Kannada NewsLatest

ಬೆಳಗಾವಿಯಲ್ಲಿ ಕ್ಷಯರೋಗ ಪತ್ತೆ ಚಿಕಿತ್ಸಾ ಆಂದೋಲನ

ಪ್ರಗತಿವಾಹಿನಿ ಸುದ್ದಿ; ಬೆಳಗಾವಿ: ಸಕ್ರಿಯ ಕ್ಷಯರೋಗ ಪತ್ತೆ ಆಂದೋಲನವು ಜಿಲ್ಲೆಯಲ್ಲಿ ಡಿಸೆಂಬರ್ 1 ರಿಂದ 31 ರವರಗೆ ನಡೆಯಲಿದೆ ಎಂದು ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ ತಿಳಿಸಿದರು.

ಜಿಲ್ಲಾಧಿಕಾರಿ ಕಚೇರಿಯ ಸಭಾಂಗಣದಲ್ಲಿ ಗುರುವಾರ(ನ.26) ನಡೆದ ಸಕ್ರಿಯ ಕ್ಷಯರೋಗ ಪತ್ತೆ ಮತ್ತು ಚಿಕಿತ್ಸಾ ಆಂದೋಲನ ಕುರಿತ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಜಿಲ್ಲೆಯಲ್ಲಿ ಡಿ.1 ರಿಂದ ಮೂರು ಹಂತಗಳಲ್ಲಿ ಕ್ಷಯರೋಗ ಪತ್ತೆ ಆಂದೋಲನ ನಡೆಸಲಾಗುವುದು. ಡಿ.1 ರಿಂದ 10 ರವರೆಗೆ ಅಥಣಿ, ಹುಕ್ಕೇರಿ, ಗೋಕಾಕ, ಬೈಲಹೊಂಗಲ ತಾಲ್ಲೂಕು ಮತ್ತು ಬೆಳಗಾವಿ ನಗರ ಪ್ರದೇಶದಲ್ಲಿ ಆಂದೋಲನ ನಡೆಯಲಿದೆ. ಡಿ.11ರಿಂದ 20 ರವರೆಗೆ ಕಾಗವಾಡ, ಚಿಕ್ಕೋಡಿ, ಮೂಡಲಗಿ, ರಾಯಬಾಗ, ರಾಮದುರ್ಗ ತಾಲ್ಲೂಕುಗಳು ಮತ್ತು ಬೆಳಗಾವಿ ಗ್ರಾಮೀಣ ಪ್ರದೇಶದಲ್ಲಿ ನಡೆಯಲಿದೆ.

ಅದೇ ರೀತಿ ಮೂರನೇ ಹಂತದಲ್ಲಿ ಡಿ.21 ರಿಂದ 31 ರವರೆಗೆ ನಿಪ್ಪಾಣಿ, ಕಿತ್ತೂರು, ಖಾನಾಪುರ ಮತ್ತು ಸವದತ್ತಿ ತಾಲ್ಲೂಕಿನಲ್ಲಿ ಸಕ್ರೀಯ ಕ್ಷಯರೋಗ ಪತ್ತೆ ಆಂದೋಲನ ನಡೆಸಲಾಗುವುದು ಎಂದು ವಿವರಿಸಿದರು.

ಕ್ಷಯರೋಗ ಪತ್ತೆ ಆಂದೋಲನದಲ್ಲಿ ಖಾಸಗಿ ಆಸ್ಪತ್ರೆಯವರು ಸರ್ಕಾರದ ಜತೆ ಕೈಜೋಡಿಸುವ ಮೂಲಕ ಆಂದೋಲನದ ಯಶಸ್ಸಿಗೆ ಸಹಕರಿಸಬೇಕು ಎಂದು ಜಿಲ್ಲಾಧಿಕಾರಿ ಹಿರೇಮಠ ಸೂಚನೆ ನೀಡಿದರು.

ಸಕಾಲದಲ್ಲಿ ಸೂಕ್ತ ಚಿಕಿತ್ಸೆ ನೀಡಿದರೆ ಕ್ಷಯರೋಗದಿಂದ ಗುಣಮುಖರಾಗುವುದು ಸಾಧ್ಯವಿದೆ. ಆದ್ದರಿಂದ ನಿಗದಿತ ಚಿಕಿತ್ಸೆಯನ್ನು ಸಂಪೂರ್ಣವಾಗಿ ಪಡೆದುಕೊಳ್ಳಬೇಕು ಎಂದು ತಿಳಿಸಿದರು.

