ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಕಾಂಗ್ರೆಸ್ ಭವನದಲ್ಲಿ ನಡೆದ 75ನೇ ಸ್ವಾತಂತ್ರ್ಯ ದಿನಾಚರಣೆ ಧ್ವಜಾರೋಹಣ ಕಾರ್ಯಕ್ರಮದ ವೇಳೆ ಮಾತನಾಡಿದ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ಥೇಟ್ ಮುಖ್ಯಮಂತ್ರಿಗಳ ಶೈಲಿಯಲ್ಲಿ ಲಿಖಿತ ರೂಪದಲ್ಲಿ ಭಾಷಣ ಓದಿ ಗಮನಸೆಳೆದಿದ್ದಾರೆ.
ಧ್ವಜಾರೋಹಣ ನೆರವೇರಿಸಿ ಮಾತನಾಡಿದ ಡಿ.ಕೆ.ಶಿವಕುಮಾರ್, ಇಂದು ಸ್ವಾತಂತ್ರ್ಯದ ಅಮೃತ ಮಹೋತ್ಸವ. ಸ್ವಾತಂತ್ರ್ಯ ಬಂದು 75 ವರ್ಷ ಕಳೆದಿದೆ. ಪ್ರತಿಯೊಬ್ಬ ನಾಗರಿಕನ ಕಣ್ಣೀರು ಒರೆಸಬೇಕಿದೆ. ಟೀಕೆ, ಟಿಪ್ಪಣಿಗಳು ಸಹಜ. ಅವುಗಳನ್ನು ಸವಾಲಾಗಿ ಸ್ವೀಕರಿಸಿ ಮೆಟ್ಟಿ ನಿಲ್ಲಬೇಕು. ದೇಶ ಕಟ್ಟುವ ವೇಳೆ ಟೀಕೆಗಳು ಎದುರಾದರೂ ಅವೆಲ್ಲವನ್ನೂ ಮೆಟ್ಟಿನಿಂತು ಹಿರಿಯರು ಸ್ವಾತಂತ್ರ್ಯಕ್ಕಾಗಿ ಹೋರಾಟ ನಡೆಸಿದರು. ಇಂದು ಧರ್ಮ ಜಾತಿ ಆಧಾರದ ಮೇಲೆ ಸ್ವಾತಂತ್ರ್ಯ ಹೋರಾಟ ಬಳಸಿಕೊಳ್ಳುತ್ತಿರುವುದು ದುರದೃಷ್ಟ. ಕಾಂಗ್ರೆಸ್ ಕಾರ್ಯಕರ್ತರು ಗ್ರಾಮ ಮಟ್ಟಗಳಲ್ಲಿ ಪಕ್ಷ ಸಂಘಟನೆಗಾಗಿ ಶ್ರಮಿಸಬೇಕು. ಮತ್ತೊಮ್ಮೆ ಪಕ್ಷವನ್ನು ಅಧಿಕಾರಕ್ಕೆ ತರಬೇಕು ಎಂದು ಕರೆ ಕೊಟ್ಟರು.
ಬಿಜೆಪಿ ನಾಯಕರು ಇಂದಿರಾ ಕ್ಯಾಂಟೀನ್ ಹೆಸರು ಬದಲಿಸುವ ಷಡ್ಯಂತ್ರ ನಡೆಸಿದ್ದಾರೆ. ಮತಿಗೇಡಿಗಳು ಮಾತ್ರ ಇಂತಹ ಕೆಲಸ ಮಾಡುತ್ತಾರೆ. ಕಾಂಗ್ರೆಸ್ ಕಟ್ಟುವ ಕೆಲಸ ಮಾಡಿದರೆ ಬಿಜೆಪಿ ಒಡೆಯುವ ಕೆಲಸ ಮಾಡುತ್ತಿದೆ. ಇದರ ವಿರುದ್ಧ ಧ್ವನಿ ಎತ್ತಬೇಕಿದೆ ಎಂದು ಹೇಳಿದರು.
ಭಾಷಣದ ವೇಳೆ ಮಾತನಾಡುವ ಭರದಲ್ಲಿ ಡಿ.ಕೆ.ಶಿವಕುಮಾರ್ ಹುತಾತ್ಮ ಇಂದಿರಾ ಗಾಂಧಿ ಎನ್ನುವ ಬದಲು ಸೋನಿಯಾ ಗಾಂಧಿ ಎಂದು ಹೇಳಿ ಎಡವಟ್ಟು ಮಾಡಿಕೊಂಡಿದ್ದು, ತಕ್ಷಣ ಕಾಂಗ್ರೆಸ್ ನಾಯಕರು ಎಚ್ಚರಿಸುತಿದ್ದಂತೆ ತಪ್ಪು ತಿದ್ದಿಕೊಂಡ ಪ್ರಸಂಗವೂ ನಡೆಯಿತು.
ಧ್ವಜಸ್ತಂಭ ನಿಲ್ಲಿಸುವ ವೇಳೆ ದುರಂತ; ವಿದ್ಯುತ್ ಸ್ಪರ್ಶಿಸಿ ಬಾಲಕ ದುರ್ಮರಣ
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