Latest

ಇವರ ಸ್ವಾಭಿಮಾನದ ಪ್ರಲಾಪ ಮಠದೊಳಗಿನ ಬೆಕ್ಕಿನ ಮುಖವಾಡ

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಜೆಡಿಎಸ್ ಅವಕಾಶವಾದಿ ಪಕ್ಷ ಎಂದು ಹೇಳಿಕೆ ನೀಡಿದ್ದ ವಿಪಕ್ಷ ನಾಯಕ ಸಿದ್ದರಾಮಯ್ಯ ವಿರುದ್ಧ ಕಿಡಿ ಕಾರಿರುವ ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ, ಸಿದ್ದರಾಮಯ್ಯ ಅವರ ಸ್ವಾಭಿಮಾನದ ಪ್ರಲಾಪ ಮಠದೊಳಗಿನ ಬೆಕ್ಕಿನ ಮುಖವಾಡದಂತಿದೆ ಎಂದು ತಿರುಗೇಟು ನೀಡಿದ್ದಾರೆ.

ಸಿದ್ದರಾಮಯ್ಯ ವಿರುದ್ಧ ಸರಣಿ ಟ್ವೀಟ್ ಮೂಲಕ ಗುಡುಗಿರುವ ಕುಮಾರಸ್ವಾಮಿ, ಅಧಿಕಾರದ ಲಾಲಸೆಯಿಂದ ಕಾಂಗ್ರೆಸ್ ಗೆ ಜಿಗಿದ ಸಿದ್ದರಾಮಯ್ಯ ಅವರು ‘ಜೆಡಿಎಸ್ ಅವಕಾಶವಾದಿ ಪಕ್ಷ’ ಎನ್ನುವ ಮೂಲಕ ತಮ್ಮ ಊಸರವಳ್ಳಿ ರಾಜಕಾರಣದ ನಿಜಬಣ್ಣ ಬಯಲು ಮಾಡಿಕೊಂಡಿದ್ದಾರೆ ಎಂದಿದ್ದಾರೆ.

ಪಕ್ಷಾಂತರ ಮಾಡಿ ಅಧಿಕಾರ ಹಿಡಿದ ನೀವು ಆ ಪಕ್ಷದಲ್ಲಿ ಬಿತ್ತಿದ ಬೆಳೆ ಮತ್ತು ಕಳೆ ಏನೆಂಬುದನ್ನು ನಿಮ್ಮನ್ನು ಆಲಿಂಗಿಸಿಕೊಂಡ ಪಕ್ಷದವರು ಈಗ ಅನುಭವಿಸುತ್ತಿದ್ದಾರೆ. ನಿಮ್ಮ ಸ್ವಾರ್ಥ ರಾಜಕಾರಣದ ಕುಟಿಲ ತಂತ್ರಗಳನ್ನು ಮರೆಮಾಚಿಕೊಳ್ಳಲು ಬೆಳೆದ ಪಕ್ಷಕ್ಕೆ ಮಗ್ಗುಲಲ್ಲಿ ಇದ್ದು ಚಾಕು ಹಾಕಿದವರ ಮಾರ್ಜಾಲ ಉಪದೇಶ ಯಾರಿಗೆ ಸಹ್ಯವಾದೀತು?

ಜೆಡಿಎಸ್ ಪಕ್ಷದಲ್ಲಿದ್ದಾಗ ಅಧಿಕಾರ, ಸ್ಥಾನ-ಮಾನಗಳನ್ನು ಅನುಭವಿಸಿ ತಮ್ಮ ಬೆಂಬಲಿಗರೊಂದಿಗೆ ಗಂಟು ಮೂಟೆ ಕಟ್ಟಿಕೊಂಡು ಅಧಿಕಾರದ ಆಸೆಗಾಗಿ, ಅವಕಾಶವಾದಿ ಹಾದಿ ಹಿಡಿದ ಕೃತಘ್ನಗೇಡಿತನದ ಸಿದ್ದರಾಮಯ್ಯ ಅವರಿಂದ ನಮ್ಮ ಪಕ್ಷ ಸ್ವಾಭಿಮಾನದ ಪಾಠ ಕಲಿಯಬೇಕಿಲ್ಲ. ನಿಮ್ಮ ಸ್ವಾಭಿಮಾನದ ಪ್ರಲಾಪ ಮಠದೊಳಗಿನ‌ ಬೆಕ್ಕಿನ ಮುಖವಾಡದಂತಿದೆ ಎಂದು ವ್ಯಂಗ್ಯವಾಡಿದ್ದಾರೆ.

ಸ್ವಾಭಿಮಾನಕ್ಕೆ ಕಟ್ಟುಬಿದ್ದು ದೇವೇಗೌಡರು ಪ್ರಧಾನಿ ಹುದ್ದೆಯನ್ನೇ ತ್ಯಜಿಸಿ ಬಂದರು. ಅಧಿಕಾರ ಉಳಿಸಿಕೊಳ್ಳಬೇಕೆಂದಿದ್ದರೆ ಪ್ರಧಾನಿಯಾಗಿ ಮುಂದುವರಿಯಬಹುದಿತ್ತು. ದೇವೇಗೌಡರ ಈ ಸ್ವಾಭಿಮಾನಿ ರಾಜಕಾರಣವನ್ನು ಇಷ್ಟು ಬೇಗ ಮರೆತು ಬಿಟ್ಟಿರಾ? ಆತ್ಮವಂಚನೆಯ ರಾಜಕಾರಣಿಯಿಂದ ಜೆಡಿಎಸ್ ಪಾಠಕಲಿಯಬೇಕಿಲ್ಲ ಎಂದು ಹೇಳಿದ್ದಾರೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button