ಎರಡು ವಾರಕ್ಕೂ ಮೇಲ್ಪಟ್ಟು ಕೆಮ್ಮು, ಸಂಜೆ ಜ್ವರ, ಕಫದಲ್ಲಿ ರಕ್ತ ಬೀಳುವುದು, ತೂಕ ಕಡಿಮೆಯಾಗುವ ಲಕ್ಷಣಗಳು ಕಂಡುಬಂದರೆ ಸಾರ್ವಜನಿಕರು ಕ್ಷಯರೋಗ ತಪಾಸಣೆ ಮಾಡಿಸಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಹಿರೇಮಠ ಮನವಿ ಮಾಡಿಕೊಂಡರು.

ಜಿಲ್ಲೆಯ 53.55 ಲಕ್ಷ ಜನಸಂಖ್ಯೆಯ ಶೇ.20 ರಷ್ಟು ಅಂದರೆ 11.13 ಲಕ್ಷ ಜನಸಂಖ್ಯೆ ಗುರುತಿಸಿ ಮನೆ ಮನೆಗೆ ಭೇಟಿ ನೀಡಿ ಕ್ಷಯರೋಗ ತಪಾಸಣೆ ಮಾಡುವ ಗುರಿ ಹೊಂದಲಾಗಿದೆ ಎಂದು ಜಿಲ್ಲಾ ಕ್ಷಯರೋಗ ನಿಂತ್ರಣಾಧಿಕಾರಿ ಅನಿಲ್ ಕೊರಬು ವಿವರಿಸಿದರು.

ಜಿಲ್ಲೆಯಾದ್ಯಂತ 3925 ನುರಿತ ಆರೋಗ್ಯ ಸಹಾಯಕರು, ಆಶಾ ಮತ್ತು ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸ್ವಯಂಸೇವಕರ ತಂಡಗಳನ್ನು ರಚಿಸ, ಆ ತಂಡಗಳ ಮೂಲಕ ಮನೆ ಮನೆಗೆ ಭೇಟಿ ನೀಡಿ ತಪಾಸಣೆ ನಡೆಸಲಾಗುವುದು ಎಂದು ತಿಳಿಸಿದರು.

ಕೋವಿಡ್-19 ಸಂದರ್ಭದಲ್ಲಿ ಸೋಂಕಿತರಾಗಿ ಮತ್ತೆ ಗುಣಮುಖರಾಗಿರುವಂತಹ ಜನರನ್ನು ಕ್ಷಯರೋಗ ಪತ್ತೆಗೆ ಸಂಬಂಧಿಸಿದಂತೆ ಪರೀಕ್ಷೆಗೆ ಒಳಪಡಿಸಲಾಗುವುದು ಎಂದರು.

ಇದೇ ಸಂದರ್ಭದಲ್ಲಿ ಮಕ್ಕಳ ಮಾರಾಟ ತಡೆಗಟ್ಟುವುದು ಹಾಗೂ ದತ್ತುಮಕ್ಕಳ ಸ್ವೀಕಾರಕ್ಕೆ ಸಂಬಂಧಿಸಿದಂತೆ ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ ಅವರು ಸೇರಿದಂತೆ ಎಲ್ಲ ಅಧಿಕಾರಿಗಳು ಪ್ರತಿಜ್ಞಾವಿಧಿ ಸ್ವೀಕರಿಸಿದರು. ಕ್ಷಯರೋಗಕ್ಕೆ ಸಂಬಂಧಿಸಿದಂತೆ ಜಾಗೃತಿ ಮೂಡಿಸುವ ಭಿತ್ತಿಪತ್ರಗಳನ್ನು ಬಿಡುಗಡೆ ಮಾಡಲಾಯಿತು.

ಮಹಾನಗರ ಪಾಲಿಕೆಯ ಆಯುಕ್ತರಾದ ಜಗದೀಶ್ ಕೆ.ಎಚ್., ಅಪರಾಧ ಮತ್ತು ಸಂಚಾರ ವಿಭಾಗದ ಉಪ ಪೊಲೀಸ್ ಆಯುಕ್ತರಾದ ಚಂದ್ರಶೇಖರ್ ನೀಲಗಾರ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಎಸ್.ವಿ.ಮುನ್ಯಾಳ, ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ.ಬಸವರಾಜ ತುಕ್ಕಾರ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಉಪ ನಿರ್ದೇಶಕ ಗುರುನಾಥ ಕಡಬೂರ, ಕಾರ್ಮಿಕ ಅಧಿಕಾರಿ ತರನ್ನುಂ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಸಭೆಯಲ್ಲಿ ಉಪಸ್ಥಿತರಿದ್ದರು.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button