ಯಾವ ಅನುದಾನ ಬಳಸಿಕೊಳ್ಳಬೇಕು ಎಂಬುದನ್ನು ಇನ್ನೊಂದು ವಾರದಲ್ಲಿ ನಡೆಸಲಾಗುವ ಡಿಎಂಎಫ್ ಸಭೆಯಲ್ಲಿ ಚರ್ಚಿಸಲಾಗುವುದು ಎಂದರು.
ಜಿಂದಾಲ್ ನಿಂದ ನೌಕರರನ್ನು ಕೆಲಸದಿಂದ ತೆಗೆಯಲಾಗುತ್ತಿದೆ ಎಂಬ ವಿಚಾರ ನಮ್ಮ ಗಮನಕ್ಕೆ ಬಂದಿದ್ದು, ಜಿಂದಾಲ್ ಅಧಿಕಾರಿಗಳನ್ನು ಕರೆದು ಚರ್ಚಿಸಿ ಕ್ರಮಕೈಗೊಳ್ಳಲಾಗುವುದು ಎಂದರು.
ಕಂಪ್ಲಿ ಸಕ್ಕರೆ ಕಾರಖಾನೆಯ ಜಾಗ ಮಾರಾಟ ಮಾಡುವ ಪ್ರಶ್ನೆಯೇ ಉದ್ಭವಿಸುವುದಿಲ್ಲ. ಸ್ಥಳೀಯ ಶಾಸಕ ಗಣೇಶ ಅವರ ಆರೋಪ ಸುಳ್ಳು ಎಂದರು.
ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಎಸ್.ಎಸ್.ನಕುಲ್, ಅಪರ ಜಿಲ್ಲಾಧಿಕಾರಿ ಪಿ.ಎಸ್.ಮಂಜುನಾಥ ಮತ್ತಿತರರು ಇದ್ದರು.




