Kannada NewsLatest

ನೀರು ಸರಬರಾಜು, ನಗರೋತ್ಥಾನ ಕಾಮಗಾರಿ ಜನವರಿ 15 ರೊಳಗೆ ಪೂರ್ಣಗೊಳಿಸಿ: ಸಚಿವೆ ಶಶಿಕಲಾ ಜೊಲ್ಲೆ

ಪ್ರಗತಿವಾಹಿನಿ ಸುದ್ದಿ; ಬೆಳಗಾವಿ; ನಿಪ್ಪಾಣಿ ನಗರಸಭೆ ವ್ಯಾಪ್ತಿಯಲ್ಲಿನ ನೀರು ಸರಬರಾಜು ಮತ್ತು ನಗರೋತ್ಥಾನ ಕಾಮಗಾರಿಗಳನ್ನು ಜನವರಿ 15 ರ ಒಳಗಾಗಿ ಪೂರ್ಣಗೊಳಿಸಬೇಕು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಹಾಗೂ ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ಸಚಿವೆ ಶಶಿಕಲಾಜೊಲ್ಲೆ ಅವರು ಸೂಚನೆ ನೀಡಿದ್ದಾರೆ.

ಜಿಲ್ಲಾಧಿಕಾರಿ ಕಚೇರಿಯ ಸಭಾಂಗಣದಲ್ಲಿ ಶುಕ್ರವಾರ (ಡಿ.4) ನಡೆದ ನಿಪ್ಪಾಣಿ ನಗರಸಭೆ ನೀರು ಸರಬರಾಜು ಮತ್ತು ನಗರೋತ್ಥಾನ ಕುರಿತು ನಡೆದ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ನಿಪ್ಪಾಣಿ ನಗರಸಭೆಯ ವ್ಯಾಪ್ತಿಯಲ್ಲಿ ಕುಡಿಯುವ ನೀರಿನ ಸಮಸ್ಯೆ ನಿವಾರಣೆಯಾಗಬೇಕು ಎಂದು ಸಂಬಂಧಿಸಿದ ಅಧಿಕಾರಿಗಳಿಗೆ ತಿಳಿಸಿದರು.

ಸಾರ್ವಜನಿಕ ದೂರುಗಳು ಹೆಚ್ಚಾಗಿವೆ. ಆದ್ದರಿಂದ ನಗರದಲ್ಲಿ ಬಾಕಿ ಇರುವ ನೀರು ಸರಬರಾಜು ಕಾಮಗಾರಿ ಹಾಗೂ ನಗರೊತ್ಥಾನ ಕಾಮಗಾರಿಗಳನ್ನು ಶೀಘ್ರದಲ್ಲಿಯೇ ಕೈಗೆತ್ತಿಕೊಂಡು ಪೂರ್ಣಗೊಳಿಸಬೇಕು. ಎಲ್ಲ ಕಾಮಗಾರಿಗಳು ಈಗ ಕೊನೆಯ ಹಂತಕ್ಕೆ ಬಂದಿವೆ. ಬಾಕಿ ಇರುವ ಕಾಮಗಾರಿಗೆ ಸಮಯ ನಿಗದಿ ಮಾಡಬೇಕು. ಜನವರಿ 15 ರ ಒಳಗಾಗಿ ನಿಪ್ಪಾಣಿ ನಗರಸಭೆ ವ್ಯಾಪ್ತಿಯಲ್ಲಿ ಬರುವ ನೀರು ಸರಬರಾಜು ಹಾಗೂ ನಗರೊತ್ಥಾನ ಕಾಮಗಾರಿ ಪೂರ್ಣಗೊಳ್ಳಬೇಕು ಎಂದು ಸಚಿವೆ ತಿಳಿಸಿದರು.

ಇದೇ ಸಂದರ್ಭದಲ್ಲಿ ಮಾತನಾಡಿದ ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ ಅವರು, ಜನರಿಗೆ ನೀರಿನ ತೊಂದರೆ ಆಗದಂತೆ ನೋಡಿಕೊಳ್ಳಿ. ಹೆಚ್ಚಿನ ಸಂಖ್ಯೆಯಲ್ಲಿ ಸ್ಥಳೀಯ ಕಾರ್ಮಿಕರನ್ನು ತೆಗೆದುಕೊಂಡು ಕಾಮಗಾರಿಗಳನ್ನು ಪೂರ್ಣಗೊಳಿಸಬೇಕು ಎಂದು ಅಧಿಕಾರಿಗಳಿಗೆ ತಿಳಿಸಿದರು.

ನಿಪ್ಪಾಣಿ ನಗರಸಭೆಯ ವ್ಯಾಪ್ತಿಯಲ್ಲಿ ನಗರೊತ್ಹಾನ ಹಂತ-3 ರ ಯೋಜನೆಯಡಿ ಕೈಗೊಂಡಿರುವ ಕಾಮಗಾರಿಯ ವಿಳಂಬವಾಗಿದ್ದು, ಸ್ಥಗಿತಗೊಂಡ ಕಾಮಗಾರಿಗಳನ್ನು ಪೂರ್ಣಗೊಳಿಬೇಕು ಎಂದು ಚಿಕ್ಕೋಡಿ ಸಂಸದರಾದ ಅಣ್ಣಾಸಾಹೇಬ ಎಸ್. ಜೊಲ್ಲೆ ಅವರು ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು.

ನಿಪ್ಪಾಣಿ ನಗರಸಭೆ ಅಧ್ಯಕ್ಷರಾದ ಜಯವಂತ ಬಾಟ್ಲೆ, ಉಪಾಧ್ಯಕ್ಷೆ ನೀತಾ ಬಾಗಡೆ, ಹಾಗೂ ಪೌರಾಯುಕ್ತರಾದ ಮಹಾವೀರ ಬೋರನ್ನವರ ಮತ್ತು ಸಂಬಂದಪಟ್ಟ ಇಲಾಖೆಯ ಅಧಿಕಾರಿಗಳು, ಇಂಜಿನಿಯರಗಳು ಸಭೆಯಲ್ಲಿ ಉಪಸ್ಥಿತರಿದ್ದರು.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button