Kannada NewsLatest

ಬಿಜೆಪಿಯಿಂದ ನೆರೆ ಸಂತ್ರಸ್ತರ ಕಣ್ಣೀರು ಒರೆಸುವ ಕೆಲಸ‌ ನಡೆದಿಲ್ಲ: ಸಿದ್ಧರಾಮಯ್ಯ ಆರೋಪ

ಪ್ರಗತಿವಾಹಿನಿ ಸುದ್ದಿ; ಖಾನಾಪುರ: ಬಿಜೆಪಿ ಸರ್ಕಾರದಿಂದ ಉತ್ತರ ಕರ್ನಾಟಕದ ನೆರೆ ಸಂತ್ರಸ್ತರ ಕಣ್ಣೀರು ಒರೆಸುವ ಕೆಲಸ‌ ಸಮರ್ಪಕವಾಗಿ ನಡೆದಿಲ್ಲ ಎಂದು ವಿರೋಧ ಪಕ್ಷದ ನಾಯಕ ಸಿದ್ಧರಾಮಯ್ಯ ಆರೋಪಿಸಿದರು.
ಮಂಗಳವಾರ ಪಟ್ಟಣದ ನೆರೆ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಿದ ಬಳಿಕ ಸುದ್ದಿಗಾರರ ಜೊತೆ ಮಾತನಾಡಿದ ಅವರು, 2019ರ ನೆರೆ ಸಂದರ್ಭದಲ್ಲಿ ಸಿಎಂ ಯಡಿಯೂರಪ್ಪ ಅತಿವೃಷ್ಟಿಯಿಂದ ಹಾಳಾದ ಮನೆ ಮಾಲೀಕರಿಗೆ ಐದು ಲಕ್ಷ ಕೊಡ್ತೀನಿ‌ ಅಂತ ಭರವಸೆ ನೀಡಿದ್ದರು ಆದರೆ ಆ ಹಣವನ್ನ ಇನ್ನೂ ಸರಿಯಾಗಿ ಬಿಡುಗಡೆ ಮಾಡಿಲ್ಲ ಎಂದು ದೂರಿದರು.
ರಾಜ್ಯದ ಬಿಜೆಪಿ ಸರ್ಕಾರದಿಂದ ಕಾಂಗ್ರೆಸ್ ಶಾಸಕರಿದ್ರೇ ಒಂದು ಪರಿಹಾರ, ಬಿಜೆಪಿ ಶಾಸಕರಿದ್ರೇ ಬೇರೊಂದು ಪರಿಹಾರ ನೀಡಿ ತಾರತಮ್ಯ ಮಾಡ್ತಾರೆ ಎಂದು ಗುಡುಗಿದ ಅವರು, ಬಿಜೆಪಿಯವರು ಕುರ್ಚಿಗೆ ಬಡಿದಾಡುತ್ತಿದ್ದಾರೆ. ಆದರೆ ಸಾಮಾನ್ಯ ಜನರ ಕಷ್ಟ ವನ್ನು ಯಾರು ಕೇಳೊರಿಲ್ಲ ಎಂದರು.
ಈ ಸಂದರ್ಭದಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ, ಶಾಸಕರಾದ ಲಕ್ಷ್ಮಿ ಹೆಬ್ಬಾಳಕರ, ಅಂಜಲಿ ನಿಂಬಾಳಕರ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮಹಾದೇವ ಕೋಳಿ ಮತ್ತಿತರರು ಇದ್ದರು.
ಮಲಪ್ರಭಾ ನದಿಯ ಪ್ರವಾಹ ನಿಯಂತ್ರಣಕ್ಕಾಗಿ ಖಾನಾಪುರ ದಲ್ಲಿ ತಡೆಗೋಡೆ ನಿರ್ಮಾಣ ಮಾಡಲು ರಾಜ್ಯ ಸರ್ಕಾರದ ಮೇಲೆ ಒತ್ತಡ ಹಾಕಲಾಗುತ್ತದೆ ಎಂದು ಮಾಜಿ ಸಿಎಂ ಸಿದ್ಧರಾಮಯ್ಯ ಹೇಳಿದರು.
ಮಲಪ್ರಭಾ ನದಿಯ ಪ್ರವಾಹದಿಂದ ಬಹಳಷ್ಟು ಮನೆಗಳಿಗೆ ನೀರು ನುಗ್ಗಿ ಜನರಿಗೆ  ಸಮಸ್ಯೆ ಆಗಿದೆ. ಸಂತ್ರಸ್ತರಿಗೆ ಪರಿಹಾರ ನೀಡುವ ಕೆಲಸ ಮಾಡುವಂತೆ ಅಧಿಕಾರಿಗಳಿಗೆ ಸೂಚಿಸಲಾಗುತ್ತದೆ ಎಂದರು.

 

ರಾಜ್ಯದಲ್ಲಿ ಮಧ್ಯಂತರ ಚುನಾವಣೆ ಎದುರಾಗುತ್ತಾ ಎಂದು ಮಾಧ್ಯಮಗಳ ಪ್ರಶ್ನೆಗೆ ಅವರು, “ನಾನು‌ ಅವಧಿಗೂ ಮುನ್ನ ಚುನಾವಣೆ ಬರಲಿ ಅಂತಾ ಬಯಸಲ್ಲ” ಎಂದರು.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button